ತನ್ನ ಮೇಲೆ ಅತ್ಯಾಚಾರ ಎಸಗಿದ್ದ ಅಪರಾಧಿಗಳನ್ನು ಬಿಡುಗಡೆ ಮಾಡಿದ್ದ ಗುಜರಾತ್‌ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಬಿಲ್ಕಿಸ್ ಬಾನೋ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ. 

ನವದೆಹಲಿ (ಡಿ. 17): ತನ್ನ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗಳ ಕ್ಷಮಾಪಣೆಯನ್ನು ಶಿಕ್ಷೆಯ ಸಮಯದಲ್ಲಿ ಅಸ್ತಿತ್ವದಲ್ಲಿರುವ ನೀತಿಯಂತೆ ಪರಿಗಣಿಸಬೇಕು ಎಂಬ ಸುಪ್ರೀಂ ಕೋರ್ಟ್ ಮೇ 13 ರ ತೀರ್ಪನ್ನು ಪ್ರಶ್ನಿಸಿ ಗುಜರಾತ್ ಗಲಭೆಯಲ್ಲಿ ಸಂತ್ರಸ್ತ ಮಹಿಳೆ ಬಿಲ್ಕಿಸ್ ಬಾನೊ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ನ್ಯಾಯಮೂರ್ತಿಗಳಾದ ಅಜಯ್ ರಸ್ತೋಗಿ ಮತ್ತು ವಿಕ್ರಮ್ ನಾಥ್ ಅವರ ಪೀಠ ಈ ಆದೇಶ ನೀಡಿದೆ. 2002 ರ ಗುಜರಾತ್‌ ಗಲಭೆಯ ನಂತರ ಬಾನೋ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಲಾಗಿತ್ತು. ಅದರೊಂದಿಗೆ ಗುಜರಾತ್‌ನ ದಾಹೋಡ್ ಜಿಲ್ಲೆಯ ಲಿಮ್ಖೇಡಾ ತಾಲೂಕಿನಲ್ಲಿ ಗುಂಪೊಂದು ಹತ್ಯೆ ಮಾಡಿದ ಹನ್ನೆರಡು ಜನರಲ್ಲಿ ಆಕೆಯ ಮೂರು ವರ್ಷದ ಮಗಳು ಕೂಡ ಸೇರಿದ್ದಳು. ಮೇ 13 ರಂದು ಸುಪ್ರೀಂ ಕೋರ್ಟ್‌ನ ತೀರ್ಪಿನ ವಿರುದ್ಧ ಬಾನೋ ಅವರ ಮನವಿಯಲ್ಲಿ, ಪ್ರಕರಣದ ವಿಚಾರಣೆಯು ಮಹಾರಾಷ್ಟ್ರದಲ್ಲಿ ನಡೆದಿರುವುದರಿಂದ ಗುಜರಾತ್‌ನ 1992 ರ ನೀತಿಯ ಬದಲಿಗೆ ಪ್ರಸ್ತುತ ಪ್ರಕರಣದಲ್ಲಿ ಮಹಾರಾಷ್ಟ್ರದ ನೀತಿಯನ್ನು ಅನ್ವಯಿಸಬೇಕು ಎಂದು ಹೇಳಲಾಗಿತ್ತು.

ಮೇ 13 ರಂದು ಸುಪ್ರೀಂ ಕೋರ್ಟ್, ಪ್ರಕರಣದಲ್ಲಿ ಅಪರಾಧಿಗಳ ಕ್ಷಮೆಯನ್ನು ಅಪರಾಧವು ನಿಜವಾಗಿ ಎಸಗಿರುವ ರಾಜ್ಯದಲ್ಲಿ ಶಿಕ್ಷೆಯ ಸಮಯದಲ್ಲಿ ಅಸ್ತಿತ್ವದಲ್ಲಿರುವ ನೀತಿಯ ಪ್ರಕಾರ ಪರಿಗಣಿಸಬೇಕು ಎಂದು ತೀರ್ಪು ನೀಡಿತ್ತು. ಅಪರಾಧಿಗಳಲ್ಲಿ ಒಬ್ಬರಾದ ರಾಧೇಶ್ಯಾಮ್ ಭಗವಾಂದಾಸ್ ಷಾ ಅವರು 1992ರ ಜುಲೈ 9 ರ ನೀತಿಯ ಅಡಿಯಲ್ಲಿ ಅವಧಿಪೂರ್ವ ಬಿಡುಗಡೆಗಾಗಿ ತನ್ನ ಅರ್ಜಿಯನ್ನು ಪರಿಗಣಿಸಲು ಗುಜರಾತ್ ರಾಜ್ಯಕ್ಕೆ ನಿರ್ದೇಶನ ನೀಡುವಂತೆ ಕೋರಿ ಸಲ್ಲಿಸಿದ ಅರ್ಜಿಯ ಮೇಲೆ ಸುಪ್ರೀಂ ಕೋರ್ಟ್‌ನ ತೀರ್ಪು ಬಂದಿತ್ತು.

Add Asianetnews Kannada as a Preferred SourcegooglePreferred

ಸುಪ್ರೀಂ ಕೋರ್ಟ್ ತನ್ನ ಮೇ 13 ರ ತೀರ್ಪಿನಲ್ಲಿ ಈ ಅಪರಾಧ ನಡೆದಿರುವುದು ಗುಜರಾತ್‌ನಲ್ಲಿ, ಸಾಮಾನ್ಯವಾಗಿ ಅದೇ ರಾಜ್ಯದಲ್ಲಿ ವಿಚಾರಣೆಯನ್ನು ಮುಕ್ತಾಯಗೊಳಿಸಬೇಕು ಮತ್ತು ಸೆಕ್ಷನ್ 432 (7) CrPC ಪ್ರಕಾರ, ಸಾಮಾನ್ಯ ಕೋರ್ಸ್‌ನಲ್ಲಿ ಈ ಪ್ರಕರಣದಲ್ಲಿ ಸೂಕ್ತವಾದ ನಿರ್ಧಾರವನ್ನು ತೆಗೆದುಕೊಳ್ಳಬೇಕಾಗಿರುವುದು ಗುಜರಾತ್‌ ಸರ್ಕಾರ ಎಂದಿತ್ತು. ಆದ್ದರಿಂದ, ಅಪರಾಧವು ಗುಜರಾತ್‌ನಲ್ಲಿ ನಡೆದಿರುವುದರಿಂದ, ಗುಜರಾತ್ ಸರ್ಕಾರದ ನೀತಿಯಂತೆ ಪರಿಹಾರಕ್ಕಾಗಿ ಮನವಿ ಸೇರಿದಂತೆ ಎಲ್ಲಾ ಮುಂದಿನ ಪ್ರಕ್ರಿಯೆಗಳನ್ನು ಪರಿಗಣಿಸಬೇಕು ಎಂದು ಹೇಳಿತ್ತು.

Bilkis Bano Case: 11 ಅತ್ಯಾಚಾರಿಗಳಿಗೆ ಬಿಡುಗಡೆ ಭಾಗ್ಯ, ಗುಜರಾತ್‌ ಸರ್ಕಾರದ ವಿರುದ್ಧ ಆಕ್ರೋಶ

ಮೇ 13 ರಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪಿನ ಪ್ರಕಾರ, ಗಲಭೆಯ ಸಮಯದಲ್ಲಿ ಬಾನೋ ಅವರ ಕುಟುಂಬ ಸದಸ್ಯರನ್ನು ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಮಾಡಿದ 11 ಅಪರಾಧಿಗಳಿಗೆ ಗುಜರಾತ್ ಸರ್ಕಾರವು ಕ್ಷಮಾದಾನ ನೀಡಿ ಜೈಲಿನಿಂದ ಬಿಡುಗಡೆ ಮಾಡಿತ್ತು. ಜೀವಾವಧಿ ಶಿಕ್ಷೆಗೆ ಗುರಿಯಾಗಿದ್ದ ಅಪರಾಧಿಗಳನ್ನು ಗುಜರಾತ್ ಸರ್ಕಾರ ರಾಜ್ಯದಲ್ಲಿ ವಿಧಾನಸಭಾ ಚುನಾವಣೆಗೆ ಮುನ್ನ ಬಿಡುಗಡೆ ಮಾಡಿತ್ತು. ಜಸ್ವಂತ್ ನಾಯ್, ಗೋವಿಂದ್ ನಾಯ್, ಶೈಲೇಶ್ ಭಟ್, ರಾಧ್ಯೇಶಮ್ ಶಾ, ಬಿಪಿನ್ ಚಂದ್ರ ಜೋಶಿ, ಕೇಸರಭಾಯಿ ವೊಹಾನಿಯಾ, ಪ್ರದೀಪ್ ಮೋರ್ಧಿಯಾ, ಬಕಾಭಾಯಿ ವೋಹಾನಿಯಾ, ರಾಜುಭಾಯ್ ಸೋನಿ, ಮಿತೇಶ್ ಭಟ್ ಮತ್ತು ರಮೇಶ್ ಚಂದನಾ ಅವರನ್ನು ಗುಜರಾತ್‌ ಸರ್ಕಾರ ಬಿಡುಗಡೆ ಮಾಡಿತ್ತು.

ಬಿಲ್ಕಿಸ್ ಬಾನೊ ಅತ್ಯಾಚಾರಿಗಳ ಬಿಡುಗಡೆಗೆ ಓವೈಸಿ ಕೆಂಡ, ಇದು ಗುಜರಾತ್ ಚುನಾವಣಾ ಗಿಮಿಕ್ ಎಂದ AIMIM!

ಸುಪ್ರೀಂ ಕೋರ್ಟ್‌ ಮೇ 13 ರಂದು ನೀಡಿದ ತೀರ್ಪಿನ ವಿರುದ್ಧ ಬಿಲ್ಕಿಸ್‌ ಬಾನೋ, ಮರುಪರಿಶೀಲನಾ ಅರ್ಜಿ ಸಲ್ಲಿಕೆ ಮಾಡಿದ್ದರು.ಅಪರಾಧಿಗಳನ್ನು ಬಿಡುಗಡೆ ಮಾಡುವ ಗುಜರಾತ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಅವರು ಪ್ರತ್ಯೇಕವಾಗಿ ರಿಟ್ ಅರ್ಜಿಯನ್ನೂ ಸಲ್ಲಿಸಿದ್ದಾರೆ. ನ್ಯಾಯಮೂರ್ತಿ ಬೇಲಾ ಎಂ ತ್ರಿವೇದಿ ಅವರು ಡಿಸೆಂಬರ್ 13 ರಂದು ಸೋಮವಾರ ಈ ವಿಷಯದ ವಿಚಾರಣೆಯಿಂದ ಹಿಂದೆ ಸರಿದಿದ್ದರು.