ಕೇರಳದ ವಯನಾಡಿನಲ್ಲಿ ಸತತ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಬುಧವಾರ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ತಿರುವನಂತಪುರ (ಏ.03): ಕೇರಳದ ವಯನಾಡಿನಲ್ಲಿ ಸತತ ಎರಡನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಇಳಿದಿರುವ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ, ಬುಧವಾರ ಲೋಕಸಭಾ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಹಾಲಿ ಇದೇ ಕ್ಷೇತ್ರದ ಸಂಸದರಾಗಿರುವ ರಾಹುಲ್‌, ನಾಮಪತ್ರ ಸಲ್ಲಿಕೆಗೂ ಮುನ್ನ ಬೃಹತ್‌ ರೋಡ್‌ಶೋ ನಡೆಸಿ ಶಕ್ತಿಪ್ರದರ್ಶನ ಮಾಡಲಿದ್ದಾರೆ. ರಾಹುಲ್‌ ಕಳೆದ ಬಾರಿ ಇಲ್ಲಿ 4.31 ಲಕ್ಷ ಮತಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದ್ದರು. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆದರೆ ಈ ಬಾರಿ ರಾಹುಲ್‌ಗೆ ಬಿಜೆಪಿಯಿಂದ ರಾಜ್ಯಾಧ್ಯಕ್ಷ ಸುರೇಂದ್ರನ್‌ ಮತ್ತು ಸಿಪಿಐ ಕಾರ್ಯದರ್ಶಿ ರಾಜಾ ಅವರ ಪತ್ನಿ ಆ್ಯನಿ ರಾಜಾ ತೀವ್ರ ಸ್ಪರ್ಧೆ ಒಡ್ಡುತ್ತಿದ್ದಾರೆ. ಈ ನಡುವೆ ರಾಹುಲ್‌ ನಾಮಪತ್ರ ಸಲ್ಲಿಕೆ ಕುರಿತು ಪ್ರತಿಕ್ರಿಯೆ ನೀಡಿರುವ ಸುರೇಂದ್ರನ್‌, ‘ಅಂತೂ ರಾಹುಲ್‌ ನಾಮಪತ್ರ ಸಲ್ಲಿಕೆಯ ಸಲುವಾಗಿ ಕ್ಷೇತ್ರಕ್ಕೆ ಆಗಮಿಸುತ್ತಿದ್ದಾರೆ. ಇವರು ಸಂಸದರಾಗಿ ಕಳೆದ ಐದು ವರ್ಷಗಳಲ್ಲಿ ಕ್ಷೇತ್ರದಲ್ಲಿ ಕೆಲವೇ ಬಾರಿ ಕಾಣಿಸಿಕೊಂಡಿದ್ದು, ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ’ ಎಂದು ಕಿಡಿಕಾರಿದ್ದಾರೆ.

ಭಯೋತ್ಪಾದಕರ ವಿರುದ್ಧ ಕ್ರಮ: ಕೇಂದ್ರದಲ್ಲಿ ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಹಣಕಾಸು ತನಿಖೆ ಸಂಸ್ಥೆಗಳ ಮೂಲಕ ತೆರಿಗೆ ಭಯೋತ್ಪಾದನೆ ನಡೆಸುತ್ತಿರುವವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಎಚ್ಚರಿಸಿದ್ದಾರೆ. ಕಾಂಗ್ರೆಸ್‌ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆಯಿಂದ 1800 ಕೋಟಿ ರು. ಬಡ್ಡಿ ಮತ್ತು ದಂಡಶುಲ್ಕ ಪಾವತಿಸುವಂತೆ ಹೊಸ ನೋಟಿಸ್‌ ಬಂದಿರುವುದಕ್ಕೆ ಪ್ರತಿಕ್ರಿಯಿಸಿದ ರಾಹುಲ್‌, ‘ತನಿಖಾ ಸಂಸ್ಥೆಗಳ ಹೆಸರಿನಲ್ಲಿ ಪ್ರಜಾಪ್ರಭುತ್ವವನ್ನು ಹತ್ತಿಕ್ಕಲಾಗುತ್ತಿದೆ. 

ಕಾಂಗ್ರೆಸ್‌ ಎಂದೂ ತನ್ನ ತಪ್ಪನ್ನು ಒಪ್ಪಿಕೊಳ್ಳುವುದಿಲ್ಲ: ಪ್ರಲ್ಹಾದ್‌ ಜೋಶಿ

ನಮ್ಮ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ಮರುಕ್ಷಣವೇ ಅಂತಹವರ ಮೇಲೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಮುಂದೆಂದೂ ಅವರು ಈ ರೀತಿ ನಡೆದುಕೊಳ್ಳುವಂತೆ ನೋಡಿಕೊಳ್ಳಲಾಗುವುದು’ ಎಂದು ಪರೋಕ್ಷವಾಗಿ ಬಿಜೆಪಿ ವಿರುದ್ಧ ಕಿಡಿ ಕಾರಿದರು. ಇದೇ ವೇಳೆ ತೆರಿಗೆ ನೋಟಿಸ್‌ ವಿರುದ್ಧ ಕಾಂಗ್ರೆಸ್‌ ಸುದೀರ್ಘ ಕಾನೂನು ಹೋರಾಟ ನಡೆಸಲಿದೆ ಎಂದು ರಾಹುಲ್‌ ಹೇಳಿದರು.