ಕರ್ನಾಟಕದ ಮಹತ್ವಾಕಾಂಕ್ಷೆಯ ಮೇಕೆದಾಟು ಅಣೆಕಟ್ಟು ಯೋಜನೆಗೆ ತಮಿಳುನಾಡು ವಿಧಾನಸಭೆಯು ಸರ್ವಾನುಮತದಿಂದ ವಿರೋಧದ ನಿರ್ಣಯವನ್ನು ಅಂಗೀಕರಿಸಿದೆ. ಈ ಯೋಜನೆಯು ಸುಪ್ರೀಂ ಕೋರ್ಟ್ ತೀರ್ಪಿನ ಉಲ್ಲಂಘನೆಯಾಗಿದ್ದು, ಇದಕ್ಕೆ ಯಾವುದೇ ಅನುಮತಿ ನೀಡದಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಾಗಿದೆ. ಕರ್ನಾಟಕ ಸಲ್ಲಿಸಿರುವ ವಿವರವಾದ ಯೋಜನಾ ವರದಿಯನ್ನು (DPR) ಪರಿಶೀಲಿಸದಂತೆ ಕೇಂದ್ರ ಜಲ ಆಯೋಗಕ್ಕೂ ಮನವಿ ಮಾಡಲಾಗಿದೆ.

ಚೆನ್ನೈ: ಕಾವೇರಿ ನದಿಗೆ ಅಡ್ಡಲಾಗಿ ಮೇಕೆದಾಟು ಅಣೆಕಟ್ಟೆಯನ್ನು ನಿರ್ಮಿಸುವ ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗೆ ತಮಿಳುನಾಡು ಸರ್ಕಾರ ಮತ್ತೆ ಅಡ್ಡಗಾಲು ಹಾಕಿದೆ. ಮೇಕೆದಾಟು ಜಲಾಶಯ ನಿರ್ಮಾಣದ ವಿರುದ್ಧ ತಮಿಳುನಾಡು ವಿಧಾನಸಭೆಯಲ್ಲಿ ಇಂದು ಅತ್ಯಂತ ಪ್ರಮುಖವಾದ ವಿರೋಧದ ನಿರ್ಣಯವನ್ನು ಸರ್ವಾನುಮತದಿಂದ ಅಂಗೀಕರಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ತಮಿಳುನಾಡಿನ ನೂತನ ಮುಖ್ಯಮಂತ್ರಿ ವಿಜಯ್ ಸಿ. ಜೋಸೆಫ್ ಅವರು ಸದನದಲ್ಲಿ ಈ ನಿರ್ಣಯವನ್ನು ಮಂಡಿಸಿದರು. ವಿಶೇಷವೆಂದರೆ, ಆಡಳಿತ ಪಕ್ಷ ಮಂಡಿಸಿದ ಈ ನಿರ್ಣಯಕ್ಕೆ ತಮಿಳುನಾಡಿನ ವಿರೋಧ ಪಕ್ಷಗಳು ಕೂಡ ಮುಕ್ತ ಬೆಂಬಲ ಸೂಚಿಸಿವೆ. ಪ್ರತಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಹಾಗೂ ಎಐಎಡಿಎಂಕೆ (AIADMK) ಮುಖ್ಯಸ್ಥ ಎಡಪ್ಪಾಡಿ ಪಳನಿಸ್ವಾಮಿ ಸೇರಿದಂತೆ ಇತರೆ ಪಕ್ಷಗಳ ನಾಯಕರು ನಿರ್ಣಯದ ಪರವಾಗಿ ನಿಂತು ಮಾತನಾಡಿದ್ದು, ಕರ್ನಾಟಕದ ನಡೆಯನ್ನು ಒಕ್ಕೊರಲಿನಿಂದ ಖಂಡಿಸಿದರು.

ಅಣೆಕಟ್ಟು ನಿರ್ಮಾಣ ಕರ್ನಾಟಕದ ಏಕಪಕ್ಷೀಯ ನಡೆ: ತಮಿಳುನಾಡು

ಮುಖ್ಯಮಂತ್ರಿ ವಿಜಯ್ ಸಿ. ಜೋಸೆಫ್ ಅವರು ಮಂಡಿಸಿದ ನಿರ್ಣಯದಲ್ಲಿ ಕರ್ನಾಟಕ ಸರ್ಕಾರದ ನಿಲುವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಳ್ಳಲಾಗಿದೆ. 2007ರ ಫೆಬ್ರುವರಿ 5ರ ಕಾವೇರಿ ಜಲ ವಿವಾದ ನ್ಯಾಯಮಂಡಳಿಯ (CWDT) ಅಂತಿಮ ತೀರ್ಪು ಮತ್ತು 2018ರ ಫೆಬ್ರುವರಿ 16ರ ಸುಪ್ರೀಂ ಕೋರ್ಟ್‌ ನೀಡಿರುವ ಐತಿಹಾಸಿಕ ತೀರ್ಪನ್ನು ಉಲ್ಲಂಘಿಸಿ, ಮೇಕೆದಾಟುವಿನಲ್ಲಿ ಕಾವೇರಿ ನದಿಗೆ ಅಡ್ಡಲಾಗಿ ಸಮತೋಲನ ಜಲಾಶಯ ನಿರ್ಮಿಸಲು ಕರ್ನಾಟಕ ಸರ್ಕಾರವು ಏಕಪಕ್ಷೀಯ ಪ್ರಯತ್ನ ನಡೆಸುತ್ತಿದೆ. ಈ ಕ್ರಮಕ್ಕೆ ಈ ಗೌರವಾನ್ವಿತ ಸದನವು ತನ್ನ ತೀವ್ರ ಆಕ್ಷೇಪಣೆಯನ್ನು ದಾಖಲಿಸುತ್ತದೆ ಎಂದು ನಿರ್ಣಯದಲ್ಲಿ ಉಲ್ಲೇಖಿಸಲಾಗಿದೆ.

ಕರ್ನಾಟಕ ಸರ್ಕಾರವು ಕಾವೇರಿ ಜಲಾನಯನ ಪ್ರದೇಶದ ಕೆಳಹಂತದ ರಾಜ್ಯಗಳ (ತಮಿಳುನಾಡು, ಪುದುಚೇರಿ) ಯಾವುದೇ ಪೂರ್ವ ಒಪ್ಪಿಗೆಯನ್ನು ಪಡೆದಿಲ್ಲ ಮತ್ತು ಕೇಂದ್ರ ಸರ್ಕಾರದಿಂದಲೂ ಈ ಯೋಜನೆಗೆ ಅಧಿಕೃತ ಅನುಮೋದನೆ ದೊರೆತಿಲ್ಲ. ಇಂತಹ ಪರಿಸ್ಥಿತಿಯಲ್ಲಿ ಕರ್ನಾಟಕ ಕೈಗೊಂಡಿರುವ ಕ್ರಮಗಳು ಯಾವುದೇ ಕಾರಣಕ್ಕೂ ಸ್ವೀಕಾರಾರ್ಹವಲ್ಲ ಎಂದು ತಮಿಳುನಾಡು ತನ್ನ ನಿಲುವನ್ನು ಪ್ರತಿಪಾದಿಸಿದೆ.

ಯಾವುದೇ ಅನುಮತಿ ನೀಡದಂತೆ ಕೇಂದ್ರಕ್ಕೆ ಒತ್ತಾಯ

ಕಾವೇರಿ ವಿಷಯವು ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವಿನ ಅತ್ಯಂತ ಸೂಕ್ಷ್ಮ ಹಾಗೂ ಭಾವನಾತ್ಮಕ ವಿಷಯವಾಗಿದೆ. ಹೀಗಾಗಿ ಕೇಂದ್ರ ಸರ್ಕಾರವು ಈ ಪ್ರಕರಣದಲ್ಲಿ ತಕ್ಷಣವೇ ಮಧ್ಯಪ್ರವೇಶಿಸಬೇಕು ಎಂದು ನಿರ್ಣಯದ ಮೂಲಕ ಒತ್ತಾಯಿಸಲಾಗಿದೆ.

ಕರ್ನಾಟಕ ಸರ್ಕಾರ ಪ್ರಸ್ತಾಪಿಸಿರುವ ಮೇಕೆದಾಟು ಅಣೆಕಟ್ಟು ಯೋಜನೆಗೆ ಕೇಂದ್ರ ಸರ್ಕಾರವು ಯಾವುದೇ ರೀತಿಯ ತಾಂತ್ರಿಕ, ಆಡಳಿತಾತ್ಮಕ ಅಥವಾ ಪರಿಸರ ಅನುಮತಿಗಳನ್ನು (Environmental Clearance) ನೀಡಬಾರದು ಎಂದು ಸದನವು ಆಗ್ರಹಿಸಿದೆ. ಕಾವೇರಿ ಜಲಾನಯನ ಪ್ರದೇಶವು ಈಗಾಗಲೇ ಮಳೆ ಕೊರತೆಯನ್ನು ಎದುರಿಸುತ್ತಿರುವ ಜಲಾನಯನ ಪ್ರದೇಶವಾಗಿದ್ದು, ಇಲ್ಲಿ ಲಭ್ಯವಿರುವ ಒಟ್ಟು ನೀರನ್ನು ನ್ಯಾಯಮಂಡಳಿ ಮತ್ತು ಸುಪ್ರೀಂ ಕೋರ್ಟ್ ಈಗಾಗಲೇ ಹಂಚಿಕೆ ಮಾಡಿವೆ. ಆದ್ದರಿಂದ, ಈ ಭಾಗದಲ್ಲಿ ಯಾವುದೇ ಹೊಸ ಯೋಜನೆಗಳನ್ನು ಕೈಗೊಳ್ಳಲು ಅಥವಾ ಹೆಚ್ಚುವರಿ ನೀರನ್ನು ಸಂಗ್ರಹಿಸಲು ಕರ್ನಾಟಕಕ್ಕೆ ಅವಕಾಶ ನೀಡಬಾರದು ಎಂದು ನಿರ್ಣಯದಲ್ಲಿ ಸ್ಪಷ್ಟಪಡಿಸಲಾಗಿದೆ.

ಡಿಪಿಆರ್ ಪರಿಶೀಲಿಸದಂತೆ ಕೇಂದ್ರ ಜಲ ಆಯೋಗಕ್ಕೆ ಮನವಿ

ತಮಿಳುನಾಡಿನ ರೈತರ ಹಿತಾಸಕ್ತಿಯನ್ನು ರಕ್ಷಿಸುವ ಉದ್ದೇಶದಿಂದ ತಮಿಳುನಾಡು ಸರ್ಕಾರವು ಕೇಂದ್ರ ಜಲ ಆಯೋಗಕ್ಕೆ (CWA) ವಿಶೇಷ ಮನವಿಯೊಂದನ್ನು ಮಾಡಿದೆ. ಕರ್ನಾಟಕ ಸರ್ಕಾರವು ಮೇಕೆದಾಟು ಯೋಜನೆಗೆ ಸಂಬಂಧಿಸಿದಂತೆ ಸಲ್ಲಿಸಿರುವ ವಿವರವಾದ ಯೋಜನಾ ವರದಿ (DPR) ಯನ್ನು ಆಯೋಗವು ಪರಿಶೀಲಿಸಬಾರದು, ಯಾವುದೇ ಪ್ರಕ್ರಿಯೆಗೆ ಒಳಪಡಿಸಬಾರದು ಮತ್ತು ಯಾವುದೇ ಕಾರಣಕ್ಕೂ ಅನುಮೋದನೆ ನೀಡಬಾರದು ಎಂದು ತಮಿಳುನಾಡು ಸರ್ಕಾರ ಕಟ್ಟುನಿಟ್ಟಿನ ಒತ್ತಾಯ ಹೇರಿದೆ.

ಮೇಕೆದಾಟು ಯೋಜನೆಯು ಚಾಲ್ತಿಯಲ್ಲಿರುವ ಅಸ್ತಿತ್ವದ ಕಾನೂನು ನಿಯಮಗಳನ್ನು ನೇರವಾಗಿ ಉಲ್ಲಂಘಿಸುತ್ತಿದ್ದು, ಕಾವೇರಿ ನೀರಿನ ಮೇಲಿನ ತಮಿಳುನಾಡಿನ ಕಾನೂನುಬದ್ಧ ಹಕ್ಕುಗಳಿಗೆ ಭಾರಿ ಪ್ರತಿಕೂಲ ಪರಿಣಾಮ ಉಂಟುಮಾಡಲಿದೆ ಎಂದು ತಮಿಳುನಾಡು ವಿಧಾನಸಭೆಯ ಎಲ್ಲ ಸದಸ್ಯರು ಒಮ್ಮತದಿಂದ ಆತಂಕ ವ್ಯಕ್ತಪಡಿಸಿದ್ದಾರೆ. ಯಾವುದೇ ಭಿನ್ನಾಭಿಪ್ರಾಯವಿಲ್ಲದೆ ಈ ನಿರ್ಣಯ ಅಂಗೀಕಾರವಾಗಿರುವುದು ಕಾವೇರಿ ವಿಚಾರದಲ್ಲಿ ತಮಿಳುನಾಡಿನ ರಾಜಕೀಯ ಪಕ್ಷಗಳ ಒಗ್ಗಟ್ಟನ್ನು ಮತ್ತೊಮ್ಮೆ ಪ್ರದರ್ಶಿಸಿದೆ.