ವಿಜಯಪುರದಲ್ಲಿ, 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ವಯೋಮಿತಿ ಸಡಿಲಿಕೆಗೆ ಆಗ್ರಹಿಸಿ ಪ್ರತಿಭಟನೆ ನಡೆದಿದೆ. ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟವು, ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ಮತ್ತು ವಿಕಲಚೇತನರಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆ ನೀಡಬೇಕೆಂದು ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದೆ.
ವಿಜಯಪುರ: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಕರೆದಿರುವ 15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಎಲ್ಲ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ, ವಿಕಲಚೇತನ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳಿಗೆ ಕರ್ನಾಟಕ ರಾಜ್ಯ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದಿಂದ ಮನವಿ ಸಲ್ಲಿಸಿ ಆಗ್ರಹಿಸಲಾಯಿತು.
ವಯೋಮಿತಿ ಸಡಿಲಿಕೆಗೆ ಆಗ್ರಹ
ವಿಜಯಪುರ ಜಿಲ್ಲಾ ಅಂಗವಿಕಲರ ಹಾಗೂ ಪಾಲಕರ ಒಕ್ಕೂಟದ ಜಿಲ್ಲಾಧ್ಯಕ್ಷ ವಿನೋದ ಖೇಡ ಮಾತನಾಡಿ, ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯಿಂದ ಪ್ರಾಥಮಿಕ, ಪದವಿಧರ ಪ್ರಾಥಮಿಕ ಶಿಕ್ಷಕರ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರ 15,000 ನೇಮಕಾತಿಯಲ್ಲಿ ವಿಕಲಚೇತನ, ವಿಧವಾ, ಮಾಜಿ ಸೈನಿಕ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಸೇರಿದಂತೆ ಎಲ್ಲ ವರ್ಗದ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಬೇಕು. ಕೂಡಲೇ ವಸತಿ ಶಿಕ್ಷಣ ಸಂಸ್ಥೆಗಳ ಶಿಕ್ಷಕರ ನೇಮಕಾತಿ ಭೂಮಾಪಕರ ನೇಮಕಾತಿ ಕರ್ನಾಟಕ ಲೋಕಸೇವಾ ಆಯೋಗದ ಗೆಜಿಟೆಡ್ ಪ್ರೊಬೆಷನರಿ ನೇಮಕಾತಿ ಮಾದರಿಯಲ್ಲಿ ವಿಕಲಚೇತನ ಮತ್ತು ವಿಧವಾ ಅಭ್ಯರ್ಥಿಗಳಿಗೆ 10 ವರ್ಷ, ಇತರೆ ಎಲ್ಲ ಅಭ್ಯರ್ಥಿಗಳಿಗೆ 5 ವರ್ಷಗಳ ವಯೋಮಿತಿ ಸಡಿಲಿಕೆ ನೀಡಿ ಉದ್ಯೋಗ ಆಕಾಂಕ್ಷಿಗಳಿಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದರು.
ಅಂಗವಿಕಲರ ಒಕ್ಕೂಟ ಪ್ರಧಾನ ಕಾರ್ಯದರ್ಶಿ ಅಶೋಕ ವಾಲಿಕಾರ, ಮುಖಂಡರಾದ ಅನೀಲ ಇಕ್ಕಡೆ, ಲಾಯಪ್ಪ ಇಂಗಳೆ, ಸಂತೋಷ ಕಲಗುಡಿ, ಅಂಬಣ್ಣ ಗುನ್ನಾಪುರ, ರಾಜು ಕುಮಟಗಿ, ಭೀಮಶಿ ಪೂಜಾರಿ, ಅಶೋಕ ವಾಲಿಕಾರ, ಶಿವಶಂಕರ ಹಿರೇಮಠ, ದಿನೇಶ ತೇಲಿ, ವಿರೇಶ ಗೊಬ್ಬೂರ ಉಪಸ್ಥಿತರಿದ್ದರು.


