ಪೋಕ್ಸೋ ಪ್ರಕರಣದಲ್ಲಿ ಸಿಲುಕಿರುವ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ನಿರೀಕ್ಷಣಾ ಜಾಮೀನು ಕೋರಿ ಅಲಹಾಬಾದ್ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ಪ್ರಯಾಗ್‌ರಾಜ್‌ ವಿಶೇಷ ನ್ಯಾಯಾಲಯ ಆದೇಶಿಸಿತ್ತು.

ಲೈಂಗಿಕ ದೌರ್ಜನ್ಯ ಮತ್ತು ಪೋಕ್ಸೋ ಪ್ರಕರಣದಲ್ಲಿ ತಮ್ಮ ವಿರುದ್ಧ ಎಫ್‌ಐಆರ್ ದಾಖಲಾದ ಬೆನ್ನಲ್ಲೇ, ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರು ನಿರೀಕ್ಷಣಾ ಜಾಮೀನು ಕೋರಿ ಅಲಹಾಬಾದ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ವಕೀಲರಾದ ರಾಜರ್ಷಿ ಗುಪ್ತಾ, ಸುಧಾಂಶು ಕುಮಾರ್ ಮತ್ತು ಶ್ರೀ ಪ್ರಕಾಶ್ ಅವರನ್ನೊಳಗೊಂಡ ಕಾನೂನು ತಂಡದ ಮೂಲಕ ಈ ಅರ್ಜಿಯನ್ನು ಸಲ್ಲಿಸಲಾಗಿದೆ. ಅಪ್ರಾಪ್ತರ ಮೇಲೆ ಲೈಂಗಿಕ ಶೋಷಣೆ ನಡೆಸಿದ ಆರೋಪದ ಮೇಲೆ ಪ್ರಯಾಗ್‌ರಾಜ್‌ನ ವಿಶೇಷ ನ್ಯಾಯಾಲಯ ಎಫ್‌ಐಆರ್ ದಾಖಲಿಸಲು ಆದೇಶಿಸಿದ ಕೆಲವೇ ದಿನಗಳಲ್ಲಿ ಸ್ವಾಮೀಜಿ ಈ ಕ್ರಮ ಕೈಗೊಂಡಿದ್ದಾರೆ. ಈ ಅರ್ಜಿಯ ವಿಚಾರಣೆ ಶೀಘ್ರದಲ್ಲೇ ನಡೆಯುವ ಸಾಧ್ಯತೆ ಇದೆ.

ಕೋರ್ಟ್ ಆದೇಶದ ಮೇರೆಗೆ FIR ದಾಖಲು

ತುಳಸಿ ಪೀಠಾಧೀಶ್ವರ ಸ್ವಾಮಿ ರಾಮಭದ್ರಾಚಾರ್ಯರ ಶಿಷ್ಯರಾದ ಅಶುತೋಷ್ ಬ್ರಹ್ಮಚಾರಿ ಅವರು ಸೆಕ್ಷನ್ 173 (4) ಅಡಿಯಲ್ಲಿ ಜಿಲ್ಲಾ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದ ಎಡಿಜೆ ಅತ್ಯಾ೧ಚಾರ ಮತ್ತು ಪೋಕ್ಸೋ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ವಿನೋದ್ ಕುಮಾರ್ ಚೌರಾಸಿಯಾ, ಪ್ರಕರಣ ದಾಖಲಿಸಿ ತನಿಖೆ ನಡೆಸುವಂತೆ ಜುನ್ಸಿ ಪೊಲೀಸರಿಗೆ ಆದೇಶಿಸಿದ್ದರು. ಈ ಕೋರ್ಟ್ ಆದೇಶದಂತೆ ಪೊಲೀಸರು ಇದೀಗ ಎಫ್‌ಐಆರ್ ದಾಖಲಿಸಿದ್ದಾರೆ. ಜುನ್ಸಿ ಪೊಲೀಸ್ ಠಾಣೆಯಲ್ಲಿ ಸ್ವಾಮಿ ಅವಿಮುಕ್ತೇಶ್ವರಾನಂದ, ಅವರ ಶಿಷ್ಯ ಮುಕುಂದಾನಂದ ಗಿರಿ ಮತ್ತು ಗುರುತು ಪತ್ತೆಯಾಗದ ಇಬ್ಬರು ಅಥವಾ ಮೂವರ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಬಿಎನ್‌ಎಸ್ ಕಾಯ್ದೆಯ ಸೆಕ್ಷನ್ 351(3), ಪೋಕ್ಸೋ ಕಾಯ್ದೆಯ ಸೆಕ್ಷನ್ 51, ಹಾಗೂ 6, 3, 4(2), 16 ಮತ್ತು 17ನೇ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.

ಗಮನ ಬೇರೆಡೆ ಸೆಳೆಯುವ ತಂತ್ರ ಎಂದ ಸ್ವಾಮೀಜಿ

ಈ ಮಧ್ಯೆ, ಸೋಮವಾರ ಮಾತನಾಡಿದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ, ತಮ್ಮ ಮೇಲಿನ ಪೋಕ್ಸೋ ಪ್ರಕರಣವನ್ನು 'ಸರ್ಕಾರದ ತಂತ್ರ' ಎಂದು ಕರೆದಿದ್ದಾರೆ. ಗೋಹತ್ಯೆ ನಿಷೇಧದ ಬೇಡಿಕೆಯಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಸರ್ಕಾರ ಹೀಗೆ ಮಾಡುತ್ತಿದೆ ಎಂದು ಅವರು ಆರೋಪಿಸಿದ್ದಾರೆ. ANI ಜೊತೆ ಮಾತನಾಡಿದ ಅವರು, ಸರ್ಕಾರವು ಶಂಕರಾಚಾರ್ಯರ ಮೇಲೆ 'ದಾಳಿ' ನಡೆಸುತ್ತಿದೆ ಎಂದು ದೂರಿದರು. ಅಲ್ಲದೆ, ಪ್ರಕರಣದಲ್ಲಿ ಆರೋಪಿಗಳಾಗಿರುವ ಇತರರಿಗೆ ತಮ್ಮ ಗುರುಕುಲಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ. 'ನಾವು ಕಾಲಕಾಲಕ್ಕೆ ಸಾರ್ವಜನಿಕರನ್ನು ಭೇಟಿಯಾಗುತ್ತೇವೆ. ನಾವು ಧಾರ್ಮಿಕ ನಾಯಕರೂ ಆಗಿರಬೇಕು, ಸರ್ಕಾರವೂ ಆಗಿರಬೇಕು ಎಂದು ಈ ಸರ್ಕಾರ ಬಯಸುತ್ತದೆ. ದೇಶದಲ್ಲಿ ನಾಲ್ವರು ಶಂಕರಾಚಾರ್ಯರಿದ್ದು, ಅವರು ಯಾವಾಗಲೂ ಸನಾತನ ಧರ್ಮವನ್ನು ರಕ್ಷಿಸಿದ್ದಾರೆ. ಈಗ ಅವರು ನಮ್ಮ ಮೇಲೆಯೇ ದಾಳಿ ಮಾಡಲು ಆರಂಭಿಸಿದ್ದಾರೆ. ಸತ್ಯ ಎಂದಿಗೂ ಸಾಯುವುದಿಲ್ಲ, ಅದು ಶಾಶ್ವತ. ಗೋಹತ್ಯೆ ನಿಷೇಧಕ್ಕಾಗಿ ನಾವು ಧ್ವನಿ ಎತ್ತಿದ್ದೇವೆ, ಮುಂದೆಯೂ ಇನ್ನಷ್ಟು ಜೋರಾಗಿ ಧ್ವನಿ ಎತ್ತುತ್ತೇವೆ. ಇವರು ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಬಯಸುತ್ತಿದ್ದಾರೆ' ಎಂದು ಸ್ವಾಮೀಜಿ ಹೇಳಿದ್ದಾರೆ.

ಅದೇ ದಿನ, ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶ ಪೊಲೀಸರು ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರನ್ನು ಬಂಧಿಸಲು ಅವರ ನಿವಾಸಕ್ಕೆ ಬಂದಿದ್ದರು. ಈ ವೇಳೆ ಮಾಧ್ಯಮಗಳೊಂದಿಗೆ ಮಾತನಾಡಿದ ಸ್ವಾಮೀಜಿ, ತಾವು ಪೊಲೀಸರಿಗೆ ಯಾವುದೇ ರೀತಿಯಲ್ಲಿ ವಿರೋಧ ವ್ಯಕ್ತಪಡಿಸುವುದಿಲ್ಲ ಮತ್ತು ತನಿಖೆಗೆ ಸಂಪೂರ್ಣ ಸಹಕಾರ ನೀಡುವುದಾಗಿ ತಿಳಿಸಿದ್ದರು.

ಪ್ರಕರಣದ ಹಿನ್ನೆಲೆ

ಕಳೆದ ಶನಿವಾರ, ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿರುವ ಪೋಕ್ಸೋ ನ್ಯಾಯಾಲಯವು ಜ್ಯೋತಿಷ್ ಪೀಠದ ಶಂಕರಾಚಾರ್ಯ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಅವರ ವಿರುದ್ಧ ಎಫ್‌ಐಆರ್ ದಾಖಲಿಸಲು ಆದೇಶಿಸಿತ್ತು. ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಗಳ ಹಿನ್ನೆಲೆಯಲ್ಲಿ ನ್ಯಾಯಾಲಯ ಈ ಆದೇಶ ನೀಡಿತ್ತು. ಕೋರ್ಟ್ ಆದೇಶದ ನಂತರ, ಜುನ್ಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಲಿದೆ. ಶಾಕುಂಭರಿ ಪೀಠಾಧೀಶ್ವರ ಅಶುತೋಷ್ ಬ್ರಹ್ಮಚಾರಿ ಮಹಾರಾಜ್ ಅವರು ಸೆಕ್ಷನ್ 173(4) ಅಡಿಯಲ್ಲಿ ದೂರು ಸಲ್ಲಿಸಿ, ಎಫ್‌ಐಆರ್ ದಾಖಲಿಸಿ ಕಠಿಣ ಕ್ರಮ ಕೈಗೊಳ್ಳುವಂತೆ ಮನವಿ ಮಾಡಿದ್ದರು.

ಫೆಬ್ರವರಿ 13 ರಂದು, ದೂರು ನೀಡಿದ್ದ ಇಬ್ಬರು ಅಪ್ರಾಪ್ತ ಬಾಲಕರ ಹೇಳಿಕೆಗಳನ್ನು ನ್ಯಾಯಾಲಯವು ವಿಡಿಯೋಗ್ರಫಿ ಮೂಲಕ ದಾಖಲಿಸಿಕೊಂಡಿತ್ತು. ಜೊತೆಗೆ, ಪೊಲೀಸ್ ವರದಿಯನ್ನೂ ಸಹ ಪರಿಗಣನೆಗೆ ತೆಗೆದುಕೊಂಡಿತ್ತು. ಈ ಹೇಳಿಕೆಗಳು ಮತ್ತು ವರದಿಯನ್ನು ಪರಿಶೀಲಿಸಿದ ನಂತರ, ನ್ಯಾಯಾಲಯವು ತನ್ನ ತೀರ್ಪನ್ನು ಕಾಯ್ದಿರಿಸಿತ್ತು.

(ಈ ಸುದ್ದಿಯ ಹೆಡ್‌ಲೈನ್ ಹೊರತುಪಡಿಸಿ, ಉಳಿದ ವಿವರಗಳನ್ನು ಏಷ್ಯಾನೆಟ್ ನ್ಯೂಸಬಲ್ ಇಂಗ್ಲಿಷ್ ತಂಡವು ಸಂಪಾದಿಸಿಲ್ಲ. ಇದನ್ನು ಸಿಂಡಿಕೇಟೆಡ್ ಫೀಡ್‌ನಿಂದ ಪ್ರಕಟಿಸಲಾಗಿದೆ.)

YouTube video player