ಲೋಕಸಭಾ ಚುನಾವಣೆ ದಿನಾಂಕ ಘೋಷಣೆಗೆ ಕೆಲವೇ ದಿನ ಮಾತ್ರ ಬಾಕಿ. ಇದರ ಬೆನ್ನಲ್ಲೇ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ ಬ್ಲಾಕ್ ಮಾಡಿದೆ. ಈ ಕುರಿತು ಎಐಸಿಸಿ ಖಜಾಂಚಿ ಅಜಯ್ ಮಾಕನ್ ಗಂಭೀರ ಆರೋಪ ಮಾಡಿದ್ದಾರೆ.ಕಾಂಗ್ರೆಸ್ ಬ್ಯಾಂಕ್ ಖಾತೆ ಫ್ರೀಜ್ ಮಾಡಿದ್ದು, ಪ್ರಜಾಪ್ರಭುತ್ವವನ್ನೇ ಫ್ರೀಜ್ ಮಾಡಿದಂತೆ ಎಂದು ಆರೋಪಿಸಿದ್ದಾರೆ. 

ನವದೆಹಲಿ(ಫೆ.16) ಲೋಕಸಭಾ ಚುನಾವವಣೆಗೆ ತಿಂಗಳು ಮಾತ್ರ ಬಾಕಿ. ಚುನಾವಣಾ ದಿನಾಂಕ ಘೋಷಣೆಗೆ ಕೇವಲ 2 ವಾರ ಬಾಕಿ ಇದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ಪಕ್ಷದ ಬ್ಯಾಂಕ್ ಖಾತೆಗಳನ್ನು ಆದಾಯ ತೆರಿಗೆ ಇಲಾಖೆ ಫ್ರೀಜ್ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ. ದೆಹಲಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಎಐಸಿಸಿ ಖಜಾಂಚಿ ಅಜಯ್ ಮಾಕನ್, ಬಿಜೆಪಿ ಸರ್ಕಾರದ ವಿರುದ್ದ ಆರೋಪ ಮಾಡಿದೆ. ಲೋಕಸಭಾ ಚುನಾವಣೆ ಬೆನ್ನಲ್ಲೇ ರಾಜಕೀಯ ಉದ್ದೇಶಕ್ಕಾಗಿ ಬಿಜೆಪಿ ಸರ್ಕಾರ ಈ ಷಡ್ಯಂತ್ರ ಮಾಡಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

Add Asianetnews Kannada as a Preferred SourcegooglePreferred

ಯೂತ್ ಕಾಂಗ್ರೆಸ್ ಮತ್ತು ಕಾಂಗ್ರೆಸ್ ಪಕ್ಷ 210 ಕೋಟಿ ರೂಪಾಯಿ ತೆರಿಗೆ ಪಾವತಿ ಬಾಕಿ ಉಳಿಸಿದೆ. ತಕ್ಷಣ ಈ ತೆರಿಗೆ ಪಾವತಿಸುವಂತೆ ಆದಾಯ ತೆರಿಗೆ ಸೂಚಿಸಿದೆ. ಇದಕ್ಕಾಗಿ ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್ ಬ್ಯಾಂಕ್ ಖಾತೆಗಳನ್ನು ಫ್ರೀಜ್ ಮಾಡಲಾಗಿದೆ. ಇದೀಗ ಬ್ಯಾಂಕ್‌ಗಳು ಚೆಕ್ ಸ್ವೀಕರಿಸುತ್ತಿಲ್ಲ. ನಮ್ಮ ಬ್ಯಾಂಕ್ ಖಾತೆಗಳು ಸ್ಥಗಿತಗೊಳಿಸಲಾಗಿದೆ ಎಂದು ಮಾಕೆನ್ ಆರೋಪಿಸಿದ್ದಾರೆ.

2022-23ರಲ್ಲಿ ಚುನಾವಣಾ ಬಾಂಡ್ ಮೂಲಕ ಬಿಜೆಪಿ-ಕಾಂಗ್ರೆಸ್ ಪಡೆದ ದೇಣಿಗೆ ಎಷ್ಟು?

ಕಾಂಗ್ರೆಸ್ ಕ್ರೌಡ್ ಫಂಡಿಂಗ್ ಮೂಲಕ ಹಣ ಕ್ರೋಢಿಕರಿಸಿದೆ. ಇದು ಸಾರ್ವಜನಿಕವಾಗಿ, ಪಾರದರ್ಶಕವಾಗಿ ಆರಂಭಿಸಿದ ದೇಣಿಗೆ ಸಂಗ್ರಹವಾಗಿದೆ. ಆದರೆ ಕೇಂದ್ರ ಬಿಜೆಪಿ ಸರ್ಕಾರ ರಾಜಕೀಯ ದುರುದ್ದೇಶದಿಂದ ಕಾಂಗ್ರೆಸ್ ಬ್ಯಾಂಕ್ ಖಾತೆ ಸ್ಥಗತಿಗೊಳಿಸಿದೆ. ಸಾರ್ವತ್ರಿಕ ಚುನಾವಣೆಗೆ ಕೇವಲ 2 ವಾರಗಳ ಮೊದಲು ಪ್ರತಿಪಕ್ಷಗಳ ಖಾತೆಗಳನ್ನು ಸ್ಥಗಿತಗೊಳಿಸಿದರೆ ಇದು ಪ್ರಜಾಪ್ರಭುತ್ವವನ್ನು ಫ್ರೀಜ್ ಮಾಡುವುದಕ್ಕೆ ಸಮಾನವಾಗಿದೆ ಎಂದು ಕಾಂಗ್ರೆಸ್ ಆರೋಪಿಸಿದೆ.

ಅಧಿಕಾರದಾಹ ಮೋದಿ ಸರ್ಕಾರವು ಲೋಕಸಭೆ ಚುನಾವಣೆಗೆ ಮುನ್ನ ದೇಶದ ಅತಿದೊಡ್ಡ ವಿರೋಧ ಪಕ್ಷವಾದ ಭಾರತೀಯ ರಾಷ್ಟ್ರೀಯ ಕಾಂಗ್ರೆಸ್‌ನ ಖಾತೆಗಳನ್ನು ಸ್ಥಗಿತಗೊಳಿಸಿದೆ. ಇದು ಭಾರತದ ಪ್ರಜಾಪ್ರಭುತ್ವದ ಮೇಲಿನ ಆಕ್ರಮಣ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ. ಬಿಜೆಪಿಯವರು ಸಂಗ್ರಹಿಸಿದ ಅಸಂವಿಧಾನಿಕ ಹಣವನ್ನು ಅವರು ಚುನಾವಣೆಗೆ ಬಳಸುತ್ತಾರೆ, ಆದರೆ ನಾವು ಕ್ರೌಡ್‌ಫಂಡಿಂಗ್ ಮೂಲಕ ಸಂಗ್ರಹಿಸಿದ ಹಣವನ್ನು ಸೀಲ್ ಮಾಡಲಾಗುತ್ತದೆ ಎಂದು ಬಿಜೆಪಿ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಎಸ್ಸಿ ಎಸ್ಟಿ ಸಮುದಾಯಕ್ಕೆ ಕಾಂಗ್ರೆಸ್ಸಿನಿಂದ ಮೋಸ: ಕೇಂದ್ರ ಸಚಿವ ಪ್ರಲ್ಹಾದ್‌ ಜೋಶಿ

ಈ ದೇಶದಲ್ಲಿ ಬಹು-ಪಕ್ಷ ವ್ಯವಸ್ಥೆಯನ್ನು ಉಳಿಸಲು ಮತ್ತು ಭಾರತದ ಪ್ರಜಾಪ್ರಭುತ್ವವನ್ನು ರಕ್ಷಿಸಲು ನಾವು ನ್ಯಾಯಾಂಗಕ್ಕೆ ಮನವಿ ಮಾಡುತ್ತೇವೆ. ಈ ನಿರಂಕುಶ ಪ್ರಭುತ್ವದ ವಿರುದ್ಧ ನಾವು ಬೀದಿಗಿಳಿದು ಬಲವಾಗಿ ಹೋರಾಡುತ್ತೇವೆ ಎಂದು ಕಾಂಗ್ರೆಸ್ ಇದೀಗ ಕೇಂದ್ರ ಸರ್ಕಾರದ ವಿರುದ್ಧ ಹೋರಾಟ ಆರಂಭಿಸಿದೆ.