ಔಷಧ ಸಿಗುವವರೆಗೆ ಮೈಮರೆಯಬೇಡಿ| ಮಾಸ್ಕ್‌ ಧರಿಸಿ, ಸಾಮಾಜಿಕ ಅಂತರ ಕಾಪಾಡಿ| ದೇಶವಾಸಿಗಳಿಗೆ ಪ್ರಧಾನಿ ಮೋದಿ ಸಂದೇಶ

ಭೋಪಾಲ್(ಸೆ.13): ಕೊರೋನಾ ಸೋಂಕು ತಡೆಗಟ್ಟಲು ಸಾರ್ವಜನಿಕ ಸ್ಥಳದಲ್ಲಿ ಮಾಸ್ಕ್‌ ಧರಿಸುವುದು ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳುವುದು ಅತ್ಯಗತ್ಯ ಎಂದು ಕೊರೋನಾ ಯುಗದ ಆರಂಭದಿಂದಲೂ ಹೇಳಿಕೊಂಡು ಬಂದಿರುವ ಪ್ರಧಾನಿ ನರೇಂದ್ರ ಮೋದಿ, ಶನಿವಾರ ಮತ್ತೊಮ್ಮೆ ದೇಶವಾಸಿಗಳಲ್ಲಿ ಅಂಥದ್ದೇ ಮನವಿ ಮಾಡಿಕೊಂಡಿದ್ದಾರೆ. ಕೊರೋನಾ ಸೋಂಕಿಗೆ ಲಸಿಕೆ ಸಿಗುವವರೆಗೂ ಆ ಕುರಿತು ನಿರ್ಲಕ್ಷ್ಯ ಮಾಡಬೇಡಿ ಎಂದು ಅವರು ಕರೆ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ಮಧ್ಯ ಪ್ರದೇಶದ ಗ್ರಾಮೀಣ ಭಾಗದಲ್ಲಿ ನಿರ್ಮಿಸಿದ 1.75 ಲಕ್ಷ ಮನೆಗಳನ್ನು ವರ್ಚುಚಲ್‌ ಸಮಾರಂಭದ ಮೂಲಕ ಉದ್ಘಾಟಿಸಿ ಮಾತನಾಡಿದ ಮೋದಿ, ಕೊರೋನಾ ವಿರುದ್ಧದ ಹೋರಾಟಕ್ಕೆ ಹಿಂದಿಯಲ್ಲಿ ಘೋಷಣೆಯೊಂದನ್ನು ಪ್ರಕಟಿಸಿದರು. ‘ಜಬ್‌ ತಕ್‌ ದವಾಯಿ ನಹಿ, ತಬ್‌ ತಕ್‌ ಧಿಲಾಯಿ ನಹೀ (ಔಷಧಿ ಕಂಡುಹಿಡಿಯುವರೆಗೂ ನಿರ್ಲಕ್ಷ್ಯ ಬೇಡ). ಮಾಸ್ಕ್‌ ಧರಿಸುವುದು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಅತ್ಯಂತ ಅಗತ್ಯ ಎಂದು ಹೇಳಿದ್ದಾರೆ.

ದೇಶದಲ್ಲಿ ಕಳೆದ ಕೆಲ ದಿನಗಳಿಂದ ನಿತ್ಯವೂ 1ಲಕ್ಷದ ಆಸುಪಾಸಿನಲ್ಲಿ ಹೊಸ ಕೇಸು ದಾಖಲಾಗಿ, ಒಟ್ಟಾರೆ ಸೋಂಕಿತರ ಸಂಖ್ಯೆ 50 ಲಕ್ಷ ಗಡಿಗೆ ಸಮೀಪಿಸುತ್ತಿರುವಾಗಲೇ ಪ್ರಧಾನಿ ಮೋದಿ ನೀಡಿದ ಹೇಳಿಕೆ ಮಹತ್ವ ಪಡೆದುಕೊಂಡಿದೆ. ಅಲ್ಲದೆ ಹಂತಹಂತವಾಗಿ ಲಾಕ್ಡೌನ್‌ ತೆರವಾಗುತ್ತಲೇ, ಜನಸಾಮಾನ್ಯರು ಮಾಸ್ಕ್‌ ಧರಿಸದೇ ತಿರುಗಾಡುತ್ತಿರುವ ಮತ್ತು ಸಾಮಾಜಿಕ ಅಂತರ ಕಾಪಾಡಿಕೊಳ್ಳದೇ ಹೊಸ ಪ್ರಕರಣಗಳು ಹೆಚ್ಚಲು ಕಾರಣವಾಗುತ್ತಿದ್ದಾರೆ ಎಂಬ ವರದಿಗಳ ಬೆನ್ನಲ್ಲೇ ಅವರಿಂದ ಇಂಥ ಹೇಳಿಕೆ ಹೊರಬಿದ್ದಿದೆ.