ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಆರ್‌ಸಿಬಿ ವಿಜಯೋತ್ಸವದ ವೇಳೆ ನೂಕುನುಗ್ಗಲಿನಿಂದ 11 ಜನ ಸಾವನ್ನಪ್ಪಿದ ಘಟನೆಗೆ ಕಾಂಗ್ರೆಸ್‌ ಸರ್ಕಾರವೇ ಕಾರಣ ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ. 

ನವದೆಹಲಿ (ಜೂ.5) : ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ನಡೆದ ಆರ್‌ಸಿಬಿ ವಿಜಯೋತ್ಸವದ ವೇಳೆ ನೂಕುನುಗ್ಗಲಿನಿಂದ 11 ಜನ ಸಾವನ್ನಪ್ಪಿರುವ ಸಂದರ್ಭದಲ್ಲಿ ಕ್ರೀಡಾಂಗಣದ ಒಳಗಡೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರು ಐಪಿಎಲ್‌ ಕಪ್‌ಗೆ ಮುತ್ತಿಡುತ್ತಿದ್ದರು ಎಂದು ಕೇಂದ್ರ ಸಚಿವ ಎಚ್‌.ಡಿ.ಕುಮಾರಸ್ವಾಮಿ ಅವರು ಗಂಭೀರವಾಗಿ ಆರೋಪಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಘಟನೆ ಸಂಬಂಧ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿರುವ ಅವರು ಆರ್‌ಸಿಬಿ ವಿಜಯೋತ್ಸವದ ವೇಳೆ ಉಂಟಾದ ಕಾಲ್ತುಳಿತಕ್ಕೆ ಕಾಂಗ್ರೆಸ್‌ ಸರ್ಕಾರವೇ ಕಾರಣ. ಸರಿಯಾದ ಪೂರ್ವಸಿದ್ಧತೆ ಮಾಡಿಕೊಳ್ಳದೆ, ಯಾವುದೇ ಮುನ್ನೆಚ್ಚರಿಕೆ ವಹಿಸದಿರುವುದೇ ಈ ಮಹಾದುರಂತಕ್ಕೆ ನೇರ ಕಾರಣವಾಗಿದೆ. ದುರಂತದ ಹೊಣೆಯನ್ನು ರಾಜ್ಯ ಸರ್ಕಾರವೇ ಹೊತ್ತುಕೊಳ್ಳಬೇಕು. ಗಾಯಾಳುಗಳಿಗೆ ಉತ್ತಮ ಚಿಕಿತ್ಸೆ ಕೊಡಿಸುವುದರ ಜತೆಗೆ ಮೃತರ ಕುಟುಂಬಗಳ ನೆರವಿಗೆ ಸರಕಾರ ಕೂಡಲೇ ಧಾವಿಸಬೇಕು ಎಂದು ಕೇಂದ್ರ ಸಚಿವರು ಒತ್ತಾಯಿಸಿದರು.

ಕಾಲ್ತುಳಿತದ ಸಾವಿನ ಸುದ್ದಿ ನನಗೆ ತೀವ್ರ ದಿಗ್ಭ್ರಮೆ ಉಂಟು ಮಾಡಿದೆ. ಗೆಲುವಿನ ಸಂಭ್ರಮಕ್ಕೆ ಮುನ್ನವೇ ಮುಗ್ಧರ ಜೀವ ನಷ್ಟವಾಗಿರುವುದು ನನಗೆ ಅತೀವ ದುಃಖ ತಂದಿದೆ ಎಂದು ಸಚಿವರು ಮೃತರಿಗೆ ಕಂಬನಿ ಮಿಡಿದಿದ್ದಾರೆ.