ವಿಧಾನಸಭಾ ಚುನಾವಣೆ ಪ್ರಚಾರದ ಭಾಷಣಗಳಲ್ಲಿ ಪದೇ ಪದೇ ‘ಅವರಪ್ಪನಾಣೆಗೂ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ’ ಎಂದು ಹೇಳಿ ಬೀಗುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ತಾಯಿ ಚನ್ನಮ್ಮ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ. 

ಬೆಂಗಳೂರು : ವಿಧಾನಸಭಾ ಚುನಾವಣೆ ಪ್ರಚಾರದ ಭಾಷಣಗಳಲ್ಲಿ ಪದೇ ಪದೇ ‘ಅವರಪ್ಪನಾಣೆಗೂ ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲು ಸಾಧ್ಯವಿಲ್ಲ’ ಎಂದು ಹೇಳಿ ಬೀಗುತ್ತಿದ್ದ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಎಂದಿಗೂ ಕ್ಷಮಿಸಲು ಸಾಧ್ಯವಿಲ್ಲ ಎಂದು ಕುಮಾರಸ್ವಾಮಿ ತಾಯಿ ಚನ್ನಮ್ಮ ಖಾರವಾಗಿ ಪ್ರತಿಕ್ರಿಯೆ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ತಮ್ಮ ಮಗ ಕುಮಾರಸ್ವಾಮಿ ಅವರ ಮುಖ್ಯಮಂತ್ರಿ ಪಟ್ಟಾಭಿಷೇಕದ ಸಂತಸದ ಕ್ಷಣದಲ್ಲಿ ಪದ್ಮನಾಭನಗರದ ನಿವಾಸದಲ್ಲಿ ಖಾಸಗಿ ಸುದ್ದಿವಾಹಿನಿಗೆ ನೀಡಿರುವ ಸಂದರ್ಶನದಲ್ಲಿ ಮಾತನಾಡಿರುವ ಅವರು, ಸದ್ಯ ಅವರಪ್ಪನಾಣೆ ವಿಚಾರದ ಬಗ್ಗೆ ನಾನು ಮಾತನಾಡಲು ಇಚ್ಛಿಸುವುದಿಲ್ಲ. ಅಷ್ಟೇ ಅಲ್ಲ, ಸಿದ್ದರಾಮಯ್ಯ ಅವರನ್ನು ಕೂಡ ಕ್ಷಮಿಸುವುದಿಲ್ಲ ಎಂದು ಅಸಮಾಧಾನ ಹೊರ ಹಾಕಿದ್ದಾರೆ. ರಾಜಕೀಯದಲ್ಲಿ ಟೀಕೆಗಳು ಸಾಮಾನ್ಯ. ಆದರೆ, ಯಾವುದೇ ಕಾರಣಕ್ಕೂ ವೈಯಕ್ತಿಕವಾಗಿ ಟೀಕೆ ಮಾಡುವುದು ಸರಿಯಲ್ಲ ಎಂದು ತಿಳಿಸಿದರು.

ದೇವೇಗೌಡರ ಬಳಿ ಸಿದ್ದರಾಮಯ್ಯ ಈ ಬಗ್ಗೆ ಮಾತನಾಡಿ ವೈಮನಸ್ಯ ಬಗೆಹರಿಸಿಕೊಳ್ಳುವ ಪ್ರಯತ್ನ ಮಾಡಿದ್ದಾರೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಇಲ್ಲಿಯವರೆಗೂ ಆ ರೀತಿಯ ಯಾವುದೇ ಸಂದರ್ಭ ಎದುರಾಗಿಲ್ಲ ಎಂದು ತಿಳಿಸಿದರು.

ಇನ್ನು ಮೈತ್ರಿ ಸರ್ಕಾರದ ಕುರಿತು ಮಾತನಾಡಿದ ಚನ್ನಮ್ಮ, ಐದು ವರ್ಷಗಳ ಕಾಲ ಸುಭದ್ರ ಸರ್ಕಾರ ನೀಡಲು ಸಾಧ್ಯವಿದೆಯೇ ಎಂಬುದರ ಬಗ್ಗೆ ಆತಂಕವಿದೆ. ಯಾವ ರೀತಿಯಲ್ಲಿ ಆಡಳಿತ ನಡೆಯಲಿದೆ ಎಂಬುದನ್ನು ಕಾದು ನೋಡಬೇಕಿದೆ ಎಂದು ಹೇಳಿದರು. ಪ್ರಶ್ನೆಯೊಂದಕ್ಕೆ ಉತ್ತರಿಸಿದ ಅವರು, ಕೆಲಸ ಕಾರ್ಯಗಳ ಒತ್ತಡದಲ್ಲಿ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಕುಮಾರಸ್ವಾಮಿಗೆ ಸಲಹೆ ನೀಡಿದ್ದೇನೆ ಎಂದು ಇದೇ ವೇಳೆ ತಿಳಿಸಿದರು.