ಗಯಾದಲ್ಲಿ ವೈದ್ಯರ ಮೇಲೆ ಗುಂಡಿನ ದಾಳಿ, ಪಾಟ್ನಾ ಆಸ್ಪತ್ರೆಯಲ್ಲಿ ಕ್ರಿಮಿನಲ್‌ನ ಹತ್ಯೆ. ಚುನಾವಣೆ ಹತ್ತಿರವಾಗುತ್ತಿರುವಾಗ ಬಿಹಾರದಲ್ಲಿ ಅಪರಾಧ ಘಟನೆಗಳು ಹೆಚ್ಚುತ್ತಿವೆ. ಕಾನೂನು ಸುವ್ಯವಸ್ಥೆಗೆ ಸವಾಲೊಡ್ಡುತ್ತಿರುವ ಈ ಘಟನೆಗಳು ಆತಂಕ ಮೂಡಿಸಿವೆ.

ಗಯಾ: ಚುನಾವಣೆ ಹತ್ತಿರವಾಗುತ್ತಿರುವ ಸಂದರ್ಭದಲ್ಲಿ ಬಿಹಾರದಲ್ಲಿ ಅಪರಾಧ ಘಟನೆಗಳು ಏರಿಕೆಯಾಗುತ್ತಿದ್ದು, ಶನಿವಾರ ಗಯಾ ಜಿಲ್ಲೆಯಲ್ಲಿ ಮತ್ತೊಂದು ಶಾಕಿಂಗ್ ಘಟನೆಯು ನಡೆದಿದೆ. ವೈದ್ಯರೊಬ್ಬರ ಮೇಲೆ ಬೈಕ್‌ನಲ್ಲಿ ಬಂದ ಮೂವರು ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಡಾ. ತಪೇಶ್ವರ ಪ್ರಸಾದ್‌ ಮೇಲೆ ಗುಂಡಿನ ದಾಳಿ

ನಿವೃತ್ತ ಆರೋಗ್ಯ ಇಲಾಖೆ ಅಧಿಕಾರಿ ಡಾ. ತಪೇಶ್ವರ ಪ್ರಸಾದ್‌ ಅವರು ಗಯಾದಲ್ಲಿ ಗುಂಡಿನ ದಾಳಿಗೆ ಒಳಗಾಗಿದ್ದಾರೆ. ಶನಿವಾರ ಬೆಳಿಗ್ಗೆ ಸುಮಾರು 8 ಗಂಟೆಯ ಸುಮಾರಿಗೆ ಅವರು ತಮ್ಮ ಕೃಷಿ ಭೂಮಿಯಿಂದ ಮನೆಗೆ ಮರಳುತ್ತಿದ್ದ ವೇಳೆ, ಅಪರಿಚಿತ ಮೂವರು ಬೈಕ್ ಸವಾರ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಅಪರಿಚಿತ ದಾಳಿಕೋರರು ವೈದ್ಯರ ಮೇಲೆ ಮೂರು ಸುತ್ತು ಗುಂಡು ಹಾರಿಸಿದ್ದಾರೆ. ಈ ದಾಳಿಯಲ್ಲಿ ಒಂದಷ್ಟು ಗುಂಡು ವೈದ್ಯರ ದವಡೆಗೆ ತಗುಲಿ ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಗೊಂಡ ವೈದ್ಯರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರೆದಿದೆ. ಅವರ ಸ್ಥಿತಿ ಇನ್ನೂ ಚಿಂತಾಜನಕವಾಗಿದೆ.

ಈ ಘಟನೆಯ ಹಿಂದೆ ಏನೆಲ್ಲಾ ಕಾರಣಗಳಿವೆ ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. ದಾಳಿಕೋರರ ಗುರುತು ಗಚ್ಚಲು ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಕಳೆದ ಒಂದು ತಿಂಗಳಿನಿಂದ ಬಿಹಾರದಲ್ಲಿ ಅಪರಾಧ ಪ್ರಕರಣಗಳು ಅಹಿತಕರವಾಗಿ ಹೆಚ್ಚಾಗುತ್ತಿದ್ದು, ಸಾರ್ವಜನಿಕರಲ್ಲಿ ಭಯ ಮತ್ತು ಆತಂಕ ಮನೆ ಮಾಡಿದೆ. ಸರ್ಕಾರ ಮತ್ತು ಪೊಲೀಸರು ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕೆಂಬ ಆಗ್ರಹ ಜನರಿಂದ ವ್ಯಕ್ತವಾಗುತ್ತಿದೆ.

ಪಾಟ್ನಾದಲ್ಲಿ ಆಸ್ಪತ್ರೆಯೊಳಗೆಯೇ ಕ್ರಿಮಿನಲ್ ಹತ್ಯೆ

ಇದೇ ಸಮಯದಲ್ಲಿ, ಪಾಟ್ನಾದ ಆಸ್ಪತ್ರೆಯ ಐಸಿಯು ಘಟಕದಲ್ಲಿ ಭೀಕರ ಕೃತ್ಯವೊಂದು ನಡೆದಿದೆ. ದೀರ್ಘ ಕ್ರಿಮಿನಲ್ ಹಿನ್ನೆಲೆಯಿರುವ ಚಂದನ್ ಮಿಶ್ರಾ ಎಂಬ ಕೈದಿಯನ್ನು ಐದು ಮಂದಿ ಶಸ್ತ್ರಸಜ್ಜಿತ ದುಷ್ಕರ್ಮಿಗಳು ಆಸ್ಪತ್ರೆಗೆ ನುಗ್ಗಿ ಪಾಯಿಂಟ್ ಬ್ಲಾಂಕ್ ಶಾಟ್‌ನಲ್ಲಿ ಹತ್ಯೆ ಮಾಡಿದ್ದಾರೆ. ಈ ಭೀಕರ ದೃಶ್ಯ ಸಿಸಿಟಿವಿ ಕ್ಯಾಮೆರಾದಲ್ಲಿ ದಾಖಲಾಗಿದೆ. ಚಂದನ್ ಮಿಶ್ರಾ ಮೇಲಿನ ಹತ್ಯಾ ದಾಳಿಯ ಹಿಂದೆ ಅವರ ವಿರೋಧಿ ಗ್ಯಾಂಗ್ ಕೈವಾಡವಿದೆ ಎಂಬ ಶಂಕೆ ವ್ಯಕ್ತವಾಗಿದೆ ಎಂದು ಪಾಟ್ನಾ ಎಸ್‌ಎಸ್‌ಪಿ ಕಾರ್ತಿಕಾಯ್ ಶರ್ಮಾ ಸ್ಪಷ್ಟಪಡಿಸಿದ್ದಾರೆ.

ಈ ಹತ್ಯಾ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಹಾರ ಪೊಲೀಸರು ಕೋಲ್ಕತ್ತಾದ ನ್ಯೂ ಟೌನ್ ಪ್ರದೇಶದಿಂದ ಮೂವರು ಶಂಕಿತರನ್ನು ವಶಕ್ಕೆ ಪಡೆದಿದ್ದಾರೆ. ಬಿಹಾರ ಎಡಿಜಿ ಕುಂದನ್ ಕೃಷ್ಣನ್ ಅವರು ಈ ಮಾಹಿತಿಯನ್ನು ದೃಢಪಡಿಸಿದ್ದು, ವಿಚಾರಣೆ ಮುಂದುವರೆದಿದೆ ಎಂದು ತಿಳಿಸಿದ್ದಾರೆ. ಈ ಇಬ್ಬರೂ ಘಟನೆಗಳು ಚುನಾವಣೆ ಪೂರ್ವದ ಬಿಹಾರದಲ್ಲಿ ಕಾನೂನು ಸುವ್ಯವಸ್ಥೆಯ ಸ್ಥಿತಿಗೆ ಸಂಬಂಧಿಸಿದಂತೆ ಗಂಭೀರ ಚಿಂತನೆಗಳಿಗೆ ಕಾರಣವಾಗಿವೆ. ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.