ಕೇಂದ್ರ ಬಜೆಟ್ ಕುರಿತು ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ತೀವ್ರ ವಾಗ್ದಾಳಿ ನಡೆಸಿದ್ದು, ಬಜೆಟ್‌ನಿಂದಾಗಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಬರೋಬ್ಬರಿ 30 ಸಾವಿರ ಕೋಟಿ ರೂ.  ನಷ್ಟವಾಗಿದೆ ಎಂದಿದ್ದಾರೆ. ಕರ್ನಾಟಕದ ಪ್ರಮುಖ ಬೇಡಿಕೆಗಳಾದ ಮಹದಾಯಿ, ಏಮ್ಸ್ ಯೋಜನೆಗಳ ಕಡೆಗಣಿಸಲಾಗಿದೆ ಎಂದರು.

ನವದೆಹಲಿ (ಫೆ.01): ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಡಿಸಿದ ಬಜೆಟ್ ಬಗ್ಗೆ ರಾಜ್ಯ ಕಾಂಗ್ರೆಸ್‌ನ ರಾಜ್ಯಸಭಾ ಸದಸ್ಯ ಜಿ.ಸಿ. ಚಂದ್ರಶೇಖರ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. 'ಬಜೆಟ್ ಮಂಡನೆಯಾದ ಕೇವಲ 15 ನಿಮಿಷಗಳಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆದಾರರಿಗೆ ಬರೋಬ್ಬರಿ 30 ಸಾವಿರ ಕೋಟಿ ರೂಪಾಯಿ ನಷ್ಟವಾಗಿದೆ. ಬಜೆಟ್ ಹೇಗಿದೆ ಎಂಬುದಕ್ಕೆ ಇದೇ ಸಾಕ್ಷಿ' ಎಂದು ವ್ಯಂಗ್ಯವಾಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದ ಆರ್ಥಿಕ ಸ್ಥಿತಿಗತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು. 'ಬಿಜೆಪಿ ನಾಯಕರು ಹಿಂದೆ ಅಧಿಕಾರಕ್ಕೆ ಬರುವ ಮುನ್ನ ಒಂದು ಡಾಲರ್‌ಗೆ ಒಂದು ರೂಪಾಯಿ ತರುತ್ತೇವೆ ಎಂದು ಹೇಳುತ್ತಿದ್ದರು. ಆದರೆ ಈಗ ನೋಡಿದರೆ ಅವರು ಎರಡು ಸೊನ್ನೆಗಳನ್ನು ಮರೆತಂತಿದೆ. ಡಾಲರ್ ಎದುರು ರೂಪಾಯಿ ಮೌಲ್ಯ ಪಾತಾಳಕ್ಕೆ ಕುಸಿದಿದ್ದು, 100ರ ಗಡಿ ತಲುಪಿದೆ. ಇದು ಯಾವ ರೀತಿಯ ಅಭಿವೃದ್ಧಿ? ಎಂದು ಪ್ರಶ್ನಿಸಿದರು. ಅಲ್ಲದೆ, ಕಳೆದ ಹತ್ತು ವರ್ಷಗಳಲ್ಲಿ ದೇಶದ ಸಾಲದ ಹೊರೆ ವಿಪರೀತವಾಗಿದ್ದು, ಬರೋಬ್ಬರಿ 150 ಲಕ್ಷ ಕೋಟಿ ರೂಪಾಯಿಯಷ್ಟು ಸಾಲ ಹೆಚ್ಚಾಗಿದೆ ಎಂದು ಅಂಕಿಅಂಶಗಳ ಸಮೇತ ಕಿಡಿಕಾರಿದರು.

ಕರ್ನಾಟಕಕ್ಕೆ ಬರೀ ಚಂಬು:

ರಾಜ್ಯದ ವಿಚಾರವಾಗಿ ಮಾತನಾಡಿದ ಅವರು, 'ಕರ್ನಾಟಕ ಈ ಬಜೆಟ್ ಮೇಲೆ ಸಾಕಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿತ್ತು. ಆದರೆ ನಮಗೆ ಸಿಕ್ಕಿದ್ದೇನು? ನಮ್ಮ ಕೇಂದ್ರ ಸಚಿವರು ಮಂಡ್ಯದಲ್ಲಿ ಕೈಗಾರಿಕಾ ಕಾರಿಡಾರ್ ತರುತ್ತೇವೆ ಎಂದು ಬೊಬ್ಬೆ ಹೊಡೆದಿದ್ದರು. ಬಜೆಟ್‌ನಲ್ಲಿ ಎಲ್ಲಿದೆ ಕಾರಿಡಾರ್? ನಮ್ಮ ರಾಜ್ಯದ ಕೇಂದ್ರ ಮಂತ್ರಿಗಳಿಗೆ ದೆಹಲಿಯಲ್ಲಿ ಕಿಮ್ಮತ್ತು ಇಲ್ಲದಂತಾಗಿದೆ. ಉತ್ತರ ಕರ್ನಾಟಕ ಭಾಗದ ಪ್ರಮುಖ ಬೇಡಿಕೆಗಳಾದ ಮಹದಾಯಿ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗಳಿಗೆ ರಾಷ್ಟ್ರೀಯ ಯೋಜನೆಯ ಮಾನ್ಯತೆ ಸಿಗಲಿಲ್ಲ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯಂತಹ ಹಿರಿಯ ನಾಯಕರಿಗೂ ಮಹದಾಯಿ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಮಾಡಲು ಸಾಧ್ಯವಾಗಲಿಲ್ಲ. ರಾಯಚೂರಿಗೆ ಏಮ್ಸ್ (AIIMS) ಮಂಜೂರು ಮಾಡಿಸಲು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಸೆಸ್ ಹೆಸರಲ್ಲಿ ರಾಜ್ಯಕ್ಕೆ ವಂಚನೆ:

ಕೇಂದ್ರ ಸರ್ಕಾರವು ರಾಜ್ಯಗಳಿಗೆ ಪಾಲು ನೀಡಬೇಕಾದ ತೆರಿಗೆ ಹಣವನ್ನು ಉಳಿಸಿಕೊಳ್ಳಲು ಕುತಂತ್ರ ನಡೆಸುತ್ತಿದೆ ಎಂದು ಚಂದ್ರಶೇಖರ್ ಆರೋಪಿಸಿದರು. 'ತೆರಿಗೆ ರೂಪದಲ್ಲಿ ಸಂಗ್ರಹಿಸಿದರೆ ಅದನ್ನು ರಾಜ್ಯಗಳಿಗೆ ಹಂಚಬೇಕಾಗುತ್ತದೆ ಎಂಬ ಕಾರಣಕ್ಕೆ ಕೇಂದ್ರ ಸರ್ಕಾರ 'ಸೆಸ್' (Cess) ಮತ್ತು 'ಸರ್ಚಾರ್ಜ್'ಗಳನ್ನು ಹೆಚ್ಚಿಸುತ್ತಿದೆ. ಈ ಮೂಲಕ ಬರುವ ಆದಾಯವನ್ನು ರಾಜ್ಯಗಳಿಗೆ ನೀಡದೆ ತನ್ನಲ್ಲೇ ಇಟ್ಟುಕೊಳ್ಳುತ್ತಿದೆ. 16ನೇ ಹಣಕಾಸು ಆಯೋಗದ ಶಿಫಾರಸುಗಳನ್ನು ಒಪ್ಪಿಕೊಂಡಿದ್ದೇವೆ ಎನ್ನುತ್ತಾರೆ, ಆದರೆ 15ನೇ ಆಯೋಗದಲ್ಲಿ ರಾಜ್ಯಕ್ಕಾದ ಅನ್ಯಾಯವನ್ನು ಇನ್ನೂ ಸರಿಪಡಿಸಿಲ್ಲ' ಎಂದು ದೂರಿದರು.

ಅಲ್ಲದೆ, ನರೇಗಾ (MGNREGA) ಯೋಜನೆಯಲ್ಲಿನ ಬದಲಾವಣೆಗಳಿಂದ ಕರ್ನಾಟಕಕ್ಕೆ ಸುಮಾರು 2,000 ಕೋಟಿ ರೂಪಾಯಿ ನಷ್ಟವಾಗಲಿದೆ. ರಾಜ್ಯದಲ್ಲಿ ಮಿನರಲ್ ಕಾರಿಡಾರ್ ಮಾಡುವ ಅವಕಾಶವಿದ್ದರೂ ಅದನ್ನು ಕೈಬಿಡಲಾಗಿದೆ. ಇಷ್ಟೆಲ್ಲಾ ಅನ್ಯಾಯವಾಗುತ್ತಿದ್ದರೂ ಇದನ್ನು ಪ್ರಶ್ನಿಸುವ ಧೈರ್ಯ ನಮ್ಮ ರಾಜ್ಯದ ಬಿಜೆಪಿ ನಾಯಕರಿಗಿಲ್ಲ ಎಂದು ಜಿ.ಸಿ. ಚಂದ್ರಶೇಖರ್ ಲೇವಡಿ ಮಾಡಿದರು.