ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಮೃತಿ ಇರಾನಿ ಸಿಎಂ ಅಭ್ಯರ್ಥಿಯಾಗುವ ಸಾಧ್ಯತೆ ಇದೆ. ಆಪ್ ಈಗಾಗಲೇ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ್ದು, ಕೇಜ್ರಿವಾಲ್ ವಿರುದ್ಧ ಸ್ಮೃತಿ ಇರಾನಿ ಸ್ಪರ್ಧಿಸಬಹುದು ಎಂಬ ವದಂತಿಗಳಿವೆ.

ನವದೆಹಲಿ: ದೆಹಲಿಯಲ್ಲಿ ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಅರವಿಂದ ಕೇಜ್ರಿವಾಲ್‌ರ ಆಪ್‌ ಈಗಾಗಲೇ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಿದ್ದು ಚುನಾವಣೆಗೆ ಪೂರ್ಣ ಸಿದ್ಧವಾಗಿದೆ. ಬಿಜೆಪಿ ಸಿಎಂ ಅಭ್ಯರ್ಥಿ ಯಾರಾಗಬೇಕು ಎಂಬ ತಲಾಶೆ ಆರಂಭಿಸಿದ್ದು, ಮಾಜಿ ಕೇಂದ್ರ ಸಚಿವೆ ಸ್ಮೃತಿ ಇರಾನಿ ಹೆಸರು ಮುಂಚೂಣಿಯಲ್ಲಿದೆ ಎಂಬ ಗುಸುಗುಸು ಕೇಳಿಬರುತ್ತಿದೆ.

Add Asianetnews Kannada as a Preferred SourcegooglePreferred

ನವದೆಹಲಿ ಕ್ಷೇತ್ರದಿಂದ ಸ್ಪರ್ಧೆಗೆ ಇಳಿದಿರುವ ಆಪ್‌ ಸಂಚಾಲಕ ಹಾಗೂ ಮಾಜಿ ಸಿಎಂ ಅರವಿಂದ ಕೇಜ್ರಿವಾಲ್‌ ವಿರುದ್ಧ ಈಗಾಗಲೇ ಕಾಂಗ್ರೆಸ್ ಪಕ್ಷ ಮಾಜಿ ಸಿಎಂ ಶೀಲಾ ದೀಕ್ಷಿತ್‌ ಪುತ್ರ ಸಂದೀಪ್‌ ದೀಕ್ಷಿತ್‌ರನ್ನು ಕಣಕ್ಕಿಳಿಸಿದೆ. ಆದರೆ ಬಿಜೆಪಿ ಅಭ್ಯರ್ಥಿ ಹೆಸರು ಇನ್ನೂ ಆಖೈರಾಗಿಲ್ಲ. ಬಿಜೆಪಿ ಇಲ್ಲಿ ಸ್ಮೃತಿ ಇರಾನಿ ಅವರನ್ನು ಕಣಕ್ಕಿಳಿಸಲು ಚಿಂತನೆ ನಡೆಸಿದೆ ಎಂಬ ವದಂತಿಗಳು ಕೇಳಿಬರುತ್ತಿವೆ. ಹೀಗಾಗಿ ಸಹಜವಾಗೇ ಸ್ಮೃತಿ ಹೆಸರು ಸಿಎಂ ಅಭ್ಯರ್ಥಿ ಹುದ್ದೆಗೂ ಮುಂಚೂಣಿಗೆ ಬಂದಿದೆ. ಸ್ಮೃತಿ ಅವರನ್ನು ಪ್ರಚಾರ ಸಮಿತಿ ಮುಖ್ಯಸ್ಥೆ ಮಾಡುವ ಇರಾದೆ ಕೂಡ ಹೈಕಮಾಂಡ್‌ಗಿದೆ ಎನ್ನಲಾಗಿದೆ.

ಇತ್ತೀಚೆಗೆ ನಡೆದ ಲೋಕಸಭೆ ಚುನಾವಣೆಯಲ್ಲಿ ಅಮೇಠಿ ಕ್ಷೇತ್ರದಲ್ಲಿ ಕಾಂಗ್ರೆಸ್‌ನ ಕಿಶೋರಿ ಲಾಲ್ ಶರ್ಮಾ ವಿರುದ್ಧ ಸ್ಪರ್ಧಿಸಿ ಸೋತಿದ್ದ ಇರಾನಿಗೆ ಇದುವರೆಗೆ ಬಿಜೆಪಿಯಲ್ಲಿ ಯಾವ ಹುದ್ದೆಯನ್ನೂ ಕೊಡಲಾಗಿಲ್ಲ.