ದೆಹಲಿಯ ಜಂತರ್ ಮಂತರ್ನಲ್ಲಿ ನಡೆದ ಹಿಂಸಾತ್ಮಕ ಪ್ರತಿಭಟನೆಯ ನಂತರ, ದೆಹಲಿ ಪೊಲೀಸರು ಕಠಿಣ ಕ್ರಮಕ್ಕೆ ಮುಂದಾಗಿದ್ದಾರೆ. ಹಿಂಸಾಚಾರದಲ್ಲಿ ಭಾಗಿಯಾದವರನ್ನು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಗುರುತಿಸಿ, ಅವರ ಪಾಸ್ಪೋರ್ಟ್ಗಳನ್ನು ರದ್ದುಗೊಳಿಸುವ ಪ್ರಕ್ರಿಯೆ ಆರಂಭಿಸುವ ಸಾಧ್ಯತೆಯಿದೆ.
ದೆಹಲಿ (ಜು.23): ದೆಹಲಿಯ ಜಂತರ್ ಮಂತರ್ನಲ್ಲಿ ಇತ್ತೀಚೆಗೆ ನಡೆದ ಹಿಂಸಾತ್ಮಕ ಪ್ರತಿಭಟನೆಯ ನಂತರ ದೆಹಲಿ ಪೊಲೀಸರು ಪ್ರತಿಭಟನಾಕಾರರ ವಿರುದ್ಧ ಅತ್ಯಂತ ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದ್ದಾರೆ. ಪ್ರತಿಭಟನೆ ವೇಳೆ ಕಲ್ಲು ತೂರಾಟ ಹಾಗೂ ಹಿಂಸಾಚಾರದಲ್ಲಿ ಭಾಗಿಯಾದ ಪ್ರತಿಭಟನಾಕಾರರ ಪಾಸ್ಪೋರ್ಟ್ಗಳನ್ನು ರದ್ದುಗೊಳಿಸುವ ಸಾಧ್ಯತೆಯಿದೆ. ಸಿಸಿಟಿವಿ (CCTV) ದೃಶ್ಯಾವಳಿಗಳು ಹಾಗೂ ಡಿಜಿಟಲ್ ಪುರಾವೆಗಳ ಆಧಾರದ ಮೇಲೆ ಪ್ರತಿಭಟನಾಕಾರರ ಗುರುತು ಪತ್ತೆ ಮಾಡಲಾಗುತ್ತಿದ್ದು, ಅವರ ವಿರುದ್ಧ ವಿವಿಧ ಕಾಯ್ದೆಗಳಡಿ ಪ್ರಕರಣ ದಾಖಲಿಸಲಾಗುತ್ತಿದೆ.
ಸೋಮವಾರ ದೆಹಲಿಯ ಜಂತರ್ ಮಂತರ್ನಲ್ಲಿ ಬೃಹತ್ ಪ್ರತಿಭಟನೆ ನಡೆದಿತ್ತು. ಈ ವೇಳೆ ‘ಕಾಕ್ರೋಚ್ ಜನತಾ ಪಾರ್ಟಿ’ಯ (ಸಿಜೆಪಿ) ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದರು. ಇದರಿಂದ ಆಕ್ರೋಶಗೊಂಡ ಪ್ರತಿಭಟನಾಕಾರರು ಉಗ್ರ ರೂಪ ತಾಳಿ ಕಲ್ಲು ತೂರಾಟ ನಡೆಸಿದ್ದರು. ಈ ಹಿಂಸಾಚಾರದಲ್ಲಿ ಪ್ರತಿಭಟನಾಕಾರರು ಹಾಗೂ ಪೊಲೀಸರು ಗಾಯಗೊಂಡಿದ್ದಾರೆ. ಈ ಎಲ್ಲಾ ಘಟನಾವಳಿಗಳ ಹಿನ್ನೆಲೆಯಲ್ಲಿ ಇದೀಗ ಪೊಲೀಸರು ಬೃಹತ್ ಕಾರ್ಯಾಚರಣೆಗೆ ಸಜ್ಜಾಗಿದ್ದು, ಹಿಂಸಾಚಾರ ನಡೆಸಿದ ವ್ಯಕ್ತಿಗಳ ಪಾಸ್ಪೋರ್ಟ್ ರದ್ದುಗೊಳಿಸುವ ಪ್ರಕ್ರಿಯೆಯನ್ನು ಆರಂಭಿಸುವ ಸಾಧ್ಯತೆಯಿದೆ.
ಮೂಲಗಳು ನೀಡಿರುವ ಮಾಹಿತಿಯ ಪ್ರಕಾರ, ಹಿಂಸಾಚಾರದಲ್ಲಿ ಭಾಗಿಯಾದವರನ್ನು ಪತ್ತೆ ಹಚ್ಚುವ ಕಾರ್ಯ ಭರದಿಂದ ಸಾಗಿದೆ. ವಿಡಿಯೋ ಫೂಟೇಜ್, ಸಿಸಿಟಿವಿ ರೆಕಾರ್ಡಿಂಗ್ ಹಾಗೂ ಇತರ ಡಿಜಿಟಲ್ ಸಾಕ್ಷ್ಯಾಧಾರಗಳ ಆಧಾರದ ಮೇಲೆ ಆರೋಪಿಗಳನ್ನು ಗುರುತಿಸಲಾಗುತ್ತಿದೆ. ಹಿಂಸಾಚಾರದಲ್ಲಿ ಭಾಗಿಯಾಗಿರುವುದು ದೃಢಪಟ್ಟ ತಕ್ಷಣವೇ ಅವರ ವಿರುದ್ಧ ವಿವಿಧ ಗಂಭೀರ ಕಾಯಿದೆಯಲ್ಲಿ ಕ್ರಿಮಿನಲ್ ಪ್ರಕರಣಗಳನ್ನು ದಾಖಲಿಸಲಾಗುತ್ತದೆ.
ವಿದೇಶ ಪ್ರಯಾಣಕ್ಕೆ ಎದುರಾಗಲಿದೆ ಕಂಟಕ!
ದೆಹಲಿ ಪೊಲೀಸರು ನೀಡಿರುವ ಮಾಹಿತಿಯಂತೆ, ಸಾರ್ವಜನಿಕ ಆಸ್ತಿಪಾಸ್ತಿ ಹಾನಿ, ಕಾನೂನು ಮತ್ತು ಸುವ್ಯವಸ್ಥೆಗೆ ಭಂಗ ಹಾಗೂ ಹಿಂಸಾತ್ಮಕ ಕೃತ್ಯಗಳಲ್ಲಿ ಭಾಗಿಯಾದವರ ವಿರುದ್ಧ ಯಾವುದೇ ದಾಕ್ಷಿಣ್ಯವಿಲ್ಲದೆ ಕ್ರಮ ಜರುಗಿಸಲಾಗುವುದು. ಇಂತಹ ಆರೋಪಿಗಳ ಪಾಸ್ಪೋರ್ಟ್ ರದ್ದುಪಡಿಸಲು ಸಂಬಂಧಿಸಿದ ಇಲಾಖೆಗೆ ಶಿಫಾರಸು ಮಾಡುವ ಪ್ರಕ್ರಿಯೆ ಶೀಘ್ರವೇ ಆರಂಭಗೊಳ್ಳಲಿದೆ. ಪರಿಣಾಮ, ಈ ಆರೋಪಿಗಳು ಭವಿಷ್ಯದಲ್ಲಿ ವಿದೇಶಕ್ಕೆ ಪ್ರಯಾಣಿಸಲು ತೀವ್ರ ತೊಡಕಾಗಲಿದೆ.
ಗೃಹ ಇಲಾಖೆಯಿಂದ ಹೊಸ ಅಧಿಸೂಚನೆ
ಪ್ರಸ್ತುತ ಪೊಲೀಸರು ಇಡೀ ಘಟನಾವಳಿಗಳ ಸುದೀರ್ಘ ತನಿಖೆ ನಡೆಸುತ್ತಿದ್ದಾರೆ. ಮತ್ತೊಂದೆಡೆ, ರಾಷ್ಟ್ರೀಯ ಭದ್ರತಾ ಕಾಯ್ದೆಯ (ಎನ್ಎಸ್ಎ) ಅಡಿಯಲ್ಲಿ ಬಂಧಿಸುವ ದೆಹಲಿ ಪೊಲೀಸರ ಅಧಿಕಾರಾವಧಿಯನ್ನು ಅಕ್ಟೋಬರ್ 18ರವರೆಗೆ ವಿಸ್ತರಿಸಿ ದೆಹಲಿ ಲೆಫ್ಟಿನೆಂಟ್ ಗವರ್ನರ್ ಆದೇಶಿಸಿದ್ದಾರೆ. ಈ ಕುರಿತು ದೆಹಲಿ ಸರ್ಕಾರದ ಗೃಹ ಇಲಾಖೆಯು ಜುಲೈ 15 ರಂದೇ ಅಧಿಸೂಚನೆ ಹೊರಡಿಸಿದೆ. 'ನೀಟ್' (NEET) ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣವನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿಯು ದೆಹಲಿಯಲ್ಲಿ ತೀವ್ರ ಪ್ರತಿಭಟನೆ ನಡೆಸುತ್ತಿರುವ ಬೆನ್ನಲ್ಲೇ, ದೆಹಲಿ ಸರ್ಕಾರ ಹಾಗೂ ಲೆಫ್ಟಿನೆಂಟ್ ಗವರ್ನರ್ ಈ ಮಹತ್ವದ ನಿರ್ಧಾರ ಕೈಗೊಂಡಿದ್ದಾರೆ.
ಅಷ್ಟಕ್ಕೂ ಅಲ್ಲಿ ನಡೆದಿದ್ದೇನು?
ದೆಹಲಿಯಲ್ಲಿ ಕಳೆದ 33 ದಿನಗಳಿಂದ ಸಿಜೆಪಿ (CJP) ಪ್ರತಿಭಟನೆ ನಡೆಸುತ್ತಿತ್ತು. ಸಾಮಾಜಿಕ ಕಾರ್ಯಕರ್ತ ಸೋನಮ್ ವಾಂಗ್ಚುಕ್ ಅವರು ಆಮರಣಾಂತ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದರು. ಆದರೆ ಪೊಲೀಸರು ಬಲವಂತವಾಗಿ ಅವರ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಿದರು. ಇದು ಯುವಜನತೆಯಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು. ಆಕ್ರೋಶಗೊಂಡ ಯುವಕರು ಸೋಮವಾರ ದೆಹಲಿಯ ಜಂತರ್ ಮಂತರ್ನಲ್ಲಿ ಬೃಹತ್ ಪ್ರತಿಭಟನೆ ನಡೆಸಿದರು. ಪರಿಸ್ಥಿತಿ ಹತೋಟಿ ತಪ್ಪಿದಾಗ ಪೊಲೀಸರು ಲಾಠಿಚಾರ್ಜ್ ಮಾಡಿದ್ದರಿಂದ ವಾತಾವರಣ ಇನ್ನಷ್ಟು ಕಾವು ಪಡೆದುಕೊಂಡಿತು. ಪ್ರಸ್ತುತ ಈ ಪ್ರತಿಭಟನೆಯ ಕಾವು ದೇಶಾದ್ಯಂತ ಹರಡಿದ್ದು, ವಿವಿಧ ರಾಜಕೀಯ ಪಕ್ಷಗಳು ರಸ್ತೆಗಿಳಿದು ಹೋರಾಟ ಆರಂಭಿಸಿವೆ. ಜೊತೆಗೆ ದೆಹಲಿ ಪೊಲೀಸರ ಕಠಿಣ ನಡವಳಿಕೆಗೆ ಖಂಡನೆ ವ್ಯಕ್ತವಾಗುತ್ತಿದೆ.


