* ಅಗ್ನಿಪಥ ಯೋಜನೆಗೆ ಭಾರೀ ವಿರೋಧ* ಬಿಹಾರಕ್ಕೆ ಬೆಂಕಿ ಬಿದ್ದಾಗ ಬಿಜೆಪಿ-ಜೆಡಿಯು ಜಗಳ* ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌ ಆಕ್ರೋಶ

ನವದೆಹಲಿ(ಜೂ.20): ಕೇಂದ್ರ ಅಗ್ನಿಪಥ ಯೋಜನೆಯನ್ನು ವಿರೋಧಿಸಿ ಬಿಹಾರ ಹೊತ್ತಿ ಉರಿಯುತ್ತಿರುವಾಗ, ಮೈತ್ರಿ ಮಾಡಿಕೊಂಡು ಅಧಿಕಾರದಲ್ಲಿರುವ ಬಿಜೆಪಿ ಹಾಗೂ ಮುಖ್ಯಮಂತ್ರಿ ನಿತೀಶ್‌ ಕುಮಾರ್‌ ಅವರ ಜೆಡಿಯು ಪಕ್ಷಗಳ ಜಟಾಪಟಿ ಮುಂದುವರೆದಿದೆ ಎಂದು ಚುನಾವಣಾ ತಂತ್ರಗಾರ ಪ್ರಶಾಂತ್‌ ಕಿಶೋರ್‌ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

‘ಅಗ್ನಿಪಥವನ್ನು ವಿರೋಧಿಸಿ ಆಂದೋಲನವಾಗಬೇಕೆ ಹೊರತು ಹಿಂಸೆ ಅಥವಾ ವಿಧ್ವಂಸಕ ಕೃತ್ಯಗಳು ನಡೆಸಬಾರದು. ಬಿಜೆಪಿ ಹಾಗೂ ಜೆಡಿಯು ನಡುವಿನ ಜಟಾಪಟಿಯ ಬೆಂಕಿಯಿಂದಾಗಿ ಬಿಹಾರದ ಜನರು ಉರಿಯುತ್ತಿದ್ದಾರೆ. ಬಿಹಾರ ಉರಿಯುತ್ತಿರುವಾಗಲೂ ಸಮಸ್ಯೆಯನ್ನು ಪರಿಹಾರ ಮಾಡುವ ಬದಲು ಎರಡೂ ಪಕ್ಷಗಳ ನಾಯಕರು ಪರಸ್ಪರ ವಾಗ್ದಾಳಿ ನಡೆಸುವಲ್ಲಿ ನಿರತರಾಗಿದ್ದಾರೆ’ ಎಂದು ಕಿಶೋರ್‌ ಟ್ವೀಟ್‌ ಮಾಡಿದ್ದಾರೆ.

ಅಗ್ನಿಪಥ ಪ್ರತಿಭಟನಾಕಾರರು ಬಿಹಾರದ ಬಿಜೆಪಿ ಮುಖ್ಯಸ್ಥನ ಮನೆ ಮೇಲೆ ದಾಳಿ ಮಾಡಿದ್ದರು. ಉಪ ಮುಖ್ಯಮಂತ್ರಿ ರೇಣು ದೇವಿಯವರ ಮನೆ ಸೇರಿದಂತೆ ಹಲವಾರು ಬಿಜೆಪಿ ಕಚೇರಿ ಮೇಲೆ ದಾಳಿ ನಡೆದಿದ್ದವು. ಈ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ನಿತೀಶ್‌ ಕುಮಾರ್‌ ಸರ್ಕಾರ ಹಿಂಸಾತ್ಮಕ ಪ್ರತಿಭಟನೆ ನಿಯಂತ್ರಿಸಲು ಅಗತ್ಯ ಕ್ರಮ ಕೈಗೊಳ್ಳಲು ವಿಫಲವಾಗಿದೆ ಎಂದು ಕಿಡಿಕಾರಿದ್ದರು.

ಇದಕ್ಕೆ ಜೆಡಿಯು ಸಚಿವ ರಾಜೀವ್‌ ರಂಜನ್‌, ‘ಬಿಜೆಪಿ ಮೊದಲು ಯುವಕರ ಸಮಸ್ಯೆ ಬಗ್ಗೆ ಅರಿಯುವ ಕಾಳಜಿ ತೋರಲಿ’ ಎಂದು ತಿರುಗೇಟು ನೀಡಿದ್ದರು.