ಪ್ರಧಾನಿ ಮೋದಿ ಅವರ ಕಾರ್ಯಗಳಿಂದ ದೇಶಕ್ಕೆ ಒಳಿತಾಗಿದ್ದು, ಅವರಿಗೆ ಸರಿಸಾಟಿಯಾದ ನಾಯಕರೇ ಇಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಹೇಳಿದ್ದಾರೆ. ಅಲ್ಲದೆ, ರಾಜ್ಯ ಸಚಿವರ ಪ್ರತಿಕ್ರಿಯೆ ಹಾಗೂ ತಮ್ಮ ಅಧಿಕಾರಾವಧಿಯ ಸಾಮಾಜಿಕ ನ್ಯಾಯದ ಕಾರ್ಯಗಳನ್ನು ಅವರು ಸ್ಮರಿಸಿದ್ದಾರೆ.

ಬೆಂಗಳೂರು (ಮೇ.12) ಪ್ರಧಾನಿ ಮೋದಿ ಅವರ ಕಾರ್ಯಕ್ರಮಗಳಿಂದ ದೇಶಕ್ಕೆ ಒಳ್ಳೆಯದಾಗಿದೆ. ಪ್ರಧಾನಿ ಮೋದಿ ಅವರಿಗೆ ಸರಿಸಮಾನವಾದ ನಾಯಕರು ಯಾರೂ ಇಲ್ಲ ಎಂದು ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಸೋಮವಾರ ಕಬ್ಬನ್‌ ಪಾರ್ಕ್‌ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ, ಪ್ರಧಾನಿ ಮೋದಿ ಅವರು ಧ್ಯಾನ ಮಂದಿರ ಉದ್ಘಾಟನೆಗೆ ಬೆಂಗಳೂರಿಗೆ ಬಂದಿದ್ದಾಗ ವಿಮಾನ ನಿಲ್ದಾಣದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುವಾಗ ರಾಜ್ಯ ಸರ್ಕಾರದ ಬಗ್ಗೆ ಮಾತನಾಡಿದ್ದಾರೆ. ಇದಕ್ಕೆ ಸರ್ಕಾರದ ಜವಾಬ್ದಾರಿ ಸ್ಥಾನದಲ್ಲಿರುವ ಮಂತ್ರಿಯೊಬ್ಬರು ತೀಕ್ಷ್ಮ ಪ್ರತಿಕ್ರಿಯೆ ನೀಡಿದ್ದಾರೆ. ಮತ್ತೊಬ್ಬ ಸಚಿವ ಸತೀಶ್‌ ಜಾರಕಿಹೊಳಿ ಅವರು ತಾಳ್ಮೆಯಿಂದ ಮಾತನಾಡಿದ್ದಾರೆ. ಉಳಿದವರ ಬಗ್ಗೆ ನಾನು ಮಾತನಾಡಲ್ಲ ಎಂದರು.

ಯಾರ ಬಗ್ಗೆಯೂ ಟೀಕೆ ಮಾಡಲ್ಲ:

ಈ ದೇಶದ ಆಡಳಿತದ ಬಗ್ಗೆ ನನಗೆ ಸಾಕಷ್ಟು ಅನುಭವವಿದೆ. ನಾನು ಯಾರ ಬಗ್ಗೆಯೂ ಟೀಕೆ ಮಾಡಲ್ಲ. ನಾನು ಅಧಿಕಾರದಲ್ಲಿ ಇದ್ದಾಗ ಸಾಮಾಜಿಕ ನ್ಯಾಯ ಕೊಡುವಾಗ ಯಾರಿಂದಲೂ ಹೇಳಿಸಿಕೊಳ್ಳಲಿಲ್ಲ. ಯಾವುದೇ ಜಾತಿ ಹಿನ್ನೆಲೆ ನೋಡಿ ಸಾಮಾಜಿಕ ನ್ಯಾಯ ಕೊಡಲಿಲ್ಲ. ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದ ಎಲ್ಲ ಜಾತಿಗಳಿಗೂ ಸಾಮಾಜಿಕ ನ್ಯಾಯ ಕೊಡಲು ಶಕ್ತಿ ಮೀರಿ ಪ್ರಯತ್ನ ಮಾಡಿದ್ದೇನೆ. ಮುಸ್ಲಿಂ, ಕ್ರಿಶ್ಚಿಯನ್‌ಗಳಿಗೂ ಅನುಕೂಲ ಮಾಡಿದ್ದೇನೆ ಎಂದು ಹೇಳಿದರು.

ಪ್ರಧಾನಿ ಮೋದಿ ಸಲಹೆ ಬಗ್ಗೆ ದೇವೇಗೌಡರು ಹೇಳಿದ್ದೇನು?

ತೆಲಂಗಾಣದಲ್ಲಿ ಪ್ರಧಾನಿ ಮೋದಿ ಅವರು ಕೆಲ ಸಲಹೆಗಳನ್ನು ನೀಡಿದ್ದಾರೆ. ಇರಾನ್‌-ಅಮೆರಿಕ-ಇಸ್ರೇಲ್‌ ಯುದ್ಧದ ದುಷ್ಪರಿಣಾಮದಿಂದ ಜಾಗತಿಕ ಇಂಧನ ಬಿಕ್ಕಟ್ಟು ಎದುರಾಗಿದೆ. ಹೀಗಾಗಿ ದಿನ ಬಳಕೆಯಲ್ಲಿ ಪೆಟ್ರೋಲ್‌-ಡೀಸೆಲ್‌ ಮಿತವಾಗಿ ಬಳಸಿ ಎಂದು ಸಲಹೆ ಕೊಟ್ಟಿದ್ದಾರೆ ಎಂದು ಗೌಡರು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.