ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆಗೆ ಕೇಂದ್ರ ಸರ್ಕಾರಿ ನೌಕರರನ್ನು ಮೇಲ್ವಿಚಾರಕರನ್ನಾಗಿ ನೇಮಿಸಿದ ಚುನಾವಣಾ ಆಯೋಗದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಈ ಮೂಲಕ, ಪಕ್ಷಪಾತದ ಆರೋಪ ಮಾಡಿ ಟಿಎಂಸಿ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದೆ.

ನವದೆಹಲಿ (ಮೇ.2): ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕೇಂದ್ರ ಸರ್ಕಾರಿ ನೌಕರರನ್ನು ಮೇಲ್ವಿಚಾರಕರನ್ನಾಗಿ (Counting Supervisors) ನೇಮಿಸಿರುವ ಕೇಂದ್ರ ಚುನಾವಣಾ ಆಯೋಗದ ನಿರ್ಧಾರವನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಈ ಮೂಲಕ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಸರ್ಕಾರಕ್ಕೆ ದೊಡ್ಡ ಹಿನ್ನಡೆಯಾದಂತಾಗಿದೆ. ಮತ ಎಣಿಕೆ ಕೇಂದ್ರಗಳಲ್ಲಿ ಕೇವಲ ಕೇಂದ್ರ ಸರ್ಕಾರಿ ನೌಕರರು ಮತ್ತು ಸಾರ್ವಜನಿಕ ವಲಯದ ಉದ್ದಿಮೆಗಳ (PSU) ಸಿಬ್ಬಂದಿಯನ್ನು ಮಾತ್ರ ನೇಮಕ ಮಾಡಿರುವುದನ್ನು ಪ್ರಶ್ನಿಸಿ ಟಿಎಂಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಶನಿವಾರ (ಮೇ 2) ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್‌ನ ವಿಶೇಷ ಪೀಠವು ಪ್ರಮುಖ ಅಂಶಗಳನ್ನು ತಿಳಿಸಿದೆ.

ಚುನಾವಣಾ ಆಯೋಗವು ಹೊರಡಿಸಿರುವ ಸುತ್ತೋಲೆಯು ಯಾವುದೇ ನಿಯಮಗಳಿಗೆ ವಿರುದ್ಧವಾಗಿಲ್ಲ. ಮತ ಎಣಿಕೆಗೆ ಯಾರನ್ನು ನೇಮಿಸಬೇಕು ಎಂಬುದು ಚುನಾವಣಾ ಆಯೋಗದ ವಿವೇಚನೆಗೆ ಬಿಟ್ಟ ವಿಚಾರ. ರಾಜ್ಯ ಅಥವಾ ಕೇಂದ್ರ ಸರ್ಕಾರಿ ನೌಕರರನ್ನು ಬಳಸಿಕೊಳ್ಳುವ ಹಕ್ಕು ಆಯೋಗಕ್ಕಿದೆ. ಮತ ಎಣಿಕೆ ಕೊಠಡಿಯಲ್ಲಿ ಸಿಸಿಟಿವಿ ಕ್ಯಾಮೆರಾಗಳು ಮತ್ತು ಮೈಕ್ರೋ ಅಬ್ಸರ್ವರ್‌ಗಳಿರುವುದರಿಂದ ಅಕ್ರಮಕ್ಕೆ ಅವಕಾಶವಿಲ್ಲ ಎಂಬ ಕಲ್ಕತ್ತಾ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಪುರಸ್ಕರಿಸಿದೆ.

ಟಿಎಂಸಿ ಆತಂಕವೇನಿತ್ತು?

ಕೇಂದ್ರದಲ್ಲಿ ಅಧಿಕಾರದಲ್ಲಿರುವ ಬಿಜೆಪಿ ಸರ್ಕಾರವು ತನ್ನ ಅಧೀನದಲ್ಲಿರುವ ನೌಕರರ ಮೂಲಕ ಮತ ಎಣಿಕೆಯಲ್ಲಿ ಅಕ್ರಮ ಎಸಗಬಹುದು ಮತ್ತು ಇದು ಪಕ್ಷಪಾತದ ನಿರ್ಧಾರ ಎಂದು ಟಿಎಂಸಿ ವಾದಿಸಿತ್ತು. "ಇಡೀ ಚುನಾವಣೆಯನ್ನು ರಾಜ್ಯ ಸರ್ಕಾರಿ ನೌಕರರ ಮೂಲಕ ನಡೆಸಿರುವಾಗ, ಮತ ಎಣಿಕೆಗೆ ಮಾತ್ರ ಅವರನ್ನು ಏಕೆ ದೂರ ಇಡಲಾಗಿದೆ?" ಎಂದು ಟಿಎಂಸಿ ಪರ ವಕೀಲರು ಪ್ರಶ್ನಿಸಿದ್ದರು.

ಕೌಂಟಿಂಗ್‌ಗೆ ಕ್ಷಣಗಣನೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಮತ ಎಣಿಕೆಯು ಮೇ 4 ರಂದು ನಡೆಯಲಿದೆ. ಸುಪ್ರೀಂ ಕೋರ್ಟ್‌ನ ಈ ತೀರ್ಪಿನಿಂದಾಗಿ ಈಗ ಇಡೀ ಮತ ಎಣಿಕೆ ಪ್ರಕ್ರಿಯೆಯು ಚುನಾವಣಾ ಆಯೋಗದ ನಿಗದಿತ ಯೋಜನೆಯಂತೆಯೇ ನಡೆಯಲಿದ್ದು, ಕೇಂದ್ರ ಸರ್ಕಾರಿ ನೌಕರರೇ ಮೇಲ್ವಿಚಾರಣೆ ನಡೆಸಲಿದ್ದಾರೆ.