ಕ್ರಿಶ್ಚಿಯನ್ ಸೇರಿದಂತೆ ಇತರೆ ಧರ್ಮಕ್ಕೆ ಮತಾಂತರಗೊಳ್ಳುವ ಪರಿಶಿಷ್ಟ ಜಾತಿ ಸಮುದಾಯದ ವ್ಯಕ್ತಿಗಳು, ಆ ಸಮುದಾಯಕ್ಕೆ ಸಿಗುವ ಪ್ರಯೋಜನಗಳನ್ನು ಪಡೆಯಲು ಅರ್ಹರಲ್ಲ ಎಂದು ಸುಪ್ರೀಂಕೋರ್ಟ್ ಸ್ಪಷ್ಟಪಡಿಸಿದೆ. ಹಿಂದೂ, ಸಿಖ್ ಮತ್ತು ಬೌದ್ಧ ಧರ್ಮದವರನ್ನು ಮಾತ್ರ ಪರಿಶಿಷ್ಟ ಜಾತಿ ಎಂದು ಪರಿಗಣಿಸಬಹುದು ಎಂಬ ಆಂಧ್ರಪ್ರದೇಶ ಹೈಕೋರ್ಟ್ ತೀರ್ಪನ್ನು ನ್ಯಾಯಾಲಯ ಎತ್ತಿಹಿಡಿದಿದೆ.
ಕ್ರಿಶ್ಚಿಯನ್ ಸೇರಿದಂತೆ ಯಾವುದೇ ಇತರ ಧರ್ಮಕ್ಕೆ ಮತಾಂತರಗೊಳ್ಳುವ ವ್ಯಕ್ತಿಯು ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರಿಂದ ಪಡೆಯಬೇಕಾದ ಪ್ರಯೋಜನಗಳನ್ನು ಪಡೆಯಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್ ಇಂದು ಹೇಳಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಉಲ್ಲಂಘನೆಯನ್ನು ಹೇಳಿಕೊಳ್ಳುವಂತಿಲ್ಲ ಎಂದೂ ಕೋರ್ಟ್ ಸ್ಪಷ್ಟಪಡಿಸಿದೆ. ಹಿಂದೂಗಳು, ಸಿಖ್ಖರು ಮತ್ತು ಬೌದ್ಧರು ಮಾತ್ರ ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರೆಂದು ಹೇಳಿಕೊಳ್ಳಬಹುದು ಎಂಬ ಆಂಧ್ರಪ್ರದೇಶ ಹೈಕೋರ್ಟ್ ತೀರ್ಪನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯುವ ಮೂಲಕ ಸುಪ್ರೀಂಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ.
ಏನಿದು ಕೇಸ್?
ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡು ಪಾದ್ರಿಯಾಗಿ ಕಾರ್ಯನಿರ್ವಹಿಸಿದ ವ್ಯಕ್ತಿಯೊಬ್ಬರು ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿದಂತೆ ಈ ತೀರ್ಪು ಹೊರಬಿದ್ದಿದೆ. ಇವರ ಮೇಲೆ ಹಲ್ಲೆ ನಡೆದಾಗ, ಇವರು ಹಲ್ಲೆ ಮಾಡಿದ ವ್ಯಕ್ತಿಗಳ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದರು. ಆದರೆ, ಅವರು ಮತಾಂತರವಾಗಿರುವ ಹಿನ್ನೆಲೆಯಲ್ಲಿ ಈ ಕಾಯ್ದೆಯ ಅಡಿಯಲ್ಲಿ ಪ್ರಯೋಜನ ಪಡೆದುಕೊಳ್ಳಲು ಸಾಧ್ಯವಿಲ್ಲ ಎಂದು ಆಂಧ್ರಪ್ರದೇಶದ ಹೈಕೋರ್ಟ್ ಹೇಳಿತ್ತು. ಈ ಆದೇಶವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸಲಾಗಿತ್ತು. ಆದರೆ ನ್ಯಾಯಮೂರ್ತಿ ಪಿ.ಕೆ. ಮಿಶ್ರಾ ನೇತೃತ್ವದ ಪೀಠವು, ಮೇಲ್ಮನವಿಯನ್ನು ಮಾನ್ಯ ಮಾಡಲಿಲ್ಲ.
ಕೋರ್ಟ್ ಹೇಳಿದ್ದೇನು?
ಈ ವೇಳೆ ಪೀಠವು ಸಂವಿಧಾನದಲ್ಲಿ ಉಲ್ಲೇಖವಾಗಿರುವ ಅಂಶಗಳನ್ನು ತೀರ್ಪಿನಲ್ಲಿ ಉಲ್ಲೇಖಿಸಿದೆ. ಸಂವಿಧಾನ (ಪರಿಶಿಷ್ಟ ಜಾತಿ) ಆದೇಶದ ಷರತ್ತು 3 ರನ್ನು ಉಲ್ಲೇಖಿಸಿದ, ನ್ಯಾಯಮೂರ್ತಿ ಪಿ.ಕೆ. ಮಿಶ್ರಾ ನೇತೃತ್ವದ ಪೀಠವು, ಇದರಲ್ಲಿ ಹಿಂದೂ ಧರ್ಮಕ್ಕಿಂತ ಭಿನ್ನವಾದ ಧರ್ಮವನ್ನು ಪ್ರತಿಪಾದಿಸುವ ಯಾವುದೇ ವ್ಯಕ್ತಿಯನ್ನು ಪರಿಶಿಷ್ಟ ಜಾತಿಯ ಸದಸ್ಯ ಎಂದು ಪರಿಗಣಿಸಲಾಗುವುದಿಲ್ಲ ಎಂದು ಸ್ಪಷ್ಟಪಡಿಸಲಾಗಿದೆ ಎಂದಿದೆ. ಕ್ರೈಸ್ತ ಅಥವಾ ಇನ್ನಾವುದೇ ಧರ್ಮಕ್ಕೆ ಮತಾಂತರಗೊಳ್ಳುವ ಪರಿಶಿಷ್ಟ ಜಾತಿಯ ವ್ಯಕ್ತಿಯು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯ ಉಲ್ಲಂಘನೆಯನ್ನು ಹೇಳಿಕೊಳ್ಳುವಂತಿಲ್ಲ ಎಂದೂ ಹೇಳಿದರು.
"ಸಂವಿಧಾನ ಅಥವಾ ಸಂಸತ್ತು ಅಥವಾ ರಾಜ್ಯ ಶಾಸಕಾಂಗದ ಅಡಿಯಲ್ಲಿ ಯಾವುದೇ ಶಾಸನಬದ್ಧ ಪ್ರಯೋಜನ, ರಕ್ಷಣೆ ಅಥವಾ ಮೀಸಲಾತಿ ಅಥವಾ ಅರ್ಹತೆ ಇಂಥವರಿಗೆ ಅನ್ವಯ ಆಗುವುದಿಲ್ಲ ಎಂದು ನ್ಯಾಯಮೂರ್ತಿಗಳು ಹೇಳಿದ್ದಾರೆ.


