ಕೆಂಪುಕೋಟೆಯ ಪಾರ್ಕಿಂಗ್‌ನಲ್ಲಿ ಸ್ಫೋಟ ನಡೆಸುವ ಉಗ್ರ ಉಮರ್‌ ನಬಿಯ ಯೋಜನೆ, ರಜೆ ದಿನವಾದ ಕಾರಣ ವಿಫಲವಾಯಿತು. ಇದರಿಂದ ಆಕ್ರೋಶಗೊಂಡು ಸಿಗ್ನಲ್‌ ಬಳಿ ಸ್ಫೋಟ ನಡೆಸಿದ್ದು, ಈ ಕೃತ್ಯಕ್ಕೆ ಬಳಸಿದ ಕಾರನ್ನು 12 ದಿನಗಳ ಕಾಲ ವಿಶ್ವವಿದ್ಯಾಲಯದ ಆವರಣದಲ್ಲಿ ನಿಲ್ಲಿಸಲಾಗಿತ್ತು ಎಂಬುದು ತನಿಖೆಯಿಂದ ತಿಳಿದುಬಂದಿದೆ.

ರಜೆ ಕಾರಣ ಕೆಂಪುಕೋಟೆಯಲ್ಲಿ ಜನರಿಲ್ಲ । ಹೀಗಾಗಿ ಅಲ್ಲಿಂದ ಮರಳಿದ್ದ ಉಮರ್‌

Add Asianetnews Kannada as a Preferred SourcegooglePreferred

ನವದೆಹಲಿ (ನ.13): ಸೋಮವಾರ ಕೆಂಪುಕೋಟೆ ಸಿಗ್ನಲ್‌ ಬಳಿ ಸಂಭವಿಸಿದ ಸ್ಫೋಟ, ವಾಸ್ತವವಾಗಿ ಕೆಂಪುಕೋಟೆಯ ವಾಹನ ಪಾರ್ಕಿಂಗ್‌ ಜಾಗದಲ್ಲಿ ನಡೆಯಬೇಕಿತ್ತು. ಆದರೆ ಸೋಮವಾರ ಕೆಂಪುಕೋಟೆಗೆ ರಜೆ ಇದ್ದ ಕಾರಣ, ಪಾರ್ಕಿಂಗ್ ಜಾಗ ಖಾಲಿ ಇತ್ತು. ಹೀಗಾಗಿ ಅಲ್ಲಿ ಮೂರು ಗಂಟೆ ಕಾದ ಉಗ್ರ ಉಮರ್‌ ನಬಿ, ಅವಕಾಶ ಕೈತಪ್ಪಿದ್ದಕ್ಕೆ ಬೇಸತ್ತು ಅಲ್ಲಿಂದ ಹೊರಟಿದ್ದ. ಅದೇ ಆಕ್ರೋಶದಲ್ಲಿ ಆತ ಕೆಂಪುಕೋಟೆ ಸಮೀಪದ ರಸ್ತೆ ಸಿಗ್ನಲ್‌ ಬಳಿ ಸ್ಫೋಟ ನಡೆಸಿರಬಹುದು ಎಂಬ ಶಂಕೆಯನ್ನು ಪೊಲೀಸರು ವ್ಯಕ್ತಪಡಿಸಿದ್ದಾರೆ.

12 ದಿನ ವಿವಿಯಲ್ಲೇ ನಿಂತಿದ್ದ ಕಾರು:

ಈ ನಡುವೆ ಸ್ಫೋಟಕ್ಕೆ ಕಾರಣವಾದ ಹ್ಯುಂಡೈ 20 ಕಾರನ್ನು ಆರೋಪಿ ಉಮರ್‌, ಅ.29ರಂದು ಖರೀದಿ ಮಾಡಿದ್ದ. ಬಳಿಕ 12 ದಿನಗಳ ಕಾಲ ಅದನ್ನು ಫರೀದಾಬಾದ್‌ನ ಅಲ್‌ ಫಲಾ ವಿವಿ ಆವರಣದಲ್ಲಿ ಮತ್ತೊಬ್ಬ ಉಗ್ರ ಮುಜಮ್ಮಿಲ್‌ನ ಕಾರಿನ ಪಕ್ಕದಲ್ಲೇ ನಿಲ್ಲಿಸಿದ್ದ.

ಆದರೆ ಸೋಮವಾರ ಮಜಮ್ಮಿಲ್‌ ಸೇರಿದಂತೆ ಇತರರ ಬಂಧನದ ಸುದ್ದಿ ಕೇಳಿ ಉಮರ್ ಆತಂಕಕ್ಕೆ ಒಳಗಾಗಿ ದಿಢೀರನೆ ಅಲ್ಲಿಂದ ಕಾರಿನೊಂದಿಗೆ ಕಾಲು ಕಿತ್ತಿದ್ದ. ಬಳಿಕ ದೆಹಲಿಯ ಹಲವು ಭಾಗ ಸುತ್ತಿ ಬಳಿಕ ಕೆಂಪುಕೋಟೆ ಬಳಿ ಪಾರ್ಕ್‌ ಮಾಡಿದ್ದ. ಅಲ್ಲಿಂದ ನೇರವಾಗಿ ತಂದು ಸ್ಫೋಟ ನಡೆಸಿದ್ದ ಎಂಬುದು ಬೆಳಕಿಗೆ ಬಂದಿದೆ.