ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್‌ ನಡೆಸಿದ್ದಾರೆ ಎಂಬ ಆರೋಪ ಮಾಡಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಜೆಪಿ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. 

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್‌ ನಡೆಸಿದ್ದಾರೆ ಎಂಬ ಆರೋಪ ಮಾಡಿದ್ದ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಬಿಜೆಪಿ ಕೇಂದ್ರ ಚುನಾವಣಾ ಆಯೋಗಕ್ಕೆ ಮನವಿ ಮಾಡಿದೆ. ರಾಹುಲ್‌ ಮಾಡಿದ ಆರೋಪ ನೀತಿ ಸಂಹಿತೆ ಉಲ್ಲಂಘನೆ ಅಲ್ಲದೇ ಇರಬಹುದು. ಆದರೆ ಅದು ಗಂಭೀರ ಪರಿಣಾಮಗಳನ್ನು ಹೊಂದಿದೆ ಎಂದು ಕೇಂದ್ರ ಸಚಿವ ಹರದೀಪ್‌ ಸಿಂಗ್‌ ಪುರಿ ನೇತೃತ್ವ ಬಿಜೆಪಿ ನಿಯೋಗ ಚುನಾವಣಾ ಆಯೋಗಕ್ಕೆ ಸಲ್ಲಿಸಿದ ಮನವಿಯಲ್ಲಿ ಪ್ರಸ್ತಾಪಿಸಿದೆ.

Add Asianetnews Kannada as a Preferred SourcegooglePreferred

ಭಾನುವಾರ ನವದೆಹಲಿಯಲ್ಲಿ ನಡೆದ ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಮಾತನಾಡಿದ್ದ ರಾಹುಲ್‌ ಈ ಬಾರಿಯ ಚುನಾವಣೆ ಫಿಕ್ಸ್‌ ಆಗಿದೆ. ತಮಗೆ ಬೇಕಾದವರನ್ನೇ ಮೋದಿ ಅಧಿಕಾರಿಗಳಾಗಿ ನೇಮಿಸಿಕೊಂಡಿದ್ದಾರೆ. ಅಂಪೈರ್‌ಗಳನ್ನೂ ಫಿಕ್ಸ್‌ ಮಾಡಲಾಗಿದೆ. ಪಂದ್ಯಕ್ಕೂ ಮುನ್ನವೇ ನಮ್ಮ ಇಬ್ಬರು ಆಟಗಾರರನ್ನು ಬಂಧಿಸಲಾಗಿದೆ. ಇವಿಎಂ, ಮ್ಯಾಚ್‌ಫಿಕ್ಸಿಂಗ್‌ ಇಲ್ಲದೇ ಬಿಜೆಪಿ 180 ಸೀಟು ಕೂಡಾ ಗೆಲ್ಲಲಾಗದು ಎಂದಿದ್ದರು.

ಕೀಳು ಹೇಳಿಕೆ: ಬಿಜೆಪಿಯ ಘೋಷ್‌, ಕಾಂಗ್ರೆಸಿನ ಸುಪ್ರಿಯಾಗೆ ಛೀಮಾರಿ

ನವದೆಹಲಿ: ಚುನಾವಣಾ ಪ್ರಚಾರದ ವೇಳೆ ಕೀಳು ಹೇಳಿಕೆ ನೀಡಿದ್ದ ಬಿಜೆಪಿ ನಾಯಕ ದಿಲೀಪ್‌ ಘೋಷ್‌ ಮತ್ತು ಕಾಂಗ್ರೆಸ್‌ ನಾಯಕಿ ಸುಪ್ರೀಯಾ ಶ್ರೀನೇತ್‌ಗೆ ಚುನಾವಣಾ ಆಯೋಗ ಛೀಮಾರಿ ಹಾಕಿದೆ. ಅಲ್ಲದೆ ಮುಂದಿನ ದಿನಗಳಲ್ಲಿ ಇಂಥ ಹೇಳಿಕೆ ನೀಡದಂತೆ ಎಚ್ಚರಿಕೆ ನೀಡಿದೆ. ಜೊತೆಗೆ ಮುಂದಿನ ದಿನಗಳಲ್ಲಿ ಇಬ್ಬರ ಹೇಳಿಕೆಗಳ ಮೇಲೂ ನಿಗಾ ಇಡುವುದಾಗಿ ಎಚ್ಚರಿಸಿದೆ. ಅಲ್ಲದೆ ಹೇಳಿಕೆ ಸಂಬಂಧ ಎರಡೂ ಪಕ್ಷಗಳ ಅಧ್ಯಕ್ಷರಿಗೆ ನೋಟಿಸ್‌ ನೀಡಲಾಗಿದ್ದು ತಮ್ಮ ಅಭ್ಯರ್ಥಿಗಳು ಸಾರ್ವಜನಿಕ ಸಭೆಗಳಲ್ಲಿ ಮಾತನಾಡುವಾಗ ಜಾಗರೂಕತೆಯಿಂದ ಇರಲು ಸೂಚಿಸಿದೆ.

18ನೇ ಲೋಕಸಭೆಗೆ ಏಪ್ರಿಲ್‌ 19 ರಿಂದ ಜೂನ್‌ 1 ರವರೆಗೆ ದೇಶಾದ್ಯಂತ ಒಟ್ಟು ಏಳು ಹಂತಗಳಲ್ಲಿ ಚುನಾವಣೆ ನಡೆಯಲಿದ್ದು, ಉತ್ತರ ಹಾಗೂ ದಕ್ಷಿಣ ಕರ್ನಾಟಕದಲ್ಲಿ ಎರಡು ಹಂತಗಳಲ್ಲಿ ಚುನಾವಣೆ ನಡೆಯಲಿದೆ. ಮೊದಲ ಹಂತ ಏಪ್ರಿಲ್‌ 26 (ಚಿತ್ರದುರ್ಗ, ಉಡುಪಿ-ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮಾಂತರ ಹಾಗೂ ಬೆಂಗಳೂರು ಸೆಂಟ್ರಲ್​), 2ನೇ ಹಂತದ ಚುನಾವಣೆ ಮೇ 7 (ಶಿವಮೊಗ್ಗ, ದಾವಣಗೆರೆ, ಹಾವೇರಿ, ಉತ್ತರ ಕನ್ನಡ, ಬಳ್ಳಾರಿ, ಧಾರವಾಡ, ಕೊಪ್ಪಳ, ಬೆಳಗಾವಿ, ಚಿಕ್ಕೋಡಿ, ಬಾಗಲಕೋಟೆ, ರಾಯಚೂರು, ಬಿಜಾಪುರ ಕಲಬುರಗಿ ಮತ್ತು ಬೀದರ್‌) ರಂದು ನಡೆಯಲಿದೆ. ಫಲಿತಾಂಶ ಜೂನ್‌ 4ಕ್ಕೆ ಪ್ರಕಟವಾಗಲಿದೆ.