ದೇಶದ ಪ್ರಮುಖ ರೈಲ್ವೆ ನಿಲ್ದಾಣಗಳಲ್ಲಿ ಒದಗಿಸಲಾಗುವ ಕುಡಿಯುವ ನೀರಿನಲ್ಲಿ ಅಪಾಯಕಾರಿ ಇ. ಕೋಲೈ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂದು ಸಿಎಜಿ ವರದಿ ಬಹಿರಂಗಪಡಿಸಿದೆ. ಈ ಕಲುಷಿತ ನೀರಿನ ಸೇವನೆಯು ಫುಡ್ ಪಾಯಿಸನಿಂಗ್, ಭೇದಿ ಮತ್ತು ಮೂತ್ರಪಿಂಡ ವೈಫಲ್ಯದಂತಹ ಗಂಭೀರ ಆರೋಗ್ಯ ಸಮಸ್ಯೆಗಳಿಗೆ ಕಾರಣವಾಗಬಹುದು.
ನವದೆಹಲಿ: ಬೆಂಗಳೂರು, ಮುಂಬೈ ಸೇರಿದಂತೆ ದೇಶದ ವಿವಿಧ ನಗರಗಳ ಹೋಟೆಲ್, ರೆಸ್ಟೋರೆಂಟ್, ಬೇಕರಿಗಳ ಮೇಲೆ ನಡೆದ ದಾಳಿ ವೇಳೆ ಕೊಳಕು ಆಹಾರ, ಮಾಂಸ, ತರಕಾರಿ ಪದಾರ್ಥಗಳು ಪತ್ತೆಯಾಗಿ ಆತಂಕ ಸೃಷ್ಟಿಯಾದ ಬೆನ್ನಲ್ಲೇ ದೇಶದ ವಿವಿಧ ರೈಲ್ವೆ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಒದಗಿಸಲಾಗುವ ಕುಡಿಯುವ ನೀರಿನಲ್ಲಿ ಅಪಾಯಕಾರಿ ಇ. ಕೋಲೈ ಬ್ಯಾಕ್ಟೀರಿಯಾ ಪತ್ತೆಯಾಗಿದೆ ಎಂಬ ಆಘಾತಕಾರಿ ಅಂಶ ಬೆಳಕಿಗೆ ಬಂದಿದೆ.
ಈ ವಿಷಯ ಬೆಳಕಿಗೆ ಬಂದ ಬೆನ್ನಲ್ಲೇ ಎಚ್ಚೆತ್ತುಕೊಂಡಿರುವ ರೈಲ್ವೆ ಖಾತೆ ಸಚಿವ ಅಶ್ವಿನ್ ವೈಷ್ಣವ್ ಹಿರಿಯ ಅಧಿಕಾರಿಗಳೊಂದಿಗೆ ತುರ್ತು ಸಭೆ ನಡೆಸಿ 20,000 ಕೇಂದ್ರಗಳಲ್ಲಿ ವಾಟರ್ ಕೂಲರ್ಗಳು ಮತ್ತು ಮೇಲ್ವಿಚಾರಣಾ ವ್ಯವಸ್ಥೆಯನ್ನು ಅಳವಡಿಸಲು ಸೂಚಿಸಿದ್ದಾರೆ.
ಬ್ಯಾಕ್ಟೀರಿಯಾ ಪತ್ತೆ:
ಕೊಯಮತ್ತೂರು, ಪಾಲಕ್ಕಾಡ್, ಹೈದರಾಬಾದ್, ಮುಂಬೈ ಸಿಎಸ್ಎಂಟಿ, ಕಲ್ಯಾಣ್, ಲೋನಾವಲಾ ಹಾಗೂ ಮಧುಪುರ ನಿಲ್ದಾಣಗಳ ಕುಡಿಯುವ ನೀರಿನಲ್ಲಿ ಈ ಬ್ಯಾಕ್ಟೀರಿಯಾ ಕಂಡುಬಂದಿದೆ. ಇಂತಹ ಕಲುಷಿತ ನೀರನ್ನು ಸೇವಿಸುವುದರಿಂದ ಫುಡ್ ಪಾಯಿಸನಿಂಗ್, ಭೇದಿ ಮತ್ತು ಮೂತ್ರಪಿಂಡ ವೈಫಲ್ಯದಂತಹ ತೀವ್ರ ಆರೋಗ್ಯ ಸಮಸ್ಯೆಗಳು ಎದುರಾಗುವ ಸಾಧ್ಯತೆಯಿದೆ ಎಂದು ಎಂದು ಮಹಾಲೇಖಪಾಲರ (ಸಿಎಜಿ) ಕಚೇರಿ ತನ್ನ ಇತ್ತೀಚಿನ ವರದಿಯಲ್ಲಿ ಆತಂಕ ವ್ಯಕ್ತಪಡಿಸಿದೆ.


