ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ವಿರುದ್ಧ ಬಿಜೆಪಿಯಿಂದ ನವ್ಯಾ ಹರಿದಾಸ್ ಸ್ಪರ್ಧಿಸಲಿದ್ದಾರೆ. ಜಾರ್ಖಂಡ್ ವಿಧಾನಸಭಾ ಚುನಾವಣೆಯಲ್ಲಿ 'ಇಂಡಿಯಾ' ಒಕ್ಕೂಟದಲ್ಲಿ ಬಿರುಕು ಮೂಡಿದೆ.

ವಯನಾಡು:ಕೇರಳದ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ನ.13ರಂದು ನಡೆಯಲಿರುವ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿ ಪ್ರಿಯಾಂಕಾ ಗಾಂಧಿ ಅವರ ವಿರುದ್ಧ ಬಿಜೆಪಿ ನವ್ಯಾ ಹರಿದಾಸ್ ಅವರನ್ನು ಕಣಕ್ಕಿಳಿಸಿದೆ. ನವ್ಯಾ ಹರಿದಾಸ್ ಬಿಜೆಪಿ ಸಳೀಯ ಮುಖಂಡರಾಗಿದ್ದು, ಇವರು ಕಲ್ಲಿಕೋಟೆ ಪಾಲಿಕೆಯಲ್ಲಿ ಕೌನ್ಸಿಲ‌ರ್ ಆಗಿಯೂ ಸೇವೆ ಸಲ್ಲಿಸಿದ್ದಾರೆ. ವಯನಾಡ್‌ನಲ್ಲಿ ನಟಿ ಖುಷ್ಟೂ ಸುಂದರ್, ಕೇರಳ ಬಿಜೆಪಿ ಅಧ್ಯಕ್ಷ ಕೆ.ಸುರೇಂದ್ರನ್ ಅವರನ್ನು ಬಿಜೆಪಿ ಕಣಕ್ಕಿಳಿಸಲಿದೆ ಎಂಬ ಸುದ್ದಿ ಈ ಮುನ್ನ ಹರಿದಾಡಿತ್ತು.

Add Asianetnews Kannada as a Preferred SourcegooglePreferred

ಜಾರ್ಖಂಡ್ ವಿಧಾನಸಭಾ ಚುನಾವಣೆಗೆ ಬಿಜೆಪಿ 66 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಾಬುಲಾಲ್ ಮರಾಂಡಿ ಅವರನ್ನು ಧನ್ವಾರ್‌ ಅಭ್ಯರ್ಥಿಯನ್ನಾಗಿ ಮಾಡಲಾಗಿದೆ. ಮಾಜಿ ಸಿಎಂ ಮತ್ತು ಮಾಜಿ ಜೆಎಂಎಂ ನಾಯಕ ಚಂಪೈ ಸೊರೇನ್ ಅವರನ್ನು ಸೆರೈಕೆಲಾದಿಂದ ಹಾಗೂ ಸೀತಾ ಸೊರೆನ್ ಅವರನ್ನು ಅವರ ಮಾವ ಮತ್ತು ಜೆಎಂಎಂ ಮುಖ್ಯಸ್ಥ ಶಿಬು ಸೊರೇನ್ ಅವರ ಹಿಂದಿನ ಕ್ಷೇತ್ರ ಜಯ್ತಾರಾದಿಂದ ಕಣಕ್ಕಿಳಿಸಲಾಗಿದೆ. ಮಾಜಿ ಸಿಎಂ ಅರ್ಜುನ್ ಮುಂಡಾ ಅವರ ಪತ್ನಿಗೂ ಟಿಕೆಟ್ ನೀಡಲಾಗಿದೆ. 2 ಹಂತದಲ್ಲಿ ಚುನಾವಣೆ ನಡೆಯಲಿದೆ.

ಕರ್ನಾಟಕ ಉಪ ಚುನಾವಣೆಯ 2 ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಘೋಷಣೆ, ಚನ್ನಪಟ್ಟಣ ಕುತೂಹಲ ಬಾಕಿ

ಇಂಡಿಯಾ ಮೈತ್ರಿಕೂಟದಲ್ಲಿ ಒಡಕು 
ನವೆಂಬರ್‌ನಲ್ಲಿ ನಡೆಯಲಿರುವ ಜಾರ್ಖಂಡ್ ವಿಧಾನಸಭೆ ಚುನಾವಣೆ ಸ್ಪರ್ಧೆಗೆ 'ಇಂಡಿಯಾ' ಒಕ್ಕೂಟದಲ್ಲಿ ಬಿರುಕು ಮೂಡಿದೆ. ವಿಧಾನಸಭೆಯ 81 ಸ್ಥಾನಗಳ ಪೈಕಿ 70ರಲ್ಲಿ ಕಾಂಗ್ರೆಸ್ ಮತ್ತು ಜಾರ್ಖಂಡ್ ಮುಕ್ತಿ ಮೋರ್ಚಾ (ಜೆಎಂಎಂ) ತಮ್ಮ ಅಭ್ಯರ್ಥಿಗಳನ್ನು ಕಣಕ್ಕಿಳಿಸಿಲು ನಿರ್ಧರಿಸಿವೆ ಹಾಗೂ ಉಳಿದ 11 ಕ್ಷೇತ್ರಗ ಳನ್ನು ಆರ್‌ಜೆಡಿ ಹಾಗೂ ಎಡಪಕ್ಷಗಳಿಗೆ ನೀಡಲು ನಿರ್ಧ ರಿಸಿವೆ. ಇದು ಕೂಟದಲ್ಲಿ ಒಡಕು ಮೂಡಲು ಕಾರಣವಾಗಿದೆ. 

ಆರ್‌ಜೆಡಿ ನಾಯಕ ಮನೋಜ್ ಝಾ ಮಾತನಾಡಿ, 'ಕ್ಷೇತ್ರ ಹಂಚಿಕೆಯ ಬಗ್ಗೆ ಕಾಂಗ್ರೆಸ್, ಜೆಎಂಎಂ ಏಕಪಕ್ಷೀಯ ನಿರ್ಧಾರ ಕೈಗೊಂಡಿವೆ. ಕ್ಷೇತ್ರ ಹಂಚಿಕೆ ಎಂಬುದು 2 ನಿಮಿಷಗಳಲ್ಲಿ ಸಿದ್ದಪಡಿಸುವ ನೂಡಲ್ಸ್ ಅಲ್ಲ. ಇದರಿಂದ ಅಸಮಾಧಾನ ಉಂಟಾಗಿದೆ. ನಮ್ಮ ದಾರಿ ನಾವು ನೋಡಿಕೊಳ್ಳಬೇಕಾಗುತ್ತದೆ' ಎಂದರು.

ಉಪ ಚುನಾವಣೆಗೆ ಬಿಜೆಪಿ ಟಿಕೆಟ್ ಘೋಷಣೆ ಬೆನ್ನಲ್ಲೇ ಕಾಂಗ್ರೆಸ್‌ನಲ್ಲಿ ಮಹತ್ವದ ಸಭೆ!