ಸಂಸತ್ತಲ್ಲಿ ಪೆಟ್ರೋಲ್ ಗದ್ದಲ: ಸತತ 2ನೇ ದಿನ ಕಲಾಪ ಬಲಿ!
ಸಂಸತ್ತಲ್ಲಿ ಪೆಟ್ರೋಲ್ ಗದ್ದಲ| ತೈಲ ಬೆಲೆ ಇಳಿಕೆಗೆ ಆಗ್ರಹಿಸಿ ವಿಪಕ್ಷ ಪ್ರತಿಭಟನೆ| ಸತತ 2ನೇ ದಿನ ಕಲಾಪ ಬಲಿ
ನವದೆಹಲಿ(ಮಾ. 10): ಕಳೆದ ಕೆಲವು ತಿಂಗಳುಗಳಿಂದ ಭಾರಿ ಪ್ರಮಾಣದಲ್ಲಿ ಏರಿಕೆಯಾಗಿರುವ ತೈಲ ಬೆಲೆಗಳನ್ನು ಇಳಿಕೆ ಮಾಡಬೇಕು ಎಂದು ಪ್ರತಿಪಕ್ಷಗಳು ಸಂಸತ್ತಿನ ಉಭಯ ಸದನಗಳಲ್ಲೂ ಮಂಗಳವಾರ ಪ್ರತಿಭಟನೆ ನಡೆಸಿವೆ. ಹೀಗಾಗಿ ಎರಡೂ ಸದನಗಳ ಕಲಾಪ ಬಲಿಯಾಗಿದೆ.
ಬೆಲೆ ಏರಿಕೆ ವಿರುದ್ಧ ಲೋಕಸಭೆಯಲ್ಲಿ ಸದಸ್ಯರು ಪ್ರತಿಭಟನೆ ನಡೆಸಿದರು. ಹೀಗಾಗಿ ಕಲಾಪವನ್ನು ಮಧ್ಯಾಹ್ನ 2ಕ್ಕೆ ಮುಂದೂಡಲಾಯಿತು. ಮತ್ತೆ ಸದನ ಸಮಾವೇಶಗೊಂಡಾಗ ಕಾಂಗ್ರೆಸ್ ಸದಸ್ಯರು ಸದನದ ಬಾವಿಗೆ ಇಳಿದು ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು. ಗದ್ದಲ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಸಭಾಧ್ಯಕ್ಷರ ಸ್ಥಾನದಲ್ಲಿದ್ದ ರಾಜೇಂದ್ರ ಆಗ್ರಾವಾಲ್ ಅವರು ಕಲಾಪವನ್ನು ಬುಧವಾರಕ್ಕೆ ಮುಂದೂಡಿದರು.
ರಾಜ್ಯಸಭೆಯಲ್ಲೂ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳು ಪ್ರತಿಭಟನೆ ನಡೆಸಿದವು. ಮೊದಲು ಬೆಳಗ್ಗೆ 11.20ಕ್ಕೆ, ನಂತರ ಮಧ್ಯಾಹ್ನ 2ಕ್ಕೆ ಕಲಾಪವನ್ನು ಮುಂದೂಡಲಾಯಿತು. ತೈಲ ಬೆಲೆ ಏರಿಕೆ ಕುರಿತು ಚರ್ಚೆಯಾಗಬೇಕು ಎಂದು ರಾಜ್ಯಸಭೆ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ಕಾಂಗ್ರೆಸ್ಸಿಗರು ಪ್ರತಿಭಟನೆ ನಡೆಸಿದರು. ಪರಿಸ್ಥಿತಿ ನಿಯಂತ್ರಣಕ್ಕೆ ಬಾರದ ಕಾರಣ ಕಲಾಪವನ್ನು ಬುಧವಾರಕ್ಕೆ ಮುಂದೂಡಿಕೆ ಮಾಡಲಾಯಿತು.