ಗೋವಾದಿಂದ ದೆಹಲಿಗೆ ಹೊರಟಿದ್ದ 229 ಪ್ರಯಾಣಿಕರಿದ್ದ ಇಂಡಿಗೋ ವಿಮಾನವು, ಟೇಕ್ ಆಫ್ ಆದ ಕೆಲವೇ ನಿಮಿಷಗಳಲ್ಲಿ ಎಂಜಿನ್ ದೋಷದಿಂದಾಗಿ ಗೋವಾ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಪೈಲಟ್ಗಳ ಸಮಯಪ್ರಜ್ಞೆಯಿಂದಾಗಿ ಸಂಭವನೀಯ ದೊಡ್ಡ ದುರಂತವೊಂದು ತಪ್ಪಿದೆ.
ಗೋವಾ: ಗೋವಾದಿಂದ ದೆಹಲಿಗೆ ಹೊರಟಿದ್ದ ಇಂಡಿಗೋ ವಿಮಾನವೊಂದು ಆಗಸದಲ್ಲಿದ್ದಾಗ ಎಂಜಿನ್ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಗೋವಾ ವಿಮಾನ ನಿಲ್ದಾಣದಲ್ಲಿ 'ತುರ್ತು ಪರಿಸ್ಥಿತಿ' ಘೋಷಿಸಿ ತುರ್ತು ಭೂಸ್ಪರ್ಶ ಮಾಡಿದ ಘಟನೆ ನಡೆದಿದೆ.
ಮಂಗಳವಾರ ಬೆಳಿಗ್ಗೆ 9:15 ಕ್ಕೆ ಗೋವಾದ ಮನೋಹರ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ದೆಹಲಿಗೆ ಹೊರಟಿದ್ದ ಇಂಡಿಗೋ 6E 2102 ವಿಮಾನದಲ್ಲಿ ಒಟ್ಟು 229 ಪ್ರಯಾಣಿಕರಿದ್ದರು. ಟೇಕ್ ಆಫ್ ಆದ ಕೇವಲ 10 ನಿಮಿಷಗಳಲ್ಲಿ (ಬೆಳಿಗ್ಗೆ 9:25 ರ ಸುಮಾರಿಗೆ) ವಿಮಾನದ ಒಂದು ಎಂಜಿನ್ ಕೆಲಸ ಮಾಡುತ್ತಿಲ್ಲ ಎಂಬುದು ಪೈಲಟ್ಗಳ ಗಮನಕ್ಕೆ ಬಂದಿದೆ.
ಕೂಡಲೇ ಎಚ್ಚೆತ್ತುಕೊಂಡ ಪೈಲಟ್ಗಳು SOP ಅನುಸರಿಸಿ ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಮಾಹಿತಿ ರವಾನಿಸಿದರು. ನಂತರ ವಿಮಾನವನ್ನು ತಕ್ಷಣವೇ ಯು-ಟರ್ನ್ ಮಾಡಿ, ಬೆಳಿಗ್ಗೆ 9:50 ರ ಸುಮಾರಿಗೆ ಗೋವಾದ ವಿಮಾನ ನಿಲ್ದಾಣದಲ್ಲೇ ಸುರಕ್ಷಿತವಾಗಿ ಇಳಿಸಿದರು. ಪೈಲಟ್ಗಳ ಸಮಯಪ್ರಜ್ಞೆಯಿಂದಾಗಿ ಸಂಭಾವ್ಯ ಭಾರೀ ದುರಂತವೊಂದು ತಪ್ಪಿದಂತಾಗಿದೆ.
ಇಂಡಿಗೋ ವಿಮಾನಯಾನ ಸಂಸ್ಥೆಯ ಸ್ಪಷ್ಟನೆ
ಈ ಘಟನೆಯ ಕುರಿತು ಅಧಿಕೃತ ಹೇಳಿಕೆ ಬಿಡುಗಡೆ ಮಾಡಿರುವ ಇಂಡಿಗೋ, ಟೇಕ್ ಆಫ್ ಆದ ತಕ್ಷಣ ತಾಂತ್ರಿಕ ದೋಷ ಕಂಡುಬಂದ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ವಿಮಾನವನ್ನು ಹಿಂತಿರುಗಿಸಿ ಸುರಕ್ಷಿತವಾಗಿ ಇಳಿಸಲಾಗಿದೆ. ವಿಮಾನವು ಪ್ರಸ್ತುತ ತಾಂತ್ರಿಕ ತಪಾಸಣೆಗೆ ಒಳಗಾಗಿದ್ದು, ಅಗತ್ಯ ಅನುಮತಿಗಳು ದೊರೆತ ನಂತರ ಕಾರ್ಯಾಚರಣೆ ಪುನರಾರಂಭಿಸಲಾಗುವುದು ಎಂದು ಮಾಹಿತಿ ನೀಡಿದೆ.
ಪ್ರಯಾಣಿಕರಿಗೆ ಉಂಟಾದ ಕಿರಿಕಿರಿಯನ್ನು ಕಡಿಮೆ ಮಾಡಲು ತಕ್ಷಣವೇ ಉಪಾಹಾರ ಹಾಗೂ ಕಾಲಕಾಲಕ್ಕೆ ಅಗತ್ಯ ಮಾಹಿತಿ ನೀಡಲಾಗಿದೆ. ಜೊತೆಗೆ ಅವರು ದೆಹಲಿ ತಲುಪಲು ಪರ್ಯಾಯ ವಿಮಾನದ ವ್ಯವಸ್ಥೆಯನ್ನು ಸಹ ಮಾಡಲಾಗಿದೆ ಎಂದು ಸಂಸ್ಥೆ ಸ್ಪಷ್ಟಪಡಿಸಿದೆ.
ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನಕ್ಕೂ ಬಾಂಬ್ ಬೆದರಿಕೆ:
ಇನ್ನೊಂದೆಡೆ, ಸೋಮವಾರದಂದು ದಮ್ಮಾಮ್ನಿಂದ ದೆಹಲಿಗೆ ಹೊರಟಿದ್ದ ಏರ್ ಇಂಡಿಯಾ ಎಕ್ಸ್ಪ್ರೆಸ್ ವಿಮಾನದ ಶೌಚಾಲಯದಲ್ಲಿ ಸಿಬ್ಬಂದಿಗೆ "ಬಾಂಬ್" ಎಂದು ಬರೆದಿದ್ದ ಟಿಶ್ಯೂ ಪೇಪರ್ ಪತ್ತೆಯಾಗಿತ್ತು. ಆಕಾಶದಲ್ಲಿದ್ದಾಗಲೇ ಬಾಂಬ್ ಬೆದರಿಕೆ ಎದುರಾದ ಹಿನ್ನೆಲೆಯಲ್ಲಿ ವಿಮಾನವನ್ನು ತಕ್ಷಣವೇ ಅಹಮದಾಬಾದ್ನ ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿಸಲಾಯಿತು. ವಿಮಾನದಲ್ಲಿದ್ದ ಎಲ್ಲಾ 32 ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಿ, ಪ್ರತ್ಯೇಕ ಜಾಗದಲ್ಲಿ ತೀವ್ರ ತಪಾಸಣೆಗೆ ಒಳಪಡಿಸಲಾಯಿತು.


