ರಾಷ್ಟ್ರೀಯ ಮಟ್ಟದ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯದ ವಿದ್ಯಾರ್ಥಿಗಳು ಹೆಚ್ಚು ಪ್ರಮಾಣದಲ್ಲಿ ತೇರ್ಗಡೆಯಾಗಿ ಉದ್ಯೋಗ ಪಡೆಯಲು ಮಾರ್ಗದರ್ಶನ  ರಾಜ್ಯ ಸರಕಾರವು ದೇಶದ ಹೆಸರಾಂತ ಆನ್‌ಲೈನ್‌ ಕಲಿಕಾ ವೇದಿಕೆ ಅನ್‌ ಅಕಾಡೆಮಿ ಜತೆ ಒಪ್ಪಂದ 

ಬೆಂಗಳೂರು (ಜು.22): ರಾಷ್ಟ್ರೀಯ ಮಟ್ಟದ ಸ್ಫರ್ಧಾತ್ಮಕ ಪರೀಕ್ಷೆಗಳಲ್ಲಿ ರಾಜ್ಯದ ವಿದ್ಯಾರ್ಥಿಗಳು ಹೆಚ್ಚು ಪ್ರಮಾಣದಲ್ಲಿ ತೇರ್ಗಡೆಯಾಗಿ ಉದ್ಯೋಗ ಪಡೆಯಲು ಮಾರ್ಗದರ್ಶನ ನೀಡುವುದಕ್ಕೆ ರಾಜ್ಯ ಸರಕಾರವು ದೇಶದ ಹೆಸರಾಂತ ಆನ್‌ಲೈನ್‌ ಕಲಿಕಾ ವೇದಿಕೆ ಅನ್‌ ಅಕಾಡೆಮಿ ಜತೆ ಒಪ್ಪಂದ ಮಾಡಿಕೊಂಡಿತು. 

Add Asianetnews Kannada as a Preferred SourcegooglePreferred

ಉನ್ನತ ಶಿಕ್ಷಣ ಖಾತೆ ಸಚಿವ ಹಾಗೂ ಉಪ ಮುಖ್ಯಮಂತ್ರಿ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಸಮಕ್ಷಮದಲ್ಲಿ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ಆಯುಕ್ತ ಪ್ರದೀಪ್‌ ಪ್ರಭಾಕರ್‌ ಹಾಗೂ ಅನ್‌ ಅಕಾಡೆಮಿಯ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿ ವಿವೇಕ್‌ ಸಿನ್ಹಾ ನೇತೃತ್ವದಲ್ಲಿ ಒಪ್ಪಂದಕ್ಕೆ ಸಹಿ ಹಾಕಿ ದಾಖಲೆಗಳನ್ನು ವಿನಿಮಯ ಮಾಡಿಕೊಂಡರು. 

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅಶ್ವತ್ಥನಾರಾಯಣ ಈ ಒಪ್ಪಂದವು ಮೂರು ವರ್ಷ, ಅಂದರೆ 2021ರಿಂದ 2024ರವರೆಗೆ ಜಾರಿಯಲ್ಲಿರುತ್ತದೆ. ಈ ಮೂರು ವರ್ಷಗಳ ಅವಧಿಯಲ್ಲಿ ಪ್ರತೀ ವರ್ಷ 1,500 ವಿದ್ಯಾರ್ಥಿಗಳಂತೆ ಒಟ್ಟು 4,500 ವಿದ್ಯಾರ್ಥಿಗಳಿಗೆ ಅನ್‌ ಅಕಾಡೆಮಿ ಉಚಿತ ತರಬೇತಿ ನೀಡಲಿದೆ ಎಂದರು. 

ರಾಜ್ಯದಲ್ಲಿ ಐಟಿಐ ಪಾಸಾದವರಿಗೆ ಬಂಪರ್ ಆಫರ್

ಪ್ರತಿ 6 ತಿಂಗಳಿಗೊಮ್ಮೆ ಆನ್‌ಲೈನ್‌ ಪರೀಕ್ಷೆಗಳನ್ನು ನಡೆಸಿ ಅದರಲ್ಲಿ ಆಯ್ಕೆಯಾಗುವ 750 ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗುವುದು ಹಾಗೂ ಆ ವಿದ್ಯಾರ್ಥಿಗಳನ್ನು ಯಾವುದೇ ಶುಲ್ಕವಿಲ್ಲದೆ ಅನ್‌ ಅಕಾಡೆಮಿ ಚಂದಾದಾರರನ್ನಾಗಿ ಮಾಡಲಾಗುವುದು ಎಂದು ಡಾ.ಅಶ್ವತ್ಥನಾರಾಯಣ ತಿಳಿಸಿದರು.

ಸರಕಾರಿ ಪದವಿ, ಸ್ನಾತಕೋತ್ತರ, ಎಂಜನಿಯರಿಂಗ್‌, ಪಾಲಿಟೆಕ್ನಿಕ್‌ನಲ್ಲಿ ವ್ಯಾಸಂಗ ಮಾಡುತ್ತಿರುವ ಅಂತಿಮ ವರ್ಷ ಅಥವಾ ಫ್ರೀ ಫೈನಲ್‌ ವರ್ಷದಲ್ಲಿ ವ್ಯಾಸಂಗ ಮಾಡುತ್ತಿರುವ ಎಲ್ಲ ವಿದ್ಯಾರ್ಥಿಗಳು ಈ ಯೋಜನೆಯ ಫಲಾನುಭವಿಗಳು ಎಂದು ಡಿಸಿಎಂ ತಿಳಿಸಿದರು. 

ಪ್ರಸ್ತುತ ಕೇಂದ್ರ ಆಡಳಿತ ಸೇವೆ, ಬ್ಯಾಂಕಿಂಗ್‌, ಗ್ರೂಪ್‌ ಸಿ ಸೇರಿದಂತೆ ವಿವಿಧ ವಲಯಗಳಲ್ಲಿ 3 ಲಕ್ಷಕ್ಕೂ ಹೆಚ್ಚು ಉದ್ಯೋಗಾವಕಾಶಗಳಿಗೆ ಪ್ರತಿ ವರ್ಷ ಕೇಂದ್ರ ಸರಕಾರ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳುತ್ತಿದೆ. ಆದರೆ, ಈ ಆಯ್ಕೆಯಲ್ಲಿ ಕನ್ನಡದ ವಿದ್ಯಾರ್ಥಿಗಳು ಹಿಂದೆ ಬೀಳುತ್ತಿದ್ದಾರೆ. ಇದನ್ನು ಸರಿಪಡಿಸುವ ಉದ್ದೇಶದಿಂದ ಅನ್‌ ಅಕಾಡೆಮಿ ಜತೆ ಒಡಂಬಡಿಕೆ ಮಾಡಿಕೊಳ್ಳಲಾಗಿದೆ ಎಂದು ವಿವರಿಸಿದರು. 

ಈ ಕೋಚಿಂಗ್‌ ಮೂಲಕ ನಮ್ಮ ವಿದ್ಯಾರ್ಥಿಗಳ ಪರೀಕ್ಷಾ ಸಾಮರ್ಥ್ಯ ಹೆಚ್ಚಿಸಲಾಗುವುದು. ಉತ್ತಮ ಫಲಿತಾಂಶ ಸಾಧಿಸಲಾಗುವುದು ಎಂದು ಹೇಳಿದರು. 

ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಕುಮಾರ್ ನಾಯಕ್, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಆಯುಕ್ತ ಪಿ.ಪ್ರದೀಪ ಸೇರಿ ಇನ್ನು ಕೆಲ ಗಣ್ಯರು, ಅಧಿಕಾರಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.