ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ದಿನವಾದ ಜನವರಿ 22 ರಂದು ರಜೆ ಘೋಷಣೆ ಮಾಡಿದ ಮಹಾರಾಷ್ಟ್ರ ಸರ್ಕಾರದ ನಿರ್ಧಾರದ ವಿರುದ್ಧ ನಾಲ್ವರು ಕಾನೂನು ವಿದ್ಯಾರ್ಥಿಗಳು ಕೋರ್ಟ್‌ ಮೆಟ್ಟಿಲೇರಿದ್ದಾರೆ.

ಮುಂಬೈ (ಜ.20): ಇಡೀ ದೇಶ ಜನವರಿ 22 ರಂದು ರಾಮಮಂದಿರ ಪ್ರಾಣ ಪ್ರತಿಷ್ಠಾಪನೆ ಮಾಡುವ ಸಂಭ್ರಮದಲ್ಲಿದೆ. ಅಯೋಧ್ಯೆಯಲ್ಲಿ ನಡೆಯಲಿರುವ ಈ ಸಂಭ್ರಮವನ್ನು ಎಲ್ಲರೂ ಕಣ್ತುಂಬಿಕೊಳ್ಳಬೇಕು ಎನ್ನುವ ನಿಟ್ಟಿನಲ್ಲಿ ದೇಶದಲ್ಲಿ ಬಹುತೇಕ ರಾಜ್ಯಗಳು ಜನವರಿ 22ಕ್ಕೆ ಪೂರ್ಣ ಅಥವಾ ಅರ್ಧದಿನ ರಜೆ ಘೋಷಣೆ ಮಾಡಿದೆ. ಇದರಲ್ಲಿ ಮಹಾರಾಷ್ಟ್ರ ಕೂಡ ಒಂದು. ಮಹಾರಾಷ್ಟ್ರದಲ್ಲ ಜನವರಿ 22 ರಂದು ಸಂಪೂರ್ಣ ರಜಾ ದಿನವನ್ನಾಗಿ ಘೋಷಣೆ ಮಾಡಿದೆ. ಮಹಾರಾಷ್ಟ್ರ ಸರ್ಕಾರದ ಈ ನಿರ್ಧಾರ ವಿರುದ್ಧ ನಾಲ್ವರು ಕಾನೂನು ವಿದ್ಯಾರ್ಥಿಗಳು ಬಾಂಬೆ ಹೈಕೋರ್ಟ್‌ ಮೆಟ್ಟಿಲೇರಿದ್ದಾರೆ. ಯಾವ ಆಧಾರದಲ್ಲಿ ಮಹಾರಾಷ್ಟ್ರ ಸರ್ಕಾರ ಅಯೋಧ್ಯೆಯಲ್ಲಿ ನಡೆಯಲಿರುವ ರಾಮ ಮಂದಿರ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮದ ದಿನ ರಜೆ ಘೋಷಣೆ ಮಾಡಿದೆ ಎನ್ನುವುದು ನಿರ್ಧಾರವಾಗಬೇಕು ಎಂದು ತಿಳಿಸಿದ್ದಾರೆ. ಮುಂಬೈನಲ್ಲಿರುವ ಮಹಾರಾಷ್ಟ್ರ ನ್ಯಾಷನಲ್‌ ಲಾ ಯುನಿವರ್ಸಿಟಿ, ಮುಂಬೈನಲ್ಲಿರುವ ಸರ್ಕಾರಿ ಕಾನೂನು ವಿಶ್ವವಿದ್ಯಾಲಯ ಹಾಗೂ ನಿರ್ಮಾ ವಿವಿಯ ಕಾನೂನು ವಿದ್ಯಾರ್ಥಿಗಳು ಕೋರ್ಟ್‌ ಮೆಟ್ಟಿಲೇರಿದ್ದಾರೆ. ಅದಲ್ಲದೆ, ವಿಶೇಷ ಪೀಠವನ್ನು ರಚನೆ ಮಾಡಿ ಭಾನುವಾರವೇ ಈ ಅರ್ಜಿಯ ವಿಚಾರಣೆ ನಡೆಯಬೇಕು ಎಂದು ಮನವಿ ಮಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred