ಹಿಂಡಲಗಾ ಜೈಲಿನಲ್ಲಿದ್ದ ಜಯೇಶ್ ಪೂಜಾರಿ, ಉಗ್ರ ಅಪ್ಸರ್ ಪಾಷಾ ಜೊತೆ ಸೇರಿ ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದನು ಎಂದು ಮಹಾರಾಷ್ಟ್ರ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ. ಕೇಂದ್ರ ಸಚಿವ ನಿತೀನ್ ಗಡ್ಕರಿಗೆ ಜೀವ ಬೆದರಿಕೆ ಹಾಕಿ ₹100 ಕೋಟಿಗೆ ಬೇಡಿಕೆಯಿಟ್ಟಿದ್ದ ಆರೋಪಿ.

ಬೆಳಗಾವಿ (ಏ.25): ಹಿಂಡಲಗಾ ಕೇಂದ್ರ ಕಾರಾಗೃಹ ಉಗ್ರ ಚಟುವಟಿಕೆಗಳ ತಾಣವಾಗುತ್ತಿದೆ ಎಂಬ ಗಂಭೀರ ಆರೋಪಗಳ ಮಧ್ಯೆಯೇ ಮಹಾರಾಷ್ಟ್ರ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ ಹೇಳಿಕೆಯಲ್ಲಿ ಈ ವಿಷಯ ದೃಢಪಟ್ಟಿದೆ.

Add Asianetnews Kannada as a Preferred SourcegooglePreferred

ಬೆಂಗಳೂರು ಮತ್ತು ಢಾಕಾ ಸ್ಫೋಟ ಪ್ರಕರಣಗಳ ಪ್ರಮುಖ ಆರೋಪಿ ಅಪ್ಸರ್ ಪಾಷಾ ಜೊತೆ ಸೇರಿ ಜಯೇಶ್ ಪೂಜಾರಿ ಉಗ್ರ ಚಟುವಟಿಕೆಯಲ್ಲಿ ತೊಡಗಿದ್ದಾನೆಂಬ ಮಾಹಿತಿ ತನಿಖೆಯಲ್ಲಿ ಬೆಳಕಿಗೆ ಬಂದಿದೆ. ಜಯೇಶ್‌ ಪೂಜಾರಿ ಉಗ್ರ ಸಂಘಟನೆಗಳೊಂದಿಗೆ ಸಂಪರ್ಕ ಹೊಂದಿದ್ದ ಬಗ್ಗೆ ಕೋರ್ಟ್‌ಗೆ ಮಹಾರಾಷ್ಟ್ರ ಪೊಲೀಸರು ಮಾಹಿತಿ ನೀಡಿದ್ದಾರೆ.

ಪ್ರಕರಣವೊಂದರ ವಿಚಾರಣೆ ವೇಳೆ ನಾಗ್ಪುರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ನಾಗ್ಪುರ ಕಾನೂನು ಮತ್ತು ಸುವ್ಯವಸ್ಥೆ ಡಿಸಿಪಿ ನಿಲೇಶ್ ಪಾಳ್ವೆ ಈ ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ. ಹಿಂಡಲಗಾ ಜೈಲಿನಲ್ಲಿದ್ದೇ ಕೇಂದ್ರ ಸಚಿವ ನಿತೀನ್ ಗಡ್ಕರಿ ಅವರಿಗೆ ಜೀವ ಬೆದರಿಕೆ ಹಾಕಿ ₹100 ಕೋಟಿ ಹಣದ ಬೇಡಿಕೆ ಇಟ್ಟಿದ್ದ ಆರೋಪ ಜಯೇಶ್ ಪೂಜಾರಿ ಮೇಲಿದೆ. ಹಣ ನೀಡದಿದ್ದರೆ ಗಡ್ಕರಿ ಅವರ ಮನೆ ಸ್ಫೋಟ ಮಾಡುವುದಾಗಿ ಬೆದರಿಕೆ ಕರೆ ಮಾಡಲಾಗಿತ್ತು ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಎನ್‌ಐಎ ಹಾಗೂ ನಾಗ್ಪುರ ಪೊಲೀಸರು ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ.

2024ರಲ್ಲಿ ಬೆಳಗಾವಿ ನ್ಯಾಯಾಲಯದಲ್ಲೇ ಪಾಕಿಸ್ತಾನ ಪರ ಘೋಷಣೆ ಕೂಗಿದ್ದ ಆರೋಪವೂ ಜಯೇಶ್ ಪೂಜಾರಿ ಮೇಲಿದ್ದು, ಪ್ರಕರಣದ ಗಂಭೀರತೆ ಹೆಚ್ಚಿಸಿದೆ.