ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಬೃಹತ್‌ ಸಮಾವೇಶ ನಡೆಯಲಿದ್ದು, ಇದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಬಂಧನದ ವಿರುದ್ಧ ನಡೆಸುತ್ತಿರುವ ರ್‍ಯಾಲಿ ಅಲ್ಲ ಎಂದು ಕಾಂಗ್ರೆಸ್‌ ಪಕ್ಷ ಸ್ಪಷ್ಟಪಡಿಸಿದೆ. 

ನವದೆಹಲಿ (ಮಾ.31): ಭಾನುವಾರ ದೆಹಲಿಯ ರಾಮಲೀಲಾ ಮೈದಾನದಲ್ಲಿ ವಿಪಕ್ಷಗಳ ‘ಇಂಡಿಯಾ’ ಮೈತ್ರಿಕೂಟದ ಬೃಹತ್‌ ಸಮಾವೇಶ ನಡೆಯಲಿದ್ದು, ಇದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಅವರ ಬಂಧನದ ವಿರುದ್ಧ ನಡೆಸುತ್ತಿರುವ ರ್‍ಯಾಲಿ ಅಲ್ಲ ಎಂದು ಕಾಂಗ್ರೆಸ್‌ ಪಕ್ಷ ಸ್ಪಷ್ಟಪಡಿಸಿದೆ. ‘ದೇಶದ ಸಂವಿಧಾನ ಹಾಗೂ ಪ್ರಜಾಪ್ರಭುತ್ವವನ್ನು ರಕ್ಷಿಸಲು ‘ಲೋಕತಂತ್ರ ಬಚಾವೋ ರ್‍ಯಾಲಿ’ ನಡೆಸಲಾಗುತ್ತಿದೆ. ಮಾ.17ರಂದು ಮುಂಬೈನಲ್ಲಿ ನಡೆದ ಸಮಾವೇಶದಲ್ಲಿ ಇಂಡಿಯಾ ಕೂಟದ ಲೋಕಸಭೆ ಚುನಾವಣೆ ಪ್ರಚಾರಕ್ಕೆ ಚಾಲನೆ ನೀಡಲಾಗಿತ್ತು. ದೆಹಲಿಯಲ್ಲಿ ನಡೆಯುವ ಸಮಾವೇಶದಲ್ಲಿ ಎರಡನೇ ರಣಕಹಳೆ ಮೊಳಗಿಸಲಾಗುವುದು.

Add Asianetnews Kannada as a Preferred SourcegooglePreferred

ರಾಮಲೀಲಾ ಮೈದಾನದಿಂದ ಲೋಕ ಕಲ್ಯಾಣ ಮಾರ್ಗಕ್ಕೆ (ಪ್ರಧಾನಿ ನಿವಾಸವಿರುವ ಸ್ಥಳ) ‘ನಿಮ್ಮ ಸಮಯ ಮುಗಿಯಿತು’ ಎಂಬ ಸಂದೇಶ ರವಾನಿಸಲಾಗುವುದು’ ಎಂದು ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು. ಕಾಂಗ್ರೆಸ್‌ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹಾಗೂ ಮಾಜಿ ಅಧ್ಯಕ್ಷ ರಾಹುಲ್‌ ಗಾಂಧಿ ಅವರು ಸಮಾವೇಶದಲ್ಲಿ ಮಾತನಾಡಲಿದ್ದಾರೆ. ಇದು ಒಬ್ಬ ವ್ಯಕ್ತಿಗಾಗಿ ನಡೆಯುತ್ತಿರುವ ಸಮಾವೇಶವಲ್ಲ. ಇಂಡಿಯಾ ಮೈತ್ರಿಕೂಟದ ಎಲ್ಲಾ 27-28 ರಾಜಕೀಯ ಪಕ್ಷಗಳೂ ಇದರಲ್ಲಿ ಸೇರಿಕೊಂಡಿದ್ದು, ಆ ಪಕ್ಷಗಳ ನಾಯಕರು ಪಾಲ್ಗೊಳ್ಳಲಿದ್ದಾರೆ. ‘ಇಂಡಿಯಾ’ ಪಕ್ಷಗಳಲ್ಲಿರುವ ಒಗ್ಗಟ್ಟನ್ನು ಈ ಸಮಾವೇಶ ಸಾರಲಿದೆ ಎಂದು ಹೇಳಿದರು.

ಕಾಂಗ್ರೆಸ್‌ ಗೆಲ್ಲಿಸಿದ್ದಕ್ಕೆ ಕನ್ನಡಿಗರಿಗೆ ಮೋದಿ ಶಿಕ್ಷೆ: ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಬೇಕಿದ್ದ ಬರ ಪರಿಹಾರ ಸೇರಿದಂತೆ ವಿವಿಧ ಅನುದಾನಗಳನ್ನು ತಡೆಹಿಡಿದಿದೆ ಎಂಬ ರಾಜ್ಯ ಸರ್ಕಾರದ ಕೂಗಿಗೆ ಇದೀಗ ಕಾಂಗ್ರೆಸ್‌ ಹೈಕಮಾಂಡ್‌ ಕೂಡ ದನಿಗೂಡಿಸಿದೆ. ಕರ್ನಾಟಕದ ಜನರು ಕಾಂಗ್ರೆಸ್‌ ಸರ್ಕಾರವನ್ನು ಆಯ್ಕೆ ಮಾಡಿದ್ದಾರೆ ಎಂಬ ಕಾರಣಕ್ಕೆ ಮೋದಿ ಸರ್ಕಾರ ಅನುದಾನ ತಡೆಹಿಡಿಯುವ ಮೂಲಕ ಶಿಕ್ಷೆ ವಿಧಿಸುತ್ತಿದೆ. ಇದು ಬಿಜೆಪಿಯ ಸ್ವಾರ್ಥ ಮತ್ತು ಕ್ಷುಲ್ಲಕ ರಾಜಕಾರಣ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಜೈರಾಂ ರಮೇಶ್‌ ಕಿಡಿಕಾರಿದ್ದಾರೆ. 

ಎನ್‌ಡಿಆರ್‌ಎಫ್ ಹಣಕ್ಕಾಗಿ ಸುಪ್ರೀಂಗೆ ಹೋಗಿರುವುದು ರಾಜಕೀಯ ತಂತ್ರಗಾರಿಕೆ: ಬೊಮ್ಮಾಯಿ

ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ ವಿರುದ್ಧ ಸಿದ್ದರಾಮಯ್ಯ ಮಾಡಿದ್ದ ಟ್ವೀಟ್‌ಗೆ ಟ್ಯಾಗ್‌ ಮಾಡಿ ಟ್ವೀಟ್‌ ಮಾಡಿರುವ ಜೈರಾಂ ರಮೇಶ್‌, ಮೋದಿ ಸರ್ಕಾರ ನಿರಂತರವಾಗಿ ಭಾರತದ ರಾಜ್ಯಗಳ ಆರ್ಥಿಕತೆಯ ಕತ್ತು ಹಿಸುಕುತ್ತಿದೆ. ಈಗ ಕರ್ನಾಟಕದ ಜನರು ಬೆಲೆ ತೆರಬೇಕಾಗಿ ಬಂದಿದೆ. ಅವರು ತಮ್ಮ ಹಕ್ಕು ಚಲಾಯಿಸಿ ಕಾಂಗ್ರೆಸ್‌ ಸರ್ಕಾರವನ್ನು ಆಯ್ಕೆ ಮಾಡಿದ್ದಕ್ಕೆ ಬಿಜೆಪಿ ಸರ್ಕಾರ ಹೀಗೆ ಸೇಡು ತೀರಿಸಿಕೊಳ್ಳುತ್ತಿದೆ. ಹಣಕಾಸು ಸಚಿವರು ಕರ್ನಾಟಕದಿಂದಲೇ ರಾಜ್ಯಸಭೆಗೆ ಆಯ್ಕೆಯಾಗಿದ್ದಾರೆ. ಆದರೂ,12,000 ಕೋಟಿ ರು.ಗಿಂತ ಹೆಚ್ಚಿನ ಅನುದಾನವನ್ನು ಕರ್ನಾಟಕಕ್ಕೆ ತಡೆಹಿಡಿದಿದ್ದಾರೆ ಎಂದು ಹೇಳಿದ್ದಾರೆ.