Darjeeling Floods Kill 23 After 300mm Rain in 12 Hours  ಪಶ್ಚಿಮ ಬಂಗಾಳದ ಡಾರ್ಜೀಲಿಂಗ್‌ನಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಮತ್ತು ಪ್ರವಾಹ ಉಂಟಾಗಿದ್ದು, ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿದೆ.

ಡಾರ್ಜೀಲಿಂಗ್ (ಪಶ್ಚಿಮ ಬಂಗಾಳ): ಪಶ್ಚಿಮ ಬಂಗಾಳದ ಡಾರ್ಜೀಲಿಂಗ್ ಬೆಟ್ಟಗಳಲ್ಲಿ ಭಾನುವಾರ ಸುರಿದ ಧಾರಾಕಾರ ಮಳೆಯಿಂದಾಗಿ ಹಲವೆಡೆ ಭೂಕುಸಿತ ಸಂಭವಿಸಿದ್ದು, ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದೆ. ಮಳೆ ಅವಾಂತರದಿಂದಾಗಿ ಮಕ್ಕಳು ಸೇರಿದಂತೆ ಕನಿಷ್ಠ 23 ಮಂದಿ ಸಾವನ್ನಪ್ಪಿದ್ದು, ಅನೇಕರು ಗಾಯಗೊಂಡ ದಾರುಣ ಘಟನೆ ನಡೆದಿದೆ.

ಕೇವಲ 12 ಗಂಟೆ ಅವಧಿಯಲ್ಲಿ 300 ಮಿ.ಮೀ.ಗೂ ಅಧಿಕ ಮಳೆಯಾಗಿದೆ. ಸರ್ಸಾಲಿ, ಜಸ್ಟಿರ್ಗಾಂ, ಮಿರಿಕ್ ಬಸ್ತಿ, ಧಾರ್ ಗಾವ್ (ಮೆಚಿ) ಮತ್ತು ಮಿರಿಕ್ ಸರೋವರ ಪ್ರದೇಶ ಸೇರಿದಂತೆ ಹಲವು ಸ್ಥಳಗಳಲ್ಲಿ ಸಾವುನೋವು ವರದಿಯಾಗಿದೆ. ಮಿರಿಕ್ ಮತ್ತು ಸುಖಿಯಾ ಪೋಖರಿ ಮೊದಲಾದೆಡೆ ಭೂಕುಸಿತವುಂಟಾಗಿದೆ. ಬಂಗಾಳ-ಸಿಕ್ಕಿಂ, ಡಾರ್ಜೀಲಿಂಗ್ -ಸಿಲಿಗುರಿ ಸೇರಿದಂತೆ ಪ್ರಮುಖ ಮಾರ್ಗ ಗಳಲ್ಲಿ ಭೂಕುಸಿತಸಂಭವಿಸಿದ್ದು, ರಸ್ತೆ ತಡೆಗೆ ಕಾರಣವಾಗಿದೆ. ಮಳೆ ಭೀಕರತೆಗೆ ಹಲವಾರು ಮನೆಗಳು ಕೊಚ್ಚಿಹೋಗಿದ್ದು, ದೂರದ ಹಳ್ಳಿಗಳ ಸಂಪರ್ಕ ಕಡಿತಗೊಂಡಿದೆ.

ರಕ್ಷಣಾ ಕಾರ್ಯ, ಮುನ್ನೆಚ್ಚರಿಕೆ: ಪೊಲೀಸರು, ವಿಪತ್ತು ನಿರ್ವಹಣಾ ತಂಡ ಮತ್ತು ಸ್ಥಳೀಯ ಆಡಳಿತ ಸಂತ್ರಸ್ತರ ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ. ನಾಗರಕಟಾದ ಧಾರ್‌ಗಾಂವ್‌ನಲ್ಲಿ ಭೂಕುಸಿತದಿಂದಾಗಿ ನೆಲಸಮವಾದ ಮನೆಗಳ ಅವಶೇಷಗಳಡಿಯಿಂದ ಕನಿಷ್ಠ 40 ಜನರನ್ನು ರಕ್ಷಿಸಲಾಗಿದೆ. ಅಹಿತಕರ ಘಟನೆಗಳನ್ನು ತಡೆಗಟ್ಟುವ ಸಲುವಾಗಿ, ಗೂರ್ಖಾಲ್ಯಾಂಡ್ ಪ್ರಾದೇಶಿಕ ಆಡಳಿತವು ಡಾರ್ಜೀಲಿಂಗ್‌ನ ಟೈಗ‌ರ್ಹಿಲ್ ಮತ್ತು ರಾಕ್ ಗಾರ್ಡನ್ ಸೇರಿದಂತೆ ಪ್ರವಾಸಿ ತಾಣಗಳನ್ನು ಮುಚ್ಚಲು ನಿರ್ಧರಿಸಿದೆ. ರೈಲು ಸೇವೆಗಳನ್ನು ಸಹ ಸ್ಥಗಿತಗೊಳಿಸಲಾಗಿದೆ. ಸೋಮವಾರದವರೆಗೂ ಅತಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ರೆಡ್ ಅಲರ್ಟ್ ಘೋಷಿಸಿದೆ. ಸ್ಥಳೀಯರು ಮತ್ತು ಪ್ರವಾಸಿಗರಿಗಾಗಿ 9147889078 ಸಹಾಯವಾಣಿ ಆರಂಭಿಸಲಾಗಿದೆ.

ಇಂದು ಸಿಎಂ ಮಮತಾ ಭೇಟಿ : ಪರಿಸ್ಥಿತಿ ವೀಕ್ಷಣೆಗೆ ಸಿಎಂ ಮಮತಾ ಬ್ಯಾನರ್ಜಿ ಭೇಟಿ ನೀಡಲಿದ್ದಾರೆ.

ಪ್ರಧಾನಿ ಮೋದಿ ಸಂತಾಪ: ಪ್ರಧಾನಿ ನರೇಂದ್ರ ಮೋದಿ ಈ ದುರಂತದ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

ಪ್ರವಾಹ: ಭೂತಾನ್‌ನಲ್ಲೂ ಭಾರತ ಸೇನೆಯಿಂದ ರಕ್ಷಣೆ

ನವದೆಹಲಿ: ಡಾರ್ಜೀಲಿಂಗ್ ಹಾಗೂ ನೇಪಾಳದಲ್ಲಿ ಭಾರಿ ಪ್ರವಾಹ ಸಂಭವಿಸಿರುವ ನಡುವೆ ಭೂತಾನ್‌ನಲ್ಲೂ ಪ್ರವಾಹ ಉಂಟಾಗಿದೆ. ಅಮೋಚು ನದಿಯ ಸುತ್ತಮುತ್ತಲ ಪ್ರದೇಶದಲ್ಲಿ ಹಠಾತ್ ಪ್ರವಾಹ ಸಂಭವಿಸಿದೆ.

ಇದರ ಬೆನ್ನಲ್ಲೇ ಭೂತಾನ್‌ನ ರಕ್ಷಣಾ ಸಿಬ್ಬಂದಿ ಜತೆ ಭಾರತೀಯ ಸೇನೆ ಕೂಡ ಕೈ ಜೋಡಿಸಿದ್ದು, ರಕ್ಷಣಾ ಕಾರ್ಯ ಆರಂಭಿಸಿದೆ. ಪ್ರವಾಹದಲ್ಲಿ ಹಲವಾರು ಕುಟುಂಬಗಳು ಮತ್ತು ಕಾರ್ಮಿಕರು ಸಿಲುಕಿದ್ದು, ಹೆಲಿಕಾಪ್ಟರ್ ಮೂಲಕ ಅವರ ರಕ್ಷಣೆಯಲ್ಲಿ ಸೇನೆ ನಿರತವಾಗಿದೆ.