ಮೇಕೆದಾಟು, ಕಾವೇರಿ ಬಗ್ಗೆ ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ದೂರು
- ಕರ್ನಾಟಕದ ಮಹತ್ವಾಕಾಂಕ್ಷೆಯ ಮೇಕೆದಾಟು ಅಣೆಕಟ್ಟು ಯೋಜನೆ ವಿರುದ್ಧ ದೂರು
- ತಮಿಳುನಾಡು ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ದೂರು
- ಮೋದಿ ಅವರನ್ನು ಭೇಟಿ ಮಾಡಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್
ನವದೆಹಲಿ (ಜೂ.18): ಬೆಂಗಳೂರು, ರಾಮನಗರ ಸೇರಿ ಇನ್ನಿತರ ಪ್ರದೇಶಗಳಿಗೆ ಕುಡಿಯುವ ನೀರು ಪೂರೈಸಬಹುದಾದ ಕರ್ನಾಟಕದ ಮಹತ್ವಾಕಾಂಕ್ಷೆಯ ಮೇಕೆದಾಟು ಅಣೆಕಟ್ಟು ಯೋಜನೆ ವಿರುದ್ಧ ನೆರೆಯ ತಮಿಳುನಾಡು ರಾಜ್ಯ ಕೇಂದ್ರ ಸರ್ಕಾರಕ್ಕೆ ದೂರು ಸಲ್ಲಿಸಿದೆ.
ಗುರುವಾರ ದಿಲ್ಲಿಯ ಪ್ರಧಾನಿ ನರೇಂದ್ರ ಮೋದಿ ನಿವಾಸದಲ್ಲಿ ಮೋದಿ ಅವರನ್ನು ಭೇಟಿ ಮಾಡಿರುವ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ ಸ್ಟಾಲಿನ್ ಅವರು, ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆಗೆ ಅನುಮತಿ ನೀಡದಂತೆ ಮನವಿ ಮಾಡಿದ್ದಾರೆ.
ಮೇಕೆದಾಟು; ಕಾನೂನು ಹೋರಾಟ ಮತ್ತು ರಾಜ್ಯ ಸರ್ಕಾರದ ಮಹತ್ವದ ನಿರ್ಧಾರ
ಅಲ್ಲದೆ ಪ್ರಸಕ್ತ ವರ್ಷ ಕರ್ನಾಟಕದಿಂದ ತಮಿಳ್ನಾಡಿಗೆ ಬಿಡುಗಡೆಯಾಗಬೇಕಿರುವ ಕಾವೇರಿ ನದಿ ನೀರಿನ ಪೂರ್ಣ ಹಂಚಿಕೆಗೂ ಕ್ರಮ ಕೈಗೊಳ್ಳಬೇಕು ಎಂದು ಮನವಿ ಸಲ್ಲಿಸಿದ್ದಾರೆ.
ಈ ಬಗ್ಗೆ ಸ್ವತಃ ಟ್ವೀಟ್ ಮಾಡಿರುವ ಎಂ.ಕೆ ಸ್ಟಾಲಿನ್ ಅವರು, ‘ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿಯಾಗಿ ತಮಿಳುನಾಡಿನ ಉದ್ಯೋಗ, ಜಲ ಸಂಪನ್ಮೂಲ, ಶಿಕ್ಷಣ, ಆರೋಗ್ಯ, ಕೈಗಾರಿಕೋದ್ಯಮ ಸೇರಿದಂತೆ ರಾಜ್ಯದ ಹಲವು ಬೇಡಿಕೆಗಳನ್ನು ಸಲ್ಲಿಸಿದ್ದೇನೆ. ಜೊತೆಗೆ ನೀಟ್, ಸಿಎಎ ಸೇರಿದಂತೆ ಇನ್ನಿತರ ವಿಚಾರಗಳ ಕುರಿತಾಗಿಯೂ ಮೋದಿ ಅವರ ಬಳಿ ಮಾತುಕತೆ ನಡೆಸಿದ್ದಾಗಿ’ ತಿಳಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮೇಕೆದಾಟು ಯೋಜನೆ ಮತ್ತಷ್ಟುವಿಳಂಬವಾಗುವ ಸಾಧ್ಯತೆ ಎದುರಾಗಿದೆ.