ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ 45 ಲಕ್ಷ ರೂಪಾಯಿ ವಂಚಿಸಿದ ಪ್ರಕರಣದಲ್ಲಿ, ಮಾಜಿ ಸಚಿವರ ಸೊಸೆ ನಾಗವೇಣಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು 5 ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದೆ. ಪ್ರಕರಣದ ಮೊದಲ ಆರೋಪಿಯಾಗಿದ್ದ ಅವರ ಪತಿ ಜೆ. ನರಸಿಂಹ ಸ್ವಾಮಿ ವಿಚಾರಣೆ ವೇಳೆ ಮೃತಪಟ್ಟಿದ್ದರಿಂದ ಅವರ ಮೇಲಿನ ಪ್ರಕರಣವನ್ನು ಕೈಬಿಡಲಾಗಿತ್ತು.
ಬೆಂಗಳೂರು (ಜು.09): ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿ ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸಿದ ಪ್ರಕರಣದಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಸೊಸೆ ನಾಗವೇಣಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಮಹತ್ವದ ತೀರ್ಪು ನೀಡಿದೆ.
ಪ್ರಕರಣದ ಹಿನ್ನೆಲೆ:
ಪ್ರಕಾಶ್ ಕುಮಾರ್ ಯರಪ್ಪ ಎಂಬುವವರು ಈ ಸಂಬಂಧ ದೂರು ನೀಡಿದ್ದರು. ಮೆಡಿಕಲ್ ಸೀಟ್ ಕೊಡಿಸುವುದಾಗಿ ನಂಬಿಸಿದ್ದ ಆರೋಪಿಗಳು, ಅವರಿಂದ ಹಂತ ಹಂತವಾಗಿ ಒಟ್ಟು 45 ಲಕ್ಷ ರೂಪಾಯಿ ಹಣ ಪಡೆದು ನಂಬಿಕೆ ದ್ರೋಹ ಎಸಗಿದ್ದರು. ಈ ಕುರಿತು ಬೆಂಗಳೂರಿನ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖೆ ನಡೆಸಿದ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ನ್ಯಾಯಾಲಯದ ತೀರ್ಪು:
ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂದೀಪ್ ಪಾಟೀಲ್ ಅವರು ಈ ಆದೇಶ ಹೊರಡಿಸಿದ್ದಾರೆ. ಈ ಪ್ರಕರಣದಲ್ಲಿ ಮಾಜಿ ಸಚಿವ ಆರ್.ಎಲ್. ಜಾಲಪ್ಪ ಅವರ ಪುತ್ರ ಜೆ. ನರಸಿಂಹ ಸ್ವಾಮಿ ಅವರು ಮೊದಲ ಆರೋಪಿ (A1) ಆಗಿದ್ದರು. ಆದರೆ, ವಿಚಾರಣೆ ಬಾಕಿ ಇರುವಾಗಲೇ ಅವರು ಮೃತಪಟ್ಟ ಕಾರಣ, ಅವರ ವಿರುದ್ಧದ ಪ್ರಕರಣ ಕೈಬಿಡಲಾಗಿತ್ತು. ಎರಡನೇ ಆರೋಪಿಯಾಗಿದ್ದ ನರಸಿಂಹ ಸ್ವಾಮಿ ಅವರ ಪತ್ನಿ ನಾಗವೇಣಿ ಅವರ ವಿರುದ್ಧದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಕೋರ್ಟ್ ಶಿಕ್ಷೆ ಪ್ರಕಟಿಸಿದೆ.
ಶಿಕ್ಷೆಯ ವಿವರ:
ಸೆಕ್ಷನ್ 420 (ವಂಚನೆ): ಈ ಅಡಿಯಲ್ಲಿ ನಾಗವೇಣಿ ಅವರಿಗೆ 5 ವರ್ಷ ಜೈಲು ಶಿಕ್ಷೆ ಮತ್ತು 10,000 ರೂಪಾಯಿ ದಂಡ ವಿಧಿಸಲಾಗಿದೆ.
ಸೆಕ್ಷನ್ 120B (ಅಪರಾಧಿಕ ಸಂಚು): ಈ ಅಡಿಯಲ್ಲಿ 3 ವರ್ಷ ಜೈಲು ಶಿಕ್ಷೆ ಮತ್ತು 10,000 ರೂಪಾಯಿ ದಂಡ ವಿಧಿಸಲಾಗಿದೆ.
ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚಿನ ಶಿಕ್ಷೆ ಅನುಭವಿಸಬೇಕಾಗುತ್ತದೆ ಎಂದು ನ್ಯಾಯಾಲಯ ತಿಳಿಸಿದೆ. ತೀರ್ಪು ಹೊರಬಿದ್ದ ಬೆನ್ನಲ್ಲೇ ಪೊಲೀಸರು ನಾಗವೇಣಿ ಅವರನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ರಾಜಕೀಯ ಪ್ರಭಾವಿ ಕುಟುಂಬದ ಸದಸ್ಯರಿಗೆ ಈ ರೀತಿ ಶಿಕ್ಷೆಯಾಗಿರುವುದು ಸಾರ್ವಜನಿಕ ವಲಯದಲ್ಲಿ ಭಾರಿ ಚರ್ಚೆಗೆ ಕಾರಣವಾಗಿದೆ.



