* ಪ್ರವಾದಿ ಮೊಹಮ್ಮದ್‌ರನ್ನು ನಿಂದಿಸಲಾಗಿದೆ ಎಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ಗಲಭೆ * ಕಾನ್ಪುರ ಗಲಭೆಕೋರರ ಆಸ್ತಿಗೆ ಬುಲ್ಡೋಜರ್‌ ಟ್ರೀಟ್ಮೆಂಟ್‌: ಎಸ್ಪಿ* 18 ಮಂದಿ ಬಂಧನ, 500 ಜನರ ಮೇಲೆ ಕೇಸು

ಕಾನ್ಪುರ(ಜೂ.05): ಪ್ರವಾದಿ ಮೊಹಮ್ಮದ್‌ರನ್ನು ನಿಂದಿಸಲಾಗಿದೆ ಎಂದು ಉತ್ತರ ಪ್ರದೇಶದ ಕಾನ್ಪುರದಲ್ಲಿ ಗಲಭೆ ನಡೆಸಿದವರ ಅಕ್ರಮ ಆಸ್ತಿಯ ಮೇಲೆ ಬುಲ್ಡೋಜರ್‌ ಹರಿಸಿ ನೆಲಸಮಗೊಳಿಸಲು ಸರ್ಕಾರ ನಿರ್ಧರಿಸಿದೆ. ಗಲಭೆ ಸಂಬಂಧ ಶನಿವಾರ 18 ಮಂದಿಯನ್ನು ಬಂಧಿಸಲಾಗಿದ್ದು, 500 ಜನರ ಮೇಲೆ ಕೇಸು ದಾಖಲಿಸಲಾಗಿದೆ. ಭಾರಿ ಪ್ರಮಾಣದಲ್ಲಿ ಪೊಲೀಸರನ್ನು ನಿಯೋಜಿಸಿ ಸ್ಥಳದಲ್ಲಿ ಶಾಂತಿ ನೆಲೆಸುವಂತೆ ಮಾಡಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇತ್ತೀಚೆಗೆ ಬಿಜೆಪಿ ವಕ್ತಾರೆ ನೂಪುರ್‌ ಶರ್ಮಾ ಟೀವಿ ಚರ್ಚೆಯೊಂದರಲ್ಲಿ ಪ್ರವಾದಿ ಮೊಹಮ್ಮದ್‌ರನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಶುಕ್ರವಾರದ ನಮಾಜ್‌ ನಂತರ ಒಂದು ಗುಂಪಿನವರು ಕಾನ್ಪುರದ ಪರೇಡ್‌, ನಯಿ ಸಡಕ್‌ ಹಾಗೂ ಯತೀಮ್‌ಖಾನಾ ಪ್ರದೇಶಗಳಲ್ಲಿ ಪೊಲೀಸ್‌ ಠಾಣೆಗಳ ಮೇಲೆ ಬಾಂಬ್‌ ಎಸೆದು, ಕಲ್ಲು ತೂರಾಟ ನಡೆಸಿ, ಸುತ್ತಮುತ್ತಲಿನ ಅಂಗಡಿಗಳ ಮೇಲೂ ದಾಳಿ ನಡೆಸಿದ್ದರು. ಘಟನೆಯಲ್ಲಿ ಹಲವರು ಗಂಭೀರವಾಗಿ ಗಾಯಗೊಂಡಿದ್ದರು.

‘ಶನಿವಾರ ವಿಡಿಯೋ ದೃಶ್ಯಗಳ ಆಧಾರದ ಮೇಲೆ ಗಲಭೆಕೋರರನ್ನು ಬಂಧಿಸಿ, ಇನ್ನಷ್ಟುಜನರ ಮೇಲೆ ಗೂಂಡಾ ಕಾಯ್ದೆಯಡಿ ಕೇಸು ದಾಖಲಿಸಾಗಿದೆ. ಬೀದಿಗಿಳಿದು ದಾಂಧಲೆ ನಡೆಸುವವರ ಆಸ್ತಿ ಜಪ್ತಿ ಮಾಡುವ ಅಥವಾ ಸದರಿ ಪ್ರದೇಶದ ಅಕ್ರಮ ಮನೆಗಳನ್ನು ಬುಲ್ಡೋಜರ್‌ ಹರಿಸಿ ನೆಲಸಮಗೊಳಿಸುವ ಕಠಿಣ ಕ್ರಮವನ್ನೇ ಇವರ ಮೇಲೂ ಪ್ರಯೋಗಿಸಲು ನಿರ್ಧರಿಸಲಾಗಿದೆ’ ಎಂದು ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ತಿಳಿಸಿದ್ದಾರೆ.