Pawan Khera case: ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನಿಗೆ ಸುಪ್ರೀಂ ಕೋರ್ಟ್ ತಡೆಯಾಜ್ಞೆ ನೀಡಿದೆ. ಅಸ್ಸಾಂನಲ್ಲಿ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ, ಖೇರಾ ಅವರು ಅಸ್ಸಾಂ ನ್ಯಾಯಾಲಯದಲ್ಲೇ ಜಾಮೀನು ಪಡೆಯಬೇಕು ಎಂದು ನ್ಯಾಯಾಲಯ ಸೂಚಿಸಿದೆ.
ನವದೆಹಲಿ (ಏ.15): ಕಾಂಗ್ರೆಸ್ ನಾಯಕ ಪವನ್ ಖೇರಾ ಅವರಿಗೆ ಸುಪ್ರೀಂ ಕೋರ್ಟ್ನಲ್ಲಿ ಭಾರಿ ಹಿನ್ನಡೆಯಾಗಿದೆ. ಅಸ್ಸಾಂ ಪೊಲೀಸರು ದಾಖಲಿಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಲಂಗಾಣ ಹೈಕೋರ್ಟ್ ನೀಡಿದ್ದ ಮಧ್ಯಂತರ ಜಾಮೀನು ಆದೇಶಕ್ಕೆ ಸುಪ್ರೀಂ ಕೋರ್ಟ್ ಇಂದು ತಡೆಯಾಜ್ಞೆ ನೀಡಿದೆ. ನ್ಯಾಯವ್ಯಾಪ್ತಿಯನ್ನು ಮೀರಿ ಹೈಕೋರ್ಟ್ ಈ ಆದೇಶ ನೀಡಿದೆ ಎಂದು ಅಭಿಪ್ರಾಯಪಟ್ಟಿರುವ ನ್ಯಾಯಾಲಯ, ಖೇರಾ ಅವರು ಅಸ್ಸಾಂ ನ್ಯಾಯಾಲಯದಲ್ಲೇ ಜಾಮೀನಿಗಾಗಿ ಅರ್ಜಿ ಸಲ್ಲಿಸಬೇಕು ಎಂದು ಸೂಚಿಸಿದೆ.
ಕಾನೂನಿನ ದುರುಪಯೋಗ: ಸಾಲಿಸಿಟರ್ ಜನರಲ್ ವಾದ
ವಿಚಾರಣೆಯ ವೇಳೆ ಕೇಂದ್ರ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ಪವನ್ ಖೇರಾ ಅವರ ನಡೆಯನ್ನು ತೀವ್ರವಾಗಿ ವಿರೋಧಿಸಿದರು. 'ಈ ಪ್ರಕರಣದಲ್ಲಿ ತೆಲಂಗಾಣ ಹೈಕೋರ್ಟ್ಗೆ ಯಾವುದೇ ಅಧಿಕಾರ ವ್ಯಾಪ್ತಿ ಇಲ್ಲ. ಎಫ್ಐಆರ್ ದಾಖಲಾಗಿರುವುದು, ಅಪರಾಧ ನಡೆದಿರುವುದು ಅಸ್ಸಾಂನಲ್ಲಿ. ಆದರೆ ಆರೋಪಿಯು ತನ್ನ ಪತ್ನಿ ಹೈದರಾಬಾದ್ನಲ್ಲಿದ್ದಾರೆ ಎಂಬ ಕ್ಷುಲ್ಲಕ ಕಾರಣ ನೀಡಿ ಅಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಇದು ಕಾನೂನಿನ ಸ್ಪಷ್ಟ ದುರುಪಯೋಗ' ಎಂದು ವಾದಿಸಿದರು.
ಅನುಕೂಲಕರ ಸ್ಥಳದ ಹುಡುಕಾಟಕ್ಕೆ ಕೋರ್ಟ್ ಗರಂ
'ಯಾರಾದರೂ ನಾಗಾಲ್ಯಾಂಡ್ನಲ್ಲಿ ಮನೆ ಬಾಡಿಗೆಗೆ ಪಡೆದು ಅಲ್ಲಿ ಅರ್ಜಿ ಸಲ್ಲಿಸಿದರೆ ಹೇಗೆ?' ಎಂದು ಸಾಲಿಸಿಟರ್ ಜನರಲ್ ಪ್ರಶ್ನಿಸಿದಾಗ ನ್ಯಾಯಾಧೀಶರು ಸಹಮತ ವ್ಯಕ್ತಪಡಿಸಿದರು. ಆರೋಪಿಯು ತನಗೆ ಅನುಕೂಲಕರವಾದ ಸ್ಥಳದಲ್ಲಿ ಅರ್ಜಿ ಸಲ್ಲಿಸಲು ಯತ್ನಿಸಿರುವುದು ಕಂಡುಬರುತ್ತಿದೆ ಎಂದು ನ್ಯಾಯಾಲಯ ಹೇಳಿತು. ಸದ್ಯಕ್ಕೆ ಹೈಕೋರ್ಟ್ ಆದೇಶಕ್ಕೆ ತಡೆ ನೀಡಿರುವ ಸುಪ್ರೀಂ ಕೋರ್ಟ್, ಈ ಬಗ್ಗೆ ನೋಟಿಸ್ ಜಾರಿ ಮಾಡಿದ್ದು, ಮುಂದಿನ ಮೂರು ವಾರಗಳಲ್ಲಿ ವಿಚಾರಣೆ ನಡೆಸುವುದಾಗಿ ತಿಳಿಸಿದೆ.
ತೆಲಂಗಾಣ ಹೈಕೋರ್ಟ್ ನೀಡಿದ್ದ ರಕ್ಷಣೆ ಏನಾಗಿತ್ತು?
ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರ ಪತ್ನಿ ರಿಂಕಿ ಭುಯಾನ್ ಶರ್ಮಾ ಸಲ್ಲಿಸಿದ್ದ ದೂರಿನ ಮೇರೆಗೆ ಅಸ್ಸಾಂ ಪೊಲೀಸರು ಪವನ್ ಖೇರಾ ವಿರುದ್ಧ ಪ್ರಕರಣ ದಾಖಲಿಸಿದ್ದರು. ಈ ಸಂಬಂಧ ಬಂಧನ ಭೀತಿಯಲ್ಲಿದ್ದ ಖೇರಾ ಅವರಿಗೆ ತೆಲಂಗಾಣ ಹೈಕೋರ್ಟ್ ಏಪ್ರಿಲ್ 10 ರಂದು ಒಂದು ವಾರದ ಮಟ್ಟಿಗೆ ಮಧ್ಯಂತರ ನಿರೀಕ್ಷಣಾ ಜಾಮೀನು ನೀಡಿತ್ತು. ಈಗ ಸುಪ್ರೀಂ ಕೋರ್ಟ್ ರದ್ದುಪಡಿಸಿದೆ.
ಅಸ್ಸಾಂ ಪೊಲೀಸರಿಂದ ದಾಖಲಾಗಿದೆ ಗಂಭೀರ ಪ್ರಕರಣ
ಗುವಾಹಟಿ ಅಪರಾಧ ಶಾಖೆಯ ಪೊಲೀಸ್ ಠಾಣೆಯಲ್ಲಿ ಪವನ್ ಖೇರಾ ವಿರುದ್ಧ ಮಾನನಷ್ಟ, ನಕಲಿ ದಾಖಲೆ ಸೃಷ್ಟಿ, ಕ್ರಿಮಿನಲ್ ಪಿತೂರಿಯಂತಹ ಗಂಭೀರ ಆರೋಪಗಳ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಬಿಎನ್ಎಸ್ನ 14 ವಿವಿಧ ಸೆಕ್ಷನ್ಗಳ ಅಡಿಯಲ್ಲಿ ಎಫ್ಐಆರ್ ದಾಖಲಾಗಿದ್ದು, ಈಗಾಗಲೇ ಅಸ್ಸಾಂ ಪೊಲೀಸರ ತಂಡ ದೆಹಲಿಯಲ್ಲಿರುವ ಖೇರಾ ಅವರ ನಿವಾಸಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದೆ.
ವಿವಾದಕ್ಕೆ ಕಾರಣವಾದ ಆ ಪತ್ರಿಕಾಗೋಷ್ಠಿ
ಕೆಲವು ದಿನಗಳ ಹಿಂದೆ ಪತ್ರಿಕಾಗೋಷ್ಠಿ ನಡೆಸಿದ್ದ ಪವನ್ ಖೇರಾ, ಅಸ್ಸಾಂ ಸಿಎಂ ಪತ್ನಿ ರಿಂಕಿ ಭುಯಾನ್ ಶರ್ಮಾ ವಿರುದ್ಧ 'ಮುಸ್ಲಿಂ ರಾಷ್ಟ್ರಗಳ ಪಾಸ್ಪೋರ್ಟ್' ಯಾಕೆ ಬೇಕು ಎನ್ನುವ ರೀತಿ ವಿವಾದಾತ್ಮಕ ಆರೋಪಗಳನ್ನು ಮಾಡಿದ್ದರು. 'ರಿಂಕಿ ಅವರು ಮೂರು ದೇಶಗಳ ಪಾಸ್ಪೋರ್ಟ್ ಹೊಂದಿದ್ದಾರೆ, ದುಬೈನಲ್ಲಿ ಅಘೋಷಿತ ಆಸ್ತಿ ಹಾಗೂ ಅಮೆರಿಕದಲ್ಲಿ ಶೆಲ್ ಕಂಪನಿಗಳನ್ನು ಹೊಂದಿದ್ದಾರೆ' ಎಂದು ಖೇರಾ ದೂರಿದ್ದರು. ಈ ಆರೋಪಗಳು ದುರುದ್ದೇಶಪೂರಿತ ಎಂದು ರಿಂಕಿ ಭುಯಾನ್ ಕೋರ್ಟ್ ಮೆಟ್ಟಿಲೇರಿದ್ದಾರೆ.


