* ‘ಗರೀಬ್‌ ಕಲ್ಯಾಣ್‌ ಸಮ್ಮೇಳನ’ದಲ್ಲಿ ಫಲಾನುಭವಿಗಳ ಜತೆ ಮಾತುಕತೆ* ಇಂದು ಸಿಎಂ, ಜನಪ್ರತಿನಿಧಿಗಳು, ಜನರ ಜತೆ ಮೋದಿ ಸಂವಾದ* 8 ವರ್ಷದ ಆಡಳಿತ ಪೂರ್ಣಗೊಳಿಸಿದ ನಿಮಿತ್ತ ಹಿಮಾಚಲದಲ್ಲಿ ರಾರ‍ಯಲಿ

 ನವದೆಹಲಿ(ಮೇ.31): ಕೇಂದ್ರದಲ್ಲಿ ತಮ್ಮ ಅಧಿಕಾರ ಎಂಟು ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ ದೇಶಾದ್ಯಂತ ಮುಖ್ಯಮಂತ್ರಿಗಳು, ಜನಪ್ರತಿನಿಧಿಗಳು ಹಾಗೂ ಸರ್ಕಾರದ ವಿವಿಧ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದ ನಡೆಸಲಿದ್ದಾರೆ. ಹಿಮಾಚಲ ಪ್ರದೇಶದ ಶಿಮ್ಲಾದಲ್ಲಿ ಆಯೋಜಿಸಿರುವ ‘ಗರೀಬ್‌ ಕಲ್ಯಾಣ ಸಮ್ಮೇಳನ’ದಲ್ಲಿ ಪಾಲ್ಗೊಂಡು, ಅಲ್ಲಿಂದಲೇ ಅವರು ದೇಶದೆಲ್ಲೆಡೆ ಏರ್ಪಡಿಸಿರುವ ಜನಸಂಪರ್ಕ ಕಾರ್ಯಕ್ರಮಗಳಲ್ಲಿ ಆನ್‌ಲೈನ್‌ನಲ್ಲಿ ಭಾಗವಹಿಸಲಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗರೀಬ್‌ ಕಲ್ಯಾಣ ಸಮ್ಮೇಳನದ ಅಂಗವಾಗಿ ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ರಾಜ್ಯಗಳ ಸಚಿವರು, ಸಂಸದರು, ಶಾಸಕರು ಹಾಗೂ ಜನಪ್ರತಿನಿಧಿಗಳು ತಮ್ಮ ರಾಜ್ಯ ಹಾಗೂ ಕಾರ್ಯಕ್ಷೇತ್ರದಲ್ಲಿ ಬೆಳಿಗ್ಗೆ 9.45ರಿಂದ ವಿವಿಧ ಸರ್ಕಾರಿ ಯೋಜನೆಗಳ ಫಲಾನುಭವಿಗಳ ಜೊತೆ ಸಂವಾದ ನಡೆಸಲಿದ್ದಾರೆ. ರಾಜ್ಯ ರಾಜಧಾನಿಗಳು, ಜಿಲ್ಲಾ ಕೇಂದ್ರ ಹಾಗೂ ಕೃಷಿ ವಿಜ್ಞಾನ ಕೇಂದ್ರಗಳಲ್ಲಿ ಕಾರ್ಯಕ್ರಮ ಆಯೋಜಿಸಲಾಗಿದೆ.

ನಂತರ ಸುಮಾರು 11 ಗಂಟೆಯ ವೇಳೆಗೆ ಇವರೆಲ್ಲರ ಜೊತೆ ಪ್ರಧಾನಿ ಮೋದಿ ಆನ್‌ಲೈನ್‌ನಲ್ಲಿ ಸಂವಾದ ನಡೆಸಲಿದ್ದಾರೆ. ಅವರು ಹಿಮಾಚಲ ಪ್ರದೇಶದಲ್ಲಿ ಆಯೋಜಿಸಿರುವ ರಾರ‍ಯಲಿಯಲ್ಲಿ ಪಾಲ್ಗೊಂಡು, ಅಲ್ಲಿಂದಲೇ ಸರ್ಕಾರದ ಕಲ್ಯಾಣ ಯೋಜನೆಗಳ ಬಗ್ಗೆ ಜನರಿಂದ ಅಭಿಪ್ರಾಯ ಸಂಗ್ರಹಿಸಲಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯ ತಿಳಿಸಿದೆ.

ಇದೇ ವೇಳೆ, ‘ಪ್ರಧಾನ ಮಂತ್ರಿ ಕಿಸಾನ್‌ ಸಮ್ಮಾನ್‌ ನಿಧಿ’ (ಪಿಎಂ-ಕಿಸಾನ್‌) ಯೋಜನೆಯಡಿ 11ನೇ ಕಂತಿನ 21000 ಕೋಟಿ ರು.ಗಳನ್ನು ರೈತರ ಖಾತೆಗೆ ನೇರವಾಗಿ ಅವರು ಜಮೆ ಮಾಡಲಿದ್ದಾರೆ. ಒಟ್ಟು 10 ಕೋಟಿ ರೈತರಿಗೆ ಈ ಹಣ ವರ್ಗಾವಣೆಯಾಗಲಿದೆ.