ಶಾ ಭೇಟಿಯಾದ ಕೇಜ್ರಿವಾಲ್: ಹೇಗಿತ್ತಂತೆ ಗೊತ್ತಾ ಮಾತುಕತೆ?
ಕೇಂದ್ರ ಗೃಹ ಸಚಿವರನ್ನು ಭೇಟಿ ಮಾಡಿದ ದೆಹಲಿ ಸಿಎಂ| ಅಮಿತ್ ಶಾ ಅವರೊಂದಿಗೆ ಅರವಿಂದ್ ಕೇಜ್ರಿವಾಲ್ ಮಾತುಕತೆ| ದೆಹಲಿ ಅಭಿವೃದ್ಧಿ ಕುರಿತು ಚರ್ಚೆ ನಡೆಸಿದ ಶಾ ಹಾಗೂ ಕೇಜ್ರಿ| ದೆಹಲಿ ಅಭಿವೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುವ ಭರವಸೆ| ಇದೇ ಮೊದಲ ಬಾರಿಗೆ ಅಮಿತ್ ಶಾ ಹಾಗೂ ಕೇಜ್ರಿವಾಲ್ ಭೇಟಿ|
ನವದೆಹಲಿ(ಫೆ.19): ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿ, ಮೂರನೇ ಬಾರಿ ಸಿಎಂ ಆಗಿ ಆಯ್ಕೆಯಾಗಿರುವ ಅರವಿಂದ್ ಕೇಜ್ರಿವಾಲ್, ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾಗಿದ್ದಾರೆ.
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿಯಾದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್, ದೆಹಲಿ ಅಭಿವೃದ್ಧಿ ಕುರಿತು ಮಾತುಕತಡೆ ನಡೆಸಿದ್ದಾರೆ ಎನ್ನಲಾಗಿದೆ.
ಭೇಟಿ ಬಳಿಕ ಮಾಧ್ಯಮದವರನ್ನು ಉದ್ದೇಶಿಸಿ ಮಾತನಾಡಿದ ಕೇಜ್ರಿವಾಲ್, ಇದೊಂದು ಸೌಹಾರ್ದಯುತ ಭೇಟಿ ಎಂದು ಹೇಳಿದರು. ದೆಹಲಿ ಅಭಿವೃದ್ದಿ ಸೇರಿದಂತೆ ಹಲವು ವಿಚಾರಗಳ ಕುರಿತು ಗೃಹ ಸಚಿವರೊಂದಿಗೆ ಚರ್ಚೆ ಮಾಡಿರುವುದಾಗಿ ಕೇಜ್ರಿ ಸ್ಪಷ್ಟಪಡಿಸಿದ್ದಾರೆ.
ದೆಹಲಿ ಅಭಿವೃದ್ಧಿಗಾಗಿ ಒಟ್ಟಾಗಿ ಕೆಲಸ ಮಾಡುವ ಕುರಿತು ಇಬ್ಬರೂ ನಾಯಕರು ಸಹಮತ ವ್ಯಕ್ತಪಡಿಸಿದ್ದು, ಪರಸ್ಪರ ಸಹಕಾರದ ಮೂಲಕ ಸುಗಮ ಆಡಳಿತ ನಡೆಸಲು ಬದ್ಧ ಎಂದು ವಾಗ್ದಾನ ಮಾಡಿದ್ದಾರೆ.
ಈ ವೇಳೆ ದೆಹಲಿ ಅಭಿವೃದ್ಧಿಗಾಗಿ ಕೇಂದ್ರ ಸರ್ಕಾರ ಹಾಗೂ ಗೃಹ ಸಚಿವಾಲಯ ಎಲ್ಲ ಅಗತ್ಯ ನೆರವು ನೀಡಲಿದೆ ಎಂದು ಅಮಿತ್ ಶಾ ಭರವಸೆ ನೀಡಿದರು ಎಂದು ಮೂಲಗಳು ತಿಳಿಸಿವೆ.
ಈಶ್ವರ್ ಕಾ ಶಪಥ್: ದೆಹಲಿ ಸಿಎಂ ಆಗಿ ಕೇಜ್ರಿ ಪ್ರಮಾಣವಚನ!
ಇದೇ ಮೊದಲ ಬಾರಿಗೆ ಅಮಿತ್ ಶಾ ಹಾಗೂ ಅರವಿಂದ್ ಕೇಜ್ರಿವಾಲ್ ಪರಸ್ಪರ ಭೇಟಿಯಾಗಿದ್ದು ವಿಶೇಷ.