ಹೆಚ್ಚು ಹೊತ್ತು ದುಡಿಸಿಕೊಳ್ಳಲು ಉತ್ತರಪ್ರದೇಶ ಹಾಗೂ ಬಿಹಾರ ಮೂಲದ ವಲಸಿಗ ಜೀತ ಕಾರ್ಮಿಕರಿಗೆ ಪಂಜಾಬ್‌ ರೈತರು ಮಾದಕ ವಸ್ತುಗಳನ್ನು ನೀಡುತ್ತಿದ್ದಾರೆ ಎಂದು ಸಮೀಕ್ಷೆಯೊಂದು ಹೇಳಿದೆ. 

ನವದೆಹಲಿ (ಏ.04):  ಜಮೀನುಗಳಲ್ಲಿ ಹೆಚ್ಚು ಹೊತ್ತು ದುಡಿಸಿಕೊಳ್ಳಲು ಉತ್ತರಪ್ರದೇಶ ಹಾಗೂ ಬಿಹಾರ ಮೂಲದ ವಲಸಿಗ ಜೀತ ಕಾರ್ಮಿಕರಿಗೆ ಪಂಜಾಬ್‌ ರೈತರು ಮಾದಕ ವಸ್ತುಗಳನ್ನು ನೀಡುತ್ತಿದ್ದಾರೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್‌) ಸಮೀಕ್ಷೆ ನಡೆಸಿದೆ. 

Add Asianetnews Kannada as a Preferred SourcegooglePreferred

ಈ ಬಗ್ಗೆ ಕ್ರಮ ಕೈಗೊಳ್ಳಿ ಎಂದು ಪಂಜಾಬ್‌ ಸರ್ಕಾರಕ್ಕೆ ಸೂಚಿಸಿ ಕೇಂದ್ರ ಸರ್ಕಾರ ಪತ್ರವೊಂದನ್ನು ಬರೆದಿದೆ. ಇದು ಸಂಚಲನಕ್ಕೆ ಕಾರಣವಾಗಿದೆ. ಕೃಷಿ ಕಾಯ್ದೆ ವಿರೋಧಿಸಿ ದೆಹಲಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ಪಂಜಾಬ್‌ ರೈತರಿಗೆ ಮಸಿ ಬಳಿಯಲು ಕೇಂದ್ರ ಸರ್ಕಾರ ನಡೆಸಿರುವ ಮತ್ತೊಂದು ಕಸರತ್ತು ಇದಾಗಿದೆ ಎಂದು ರೈತ ನಾಯಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ತರಕಾರಿ ಬೆಲೆ 1ಕೆಜಿಗೆ 1 ಲಕ್ಷ ರೂಪಾಯಿ; ಸುಳ್ಳು ಎನ್ನುತ್ತಿದೆ ವರದಿ! ...

ಪಂಜಾಬ್‌ನ ಜಿಲ್ಲೆಗಳಿಂದ 2019-20ರಲ್ಲಿ 58 ವಲಸಿಗ ಜೀತ ಕಾರ್ಮಿಕರನ್ನು ಬಿಎಸ್‌ಎಫ್‌ ವಶಕ್ಕೆ ತೆಗೆದುಕೊಂಡಿತ್ತು. ಅವರೆಲ್ಲಾ ಉತ್ತರಪ್ರದೇಶ ಹಾಗೂ ಬಿಹಾರದ ಕುಗ್ರಾಮಗಳಿಗೆ ಸೇರಿದವರಾಗಿದ್ದರು. ಮಾನಸಿಕ ಅಸ್ವಾಸ್ಥ್ಯತೆ ಅಥವಾ ದುರ್ಬಲ ಮನಸ್ಥಿತಿ ಹೊಂದಿದ್ದರು. ಅವರಿಗೆ ಡ್ರಗ್ಸ್‌ ನೀಡಿ ಕೃಷಿ ಭೂಮಿಯಲ್ಲಿ ತೊಡಗಿಸಿಕೊಳ್ಳಲಾಗುತ್ತಿದೆ ಎಂಬುದು ವಿಚಾರಣೆ ವೇಳೆ ಗೊತ್ತಾಗಿದೆ. ಹೀಗಾಗಿ ಈ ಬಗ್ಗೆ ಕಠಿಣ ಕ್ರಮ ಕೈಗೊಳ್ಳಿ ಎಂದು ಗೃಹ ಸಚಿವಾಲಯ ಮಾ.17ರಂದು ಪಂಜಾಬ್‌ ಸರ್ಕಾರಕ್ಕೆ ಪತ್ರ ಬರೆದಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಭಾರತೀಯ ಕಿಸಾನ್‌ ಯೂನಿಯನ್‌ ಪ್ರಧಾನ ಕಾರ್ಯದರ್ಶಿ ಜಗಮೋಹನ ಸಿಂಗ್‌, ಕೇಂದ್ರ ಸರ್ಕಾರ ಮೊದಲು ನಮ್ಮನ್ನು ಖಲಿಸ್ತಾನಿಗಳು ಹಾಗೂ ಉಗ್ರರು ಎಂದಿತ್ತು. ಆದರೆ ಈಗ ಮತ್ತೊಮ್ಮೆ ಮಸಿ ಬಳಿಯಲು ಯತ್ನಿಸುತ್ತಿದೆ. ಗೃಹ ಸಚಿವಾಲಯದ ಪ್ರಕಾರ ಸಮೀಕ್ಷೆ ನಡೆದಿದ್ದು 2019-20ರಲ್ಲಿ. ಇಷ್ಟುದಿನ ವರದಿಯನ್ನಿಟ್ಟುಕೊಂಡು ಸುಮ್ಮನೆ ಕುಳಿತಿದ್ದ ಕೇಂದ್ರ ಸರ್ಕಾರ, ರೈತರ ಹೋರಾಟ ತುತ್ತತುದಿಯಲ್ಲಿರುವಾಗ ಪಂಜಾಬ್‌ ಸರ್ಕಾರಕ್ಕೆ ಪತ್ರ ಬರೆದಿರುವುದು ಅಚ್ಚರಿ ಮೂಡಿಸಿದೆ ಎಂದಿದ್ದಾರೆ.