ವೇದಾಂತ ಇಂಧನ ಘಟಕದಲ್ಲಿ ಬಾಯ್ಲರ್ ಸ್ಫೋಟ, 9 ಕಾರ್ಮಿಕರು ಸಾವು, 40 ಮಂದಿಗೆ ಗಂಭೀರ ಗಾಯ, ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಸ್ಫೋಟ ಸಂಭವಿಸಿದೆ. ಹೀಗಾಗಿ ಕ್ಷಣಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆಯಾಗುತ್ತಿದೆ.
ಸಕ್ತಿ (ಏ.14) ವೇದಾಂತ ಪವರ್ ಘಟಕದಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಬಾಯ್ಲರ್ ಸ್ಫೋಟಗೊಂಡು ದುರಂತ ಸಂಭವಿಸಿದೆ. ಚತ್ತೀಸಘಡದ ಶಕ್ತಿ ಜಿಲ್ಲೆಯಲ್ಲಿರುವ ದೊಡ್ಡ ಇಂಧನ ಘಟಕದಲ್ಲಿ ಈ ದುರಂತ ನಡೆದಿದೆ. ಕಾರ್ಮಿಕರು ಕೆಲಸ ಮಾಡುತ್ತಿದ್ದ ವೇಳೆ ಬಾಯ್ಲರ್ನ ಟ್ಯೂಬ್ ಸ್ಫೋಟಗೊಂಡಿದೆ. ಇದರ ಪರಿಣಾಮ 9 ಕಾರ್ಮಿಕರು ಮೃತಪಟ್ಟಿದ್ದಾರೆ. ಇತ್ತ 40ಕ್ಕೂ ಹೆಚ್ಚು ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದಾರೆ. ಸ್ಫೋಟದ ತೀವ್ರತೆ ಹೆಚ್ಚಿದ್ದ ಕಾರಣ ಗಂಭೀರವಾಗಿ ಗಾಯಗೊಂಡಿರುವ ಕಾರ್ಮಿಕರ ಪರಿಸ್ಥಿತಿ ಚಿಂತಾಜನಕವಾಗಿದೆ.
ಸ್ಥಳಕ್ಕೆ ಧಾವಿಸಿ ಪೊಲೀಲ್, ಅಗ್ನಿಶಾಮಕದಳ
ವೇದಾಂತ ಪವರ್ ಪ್ಲಾಂಟ್ನಲ್ಲಿ ಸ್ಫೋಟ ಸಂಭವಿಸಿದ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸ್ ಹಾಗೂ ಅಗ್ನಿಶಾಮಕ ದಳ ಸ್ಥಳಕ್ಕೆ ಧಾವಿಸಿದೆ. ಗಾಯಗೊಂಡ ಕಾರ್ಮಿಕರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಿದ್ದಾರೆ. ಕೆಲ ಕಾರ್ಮಿಕರು ಈ ಸ್ಫೋಟದ ಸ್ಥಳದಲ್ಲಿ ಸಿಲುಕಿಕೊಂಡಿದ್ದಾರೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ. ಪೊಲೀಸರು, ಅಗ್ನಿಶಾಮಕ ದಳ, ಕಾರ್ಮಿಕರು ಹಾಗೂ ಸ್ಥಳೀಯರು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಸ್ಫೋಟಕ್ಕೆ ಕಾರಣವೇನು
ವೇದಾಂತ ಇಂಧನ ಘಟಕದಲ್ಲಿ ದಿಢೀರ್ ಸ್ಫೋಟ ಸಂಭವಿಸಲು ಕಾರಣವೇನು ಅನ್ನೋ ಕುರಿತು ಸ್ಪಷ್ಟ ಮಾಹಿತಿ ಹೊರಬಂದಿಲ್ಲ. ಪೊಲೀಸುರ ಪ್ರಕರಣ ದಾಖಲಿಸಿದ್ದಾರೆ. ಇನ್ನು ತಜ್ಞರ ತಂಡ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ರಕ್ಷಣಾ ಕಾರ್ಯಾಚರಣೆಯಲ್ಲಿ ಪೊಲೀಸರು ಸಕ್ರಿಯವಾಗಿದ್ದಾರೆ.
ರಾಯಘಡದ ಖಾಸಗಿ ಆಸ್ಪತ್ರೆ ಹಾಗೂ ಸರ್ಕಾರಿ ಆಸ್ಪತ್ರೆಯಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಸ್ಥಳಕ್ಕೆ ಜಿಲ್ಲಾಧಿಕಾರಿ ಪ್ರಫುಲ್ ಠಾಕೂರ್ ಭೇಟಿ ನೀಡಿ ಪರಿಸ್ಥಿತಿ ನಿರ್ವಹಣೆಯಲ್ಲಿ ತೊಡಗಿದ್ದಾರೆ. ಗಾಯಾಳುಗಳಿಗೆ ಸೂಕ್ತ ಚಿಕಿತ್ಸೆಗೆ ವ್ಯವಸ್ಥೆ ಮಾಡಲಾಗಿದೆ. ದುರ್ಘಟನೆ ಸಂಭವಿಸಿದೆ. ಇದಕ್ಕೆ ಕಾರಣಗಳನ್ನು ಪತ್ತೆ ಹಚ್ಚಲಾಗುತ್ತದೆ. ಸುರಕ್ಷತಾ ಕ್ರಮಗಳಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದು ಪ್ರಫುಲ್ ಠಾಕೂರ್ ಹೇಳಿದ್ದಾರೆ.


