ಹಿಂದೂ ಸಂಘಟನೆಗಳ ಹೋರಾಟಕ್ಕೆ ಹಿನ್ನಡೆಯಾಗಿದೆ. ವಿವಾದಿತ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಸಪ್ರೀಂ ಕೋರ್ಟ್ ಅನುಮತಿ ನೀಡಲು ನಿರಾಕರಿಸಿದೆ.  

ನವದೆಹಲಿ(ಆ.30): ಚಾಮರಾಜಪೇಟೆ ಈದ್ಗಾ ಮೈದಾನ ವಿವಾದ ಕುರಿತು ಸುಪ್ರೀಂ ಕೋರ್ಟ್ ಮಹತ್ವದ ಆದೇಶ ನೀಡಿದೆ. ಈದ್ಗಾ ಮೈದಾನದಲ್ಲಿ ಯಥಾ ಸ್ಥಿತಿ ಕಾಪಾಡಿಕೊಳ್ಳುವಂತೆ ಸುಪ್ರೀಂ ಕೋರ್ಟ್ ಆದೇಶ ನೀಡಿದೆ. ಈ ಮೂಲಕ ಹಿಂದೂ ಸಂಘಟನೆಗಳ ಗಣೇಶೋತ್ಸವ ಆಚರಣೆಗೆ ಸುಪ್ರೀಂ ಕೋರ್ಟ್ ಬ್ರೇಕ್ ಹಾಕಿದೆ. ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದ ವಕ್ಫ್ ಬೋರ್ಡ್ ಅರ್ಜಿಯನ್ನು ಪುರಸ್ಕರಿಸಿದ ಸುಪ್ರೀಂ ಕೋರ್ಟ್, ಇಲ್ಲಿಯವರೆಗೆ ಮುಸ್ಲಿಂ ಸಮುದಾಯ ರಂಜಾನ್ ಸೇರಿದಂತೆ 2 ಹಬ್ಬ ಆಚರಣೆ ಮಾಡಲಾಗುತ್ತಿತ್ತು. ಅದೇ ಸ್ಥಿತಿ ಮುಂದುವರಿಸುವಂತೆ ಸುಪ್ರೀಂ ಕೋರ್ಟ್ ಸೂಚಿಸಿದೆ. ಹಿಂದೂ ಸಂಘಟನೆಗಳು ಬೇರೆ ಕಡೆ ಗಣೇಶೋತ್ಸವ ಆಚರಣೆ ಮಾಡಲು ಸುಪ್ರೀಂ ಕೋರ್ಟ್ ಸೂಚಿಸಿದೆ. ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಇದುವರೆಗೆ ಯಾವ ವಿಧಾನದಲ್ಲಿ ಆಚರಣೆಗಳು ನಡೆಯುತ್ತಿದೆಯೋ ಅದೆ ರೀತಿಯಲ್ಲಿ ಮುಂದುವರಿಯಲಿ. 200 ವರ್ಷಗಳಿಂದ ಇಲ್ಲದ ಗಣೇಶೋತ್ಸವ ಈಗ ಈದ್ಗಾ ಮೈದಾನದಲ್ಲಿ ಯಾಕೆ ಎಂದು ಸುಪ್ರೀಂ ಕೋರ್ಟ್ ಪ್ರಶ್ನಿಸಿದೆ.

Add Asianetnews Kannada as a Preferred SourcegooglePreferred

ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧಾರ್ಮಿಕ ಹಾಗೂ ಸಾಂಸ್ಕೃತಿ ಕಾರ್ಯಕ್ರಮಗಳನ್ನು ನಡೆಸುವುದು ಸರ್ಕಾರದ ವಿವೇಚನೆಗೆ ಬಿಟ್ಟ ವಿಚಾರ ಎಂದು ಕರ್ನಾಟಕ ಹೈಕೋರ್ಟ್ ವಿಭಾಗೀಯ ಪೀಠ ಆದೇಶ ನೀಡಿತ್ತು. ಈ ಆದೇಶ ಪ್ರಶ್ನಿಸಿ ಮುಸ್ಲಿಂ ಅಸೋಸಿಯೇಷನ್‌ ಆಫ್‌ ಕರ್ನಾಟಕ, ಕರ್ನಾಟಕ ವಕ್ಫ್ ಬೋರ್ಡ್‌ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು. ಈ ಕುರಿತು ಇಂದು ಸುಪ್ರೀಂ ಕೋರ್ಟ್ ದ್ವಿಸದಸ್ಯ ಪೀಠ ವಿಚಾರಣೆ ನಡೆಸಿತ್ತು. ನ್ಯಾ.ಹೇಮಂತ್‌ ಗುಪ್ತಾ ಹಾಗು ಶುಧಾಂಶು ಧುಲಿಯಾ ದ್ವಿಸದಸ್ಯ ಪೀಠದ ವಿಚಾರಣೆಯಲ್ಲಿ ಭಿನ್ನ ಅಭಿಪ್ರಾಯಗಳು ಮೂಡಿ ಬಂದಿತ್ತು. ಹೀಗಾಗಿ ದ್ವಿಸದಸ್ಯ ಪೀಠ ಈ ಪ್ರಕರಣವನ್ನು ಮುಖ್ಯ ನ್ಯಾಯಮೂರ್ತಿಗಳಿಗೆ ವರ್ಗಾಯಿಸಿತ್ತು. ಸುಪ್ರೀಂ ಕೋರ್ಟ್ ಮುಖ್ಯನ್ಯಾಯೂರ್ತಿ ಯುಯು ಲಲಿತ್ ಈ ಪ್ರಕರಣವನ್ನು ವಿಚಾರಣೆ ನಡೆಸಲು ಜಸ್ಟೀಸ್ ಇಂದಿರಾ ಬ್ಯಾನರ್ಜಿ, ಎಸ್ ಓಕಾ ಹಾಗೂ ಎಂಎಸ್ ಸುಂದರೇಶ್ ಅವರಿದ್ದ ತ್ರಿಸದಸ್ಯ ಪೀಠಕ್ಕೆ ವರ್ಗಾಯಿಸಿದ್ದರು. 

ಮುಸ್ಲಿಂ ಬೋರ್ಡ್ ಮನವಿ ತಿರಸ್ಕರಿಸಿದ ಹೈಕೋರ್ಟ್, ಹುಬ್ಭಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಅನುಮತಿ!

ಗಣೇಶ ಹಬ್ಬಕ್ಕೆ ಅನುಮತಿ ನೀಡಿದ್ದ ಹೈಕೋರ್ಟ್, ಆದೇಶ ರದ್ದುಗೊಳಿಸಿದ ಸುಪ್ರೀಂ
ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಧಾರ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸಲು ಅನುಮತಿ ನೀಡುವ ಅಧಿಕಾರವನ್ನು ಸರ್ಕಾರಕ್ಕೆ ನೀಡಿ ಹೈಕೋರ್ಚ್‌ ವಿಭಾಗೀಯ ಪೀಠ ಆದೇಶಿಸಿತ್ತು. ಈದ್ಗಾ ಮೈದಾನದಲ್ಲಿ ವರ್ಷಕ್ಕೆ ಎರಡು ಬಾರಿ ಪ್ರಾರ್ಥನೆ ಸಲ್ಲಿಸಲು ಮುಸ್ಲಿಮರಿಗೆ ಅವಕಾಶ ನೀಡಲು ಸೂಚಿಸಿ ಏಕ ಸದಸ್ಯ ನ್ಯಾಯಪೀಠ ಹೊರಡಿಸಿದ್ದ ಮಧ್ಯಂತರ ಆದೇಶ ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ವಿಭಾಗೀಯ ಪೀಠ ಈ ಆದೇಶ ನೀಡಿತ್ತು. ಹೀಗಾಗಿ ಆ. 31ರಂದು ಗಣೇಶೋತ್ಸವ ಆಚರಣೆಗೆ ಅವಕಾಶ ಕೋರಿರುವ ಮನವಿಯೂ ಸೇರಿದಂತೆ ಬೆಂಗಳೂರು ನಗರ ಜಿಲ್ಲಾಧಿಕಾರಿಯವರಿಗೆ ಸಲ್ಲಿಕೆಯಾಗಿರುವ ಧಾರ್ಮಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆ ಆಯೋಜನೆಯ ಮನವಿಗಳ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳುವ ಅಧಿಕಾರ ಸರ್ಕಾರಕ್ಕೆ ನೀಡಿತ್ತು. ಆದರೆ ಇದೀಗ ಸುಪ್ರೀಂ ಕೋರ್ಟ್, ಯಥಾಸ್ಥಿತಿ ಕಾಪಾಡಿಕೊಳ್ಳುವಂತೆ ಆದೇಶ ನೀಡಿದೆ. ಈ ಮೂಲಕ ಹಿಂದೂ ಸಂಘಟನೆಗಳ ಹೋರಾಟಕ್ಕೆ ತೀವ್ರ ಹಿನ್ನಡೆಯಾಗಿದೆ.