ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಯ ಶ್ರೀ ರಾಮ ಮಂದಿರದ ಶಿಖರದ ಮೇಲೆ ಭಗವಾಧ್ವಜವನ್ನು ಹಾರಿಸಿದರು. ಈ ಧ್ವಜವು ಸೂರ್ಯ, 'ಓಂ' ಮತ್ತು ಕೋವಿದಾರ ಮರದ ಚಿಹ್ನೆಗಳನ್ನು ಹೊಂದಿದ್ದು, ರಾಮನ ಸೂರ್ಯವಂಶ ಮತ್ತು ಅಯೋಧ್ಯೆಯ ಸಂಪ್ರದಾಯಗಳನ್ನು ಪ್ರತಿನಿಧಿಸುತ್ತದೆ.
ಅಯೋಧ್ಯಾ : ಅಯೋಧ್ಯೆಯ ಭವ್ಯ ಶ್ರೀ ರಾಮ ಮಂದಿರದ ನಿರ್ಮಾಣಕಾರ್ಯ ಮುಕ್ತಾಯವಾಗಿರುವ ಹಿನ್ನೆಲೆಯಲ್ಲಿ, ಇಂದು ಪ್ರಧಾನಿ ನರೇಂದ್ರ ಮೋದಿಯವರು ಅಯೋಧ್ಯೆಗೆ ಆಗಮಿಸಿ, ದೇಗುಲದ ಶಿಖರದ ಮೇಲೆ 10 ಅಡಿ ಎತ್ತರದ ಭಗವಾಧ್ವಜವನ್ನು ಹಾರಿಸಿದರು.
ಭಗವಾಧ್ವಜ ಆರೋಹಣ ಮಾಡುವ ನಿಮಿತ್ತ ಸೋಮವಾರದಿಂದಲೇ ಅಯೋಧ್ಯೆಯಲ್ಲಿ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿದ್ದವು. ಇಂದು ಬೆಳಿಗ್ಗೆ 11:58ರಿಂದ ಮಧ್ಯಾಹ್ನ 1 ಗಂಟೆ ನಡುವಿನ ಶುಭ ಮುಹೂರ್ತದಲ್ಲಿ ಧ್ವಜಾರೋಹಣ ನೆರವೇರಿದೆ. ಈ ದಿನ ಮಾರ್ಗಶಿರ ಶುಕ್ಲ ಪಂಚಮಿ ತಿಥಿಯಾಗಿದ್ದು, ಇದೇ ದಿನ ಶ್ರೀರಾಮ ಮತ್ತು ಸೀತೆಯರ ವಿವಾಹವಾಗಿತ್ತು. ಅಯೋಧ್ಯೆಯಲ್ಲಿ 48 ಗಂಟೆಗಳ ಕಾಲ ಅಖಂಡ ತಪಸ್ಸು ಕೈಗೊಂಡ ಸಿಖ್ ಗುರು ತೇಗಬಹದ್ದೂರರ ಬಲಿದಾನ ದಿನವೂ ಇವತ್ತೇ ಬಂದಿದೆ. ಹಾಗಾಗಿ ಇದೇ ದಿನ ಈ ಮಂಗಳಕಾರ್ಯವನ್ನು ಹಮ್ಮಿಕೊಳ್ಳಲಾಗಿತ್ತು.
ಭಗವಾಧ್ವಜದ ವಿಶೇಷತೆ:
ಶಿಖರದ ಮೇಲೆ ಸ್ಥಾಪಿಸಲಾದ 42 ಅಡಿ ಎತ್ತರದ ಧ್ವಜಸ್ತಂಭವನ್ನು 360 ಡಿಗ್ರಿ ತಿರುಗುವಂತೆ ವಿನ್ಯಾಸಗೊಳಿಸಲಾಗಿದೆ. ಧ್ವಜವು ಕೇಸರಿ ಬಣ್ಣ ಹಾಗೂ ತ್ರಿಕೋನಾಕೃತಿಯಲ್ಲಿದೆ. 10 ಅಡಿ ಎತ್ತರ ಮತ್ತು 20 ಅಡಿ ಉದ್ದವಿದೆ. ಇದರ ಮೇಲೆ ಸೂರ್ಯ, ‘ಓಂ’ ಹಾಗೂ ಕೋವಿದಾರ ಮರವನ್ನು ಚಿತ್ರಿಸಲಾಗಿದೆ. ಸೂರ್ಯನ ಚಿತ್ರ ರಾಮನ ವಂಶವಾದ ಸೂರ್ಯವಂಶವನ್ನು ಸೂಚಿಸುತ್ತದೆ. ‘ಓಂ’ ಶುಭಸೂಚಕವಾಗಿದ್ದು, ಕೋವಿದಾರ ಮರವು ಅಯೋಧ್ಯೆಯ ಪ್ರಾಚೀನ ಸಂಪ್ರದಾಯಗಳನ್ನು ಪ್ರತಿನಿಧಿಸುತ್ತದೆ.
ಭಗವಾಧ್ವಜ ಹಾರಿಸುವ ಮುನ್ನ ಶೇಷಾವತಾರ ಮಂದಿರ, ಸಪ್ತಮಂದಿರ, ಮಾತಾ ಅನ್ನಪೂರ್ಣ ಮಂದಿರಗಳಿಗೆ ತೆರಳಿ ದರ್ಶನ ಪಡೆದುಕೊಂಡರು. ಬಾಲರಾಮನ ದರ್ಶನ ಪಡೆದ ಬಳಿಕ ರಾಮದರ್ಬಾರ್ನಲ್ಲಿ ಪೂಜೆ ನೆರವೇರಿಸಿದರು.


