'ಹೆಣ್ಣನ್ನು ಕಾಪಾಡಲಾಗದವರು ರಾಜೀನಾಮೆ ಕೊಟ್ಟು ಮನೆಗೆ ಹೋಗಿ'
ಉತ್ತರ ಪ್ರದೇಶ ಅತ್ಯಾಚಾರ ಪ್ರಕರಣ/ ಯೋಗಿ ಸರ್ಕಾರದ ಮೇಲೆ ಮಾಯಾ ದಾಳಿ/ ಯುಪಿಯಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಲಿ/ ಮಹಿಳೆಯರಿಗೆ ರಕ್ಷಣೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ
ಲಕ್ನೋ(ಅ.02) ಯೋಗಿ ಆದಿತ್ಯನಾಥ್ ಸರ್ಕಾರದ ಕಾರಣ ರಾಜ್ಯದ ಕಾನೂನು ಸುವ್ಯವಸ್ಥೆ ಸಂಪೂರ್ಣ ಹದಗೆಟ್ಟಿದ್ದು ಉತ್ತರ ಪ್ರದೇಶದಲ್ಲಿ ರಾಷ್ಟ್ರಪತಿ ಆಳ್ವಿಕೆ ಜಾರಿಯಾಗಬೇಕು ಎಂದು ಬಿಎಸ್ಪಿ ನಾಯಕಿ, ಉತ್ತರ ಪ್ರದೇಶ ಮಾಜಿ ಸಿಎಂ ಮಾಯಾವತಿ ಆಗ್ರಹಿಸಿದ್ದಾರೆ.
ಹತ್ರಾಸ್ನಲ್ಲಿ ದಲಿತ ಯುವತಿಯ ಅತ್ಯಾಚಾರ ಪ್ರಕರಣ ದಾಖಲಾದ ನಂತರ ಆದಿತ್ಯನಾಥ್ ಸರ್ಕಾರ ಕಠಿಣ ಕ್ರಮಕೈಗೊಳ್ಳುತ್ತೆ ಎಂದು ಭಾವಿಸಿದ್ದೆ. ಆದರೆ ಬಲರಾಂಪುರದಲ್ಲಿ ಮತ್ತೆ ಇಂತಹದೇ ಘೋರ ಘಟನೆ ನಡೆದಿದ್ದು ಮಹಿಳೆಯರಿಗೆ ರಕ್ಷಣೆ ಇಲ್ಲದ ಸ್ಥಿತಿ ನಿರ್ಮಾಣವಾಗಿದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ.
ಉತ್ತರ ಪ್ರದೇಶದಲ್ಲಿ ಏನಾಗುತ್ತಿದೆ? ಭಯಾನಕ ಮಾಹಿತಿ ತೆರೆದಿಟ್ಟ ವರದಿ
ಅತ್ಯಾಚಾರಕ್ಕೊಳಗಾದ ಯುವತಿಯ ದೇಹವನ್ನು ಕುಟುಂಬಸ್ಥರಿಗೆ ನೀಡದೆ ಪೊಲೀಸರೆ ಅಂತ್ಯಸಂಸ್ಕಾರ ಮಾಡಿದ್ದಾರೆ ಎಂದರೆ ವ್ಯವಸ್ಥೆ ಎಲ್ಲಿಗೆ ಬಂದು ನಿಂತಿದೆ? ಎಂದು ಪ್ರಶ್ನೆ ಮಾಡಿದ್ದಾರೆ.
ಯೋಗಿ ಆದಿತ್ಯನಾಥ್ ಅವರಿಗೆ ನೀವು ಹೆಣ್ಣೊಬ್ಬರಿಂದಲೇ ಜನಿಸಿದ್ದೀರಿ ಎಂಬುದನ್ನು ನೆನಪು ಮಾಡಲು ಇಚ್ಛಿಸುತ್ತೇನೆ. ನೀವು ಇತರ ಹೆಣ್ಣು ಮಕ್ಕಳನ್ನು ನಿಮ್ಮ ಮಕ್ಕಳಂತೆ ರಕ್ಷಿಸಬೇಕು. ವ್ಯವಸ್ಥೆ ಸುಧಾರಣೆ ಸಾಧ್ಯವಾಗದಿದ್ದರೆ ರಾಜೀನಾಮೆ ಕೊಟ್ಟು ಹೊರಡಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.