ಸೋನಿಯಾ ನಿರ್ಧಾರಕ್ಕೆ ಬದ್ಧ: ಭೇಟಿ ಬಳಿಕ ಅಮರೀಂದರ್ ಹೇಳಿಕೆ!
* ಕೆಲವೇ ತಿಂಗಳಿನಲ್ಲಿ ಎದುರಾಗಲಿರುವ ವಿಧಾನಸಭೆ ಚುನಾವಣೆಯ ಹಿನ್ನೆಲೆ
* ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು, ಸೋನಿಯಾ ನಿರ್ಧಾರಕ್ಕೆ ಬದ್ಧ ಪಂಜಾಬ್ ಸಿಎಂ
* 90 ನಿಮಿಷಗಳ ಕಾಲ ನಡೆದ ಮಾತುಕತೆ
ನವದೆಹಲಿ(ಜು.07): ಪಕ್ಷದಲ್ಲಿನ ಆಂತರಿಕ ಬಿಕ್ಕಟ್ಟು, ಮಾಜಿ ಸಚಿವ ನವಜೋತ್ ಸಿಂಗ್ ಸಿಧು ಅವರ ಜೊತೆಗಿನ ಮನಸ್ತಾಪದ ಬೆನ್ನಲ್ಲೇ ಪಂಜಾಬ್ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಮಂಗಳವಾರ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಭೇಟಿಯ ಬಳಿಕ ಮಾತನಾಡಿದ ಅಮರೀಂದರ್ ಸಿಂಗ್, ಸರ್ಕಾರ ಮತ್ತು ಪಕ್ಷದ ಸಂಘಟನೆಯಲ್ಲಿ ಸೋನಿಯಾ ಗಾಂಧಿ ಅವರು ಯಾವುದೇ ತೀರ್ಮಾನ ಕೈಗೊಂಡರೂ ಅದಕ್ಕೆ ಬದ್ಧವಾಗಿರುವುದಾಗಿ ತಿಳಿಸಿದ್ದಾರೆ.
ಕೆಲವೇ ತಿಂಗಳಿನಲ್ಲಿ ಎದುರಾಗಲಿರುವ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪಕ್ಷದಲ್ಲಿನ ಭಿನ್ನಮತ ಶಮನಗೊಳಿಸುವ ನಿಟ್ಟಿನಿಂದ ಸೋನಿಯಾ ಹಾಗೂ ಅಮರೀಂದರ್ ಸಿಂಗ್ ಸುಮಾರು 90 ನಿಮಿಷಗಳ ಕಾಲ ಮಾತುಕತೆ ನಡೆಸಿದ್ದಾರೆ.
ಈ ವೇಳೆ ಪಂಜಾಬ್ ಕಾಂಗ್ರೆಸ್ನಲ್ಲಿ ಭಿನ್ನಮತ ಶಮನಕ್ಕೆ ರಚಿಸಲಾದ ಸಮಿತಿಯ ನೇತೃತ್ವ ವಹಿಸಿರುವ ಹಿರಿಯ ಮುಖಂಡ ಮಲ್ಲಿಕಾರ್ಜುನ ಖರ್ಗೆ ಹಾಗೂ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾಗಿಯಾಗಿದ್ದರು.