ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ ಯಡಿಯೂರಪ್ಪ
ಕರ್ನಾಟಕ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಲು ಸಕಲ ತಯಾರಿ ನಡೆಯುತ್ತಿದ್ದು, ಹೊಸದಾಗಿ ಆಯ್ಕೆಯಾಗಿರುವ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ. ಅತ್ತ ಲೋಕಸಭಾ ಸದಸ್ಯರಾಗಿದ್ದು, ಶಾಸಕರಾಗಿ ಆಯ್ಕೆಯಾದ ಮೂವರು ತಮ್ಮ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಇತ್ತ ಎಚ್.ಡಿ.ಕುಮಾರಸ್ವಾಮಿ ರಾಮನಗರ ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದು, ಸ್ಪೀಕರ್ ರಾಜೀನಾಮೆಯನ್ನು ಅಂಗೀಕರಿಸಿದ್ದಾರೆ.
ಬೆಂಗಳೂರು: ಕರ್ನಾಟಕ ವಿಧಾನಸಭೆಯಲ್ಲಿ ಬಹುಮತ ಸಾಬೀತು ಪಡಿಸಲು ಸಕಲ ತಯಾರಿ ನಡೆಯುತ್ತಿದ್ದು, ಹೊಸದಾಗಿ ಆಯ್ಕೆಯಾಗಿರುವ ಶಾಸಕರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ಹಾಗೂ ಬಳ್ಳಾರಿ ಸಂಸದ ಬಿ. ಶ್ರೀರಾಮುಲು ಹಾಗೂ ಮಂಡ್ಯ ಸಂಸದ ಸಿ.ಎಸ್.ಪುಟ್ಟರಾಜು ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ರಾಜೀನಾಮೆಯನ್ನು ಸ್ಪೀಕರ್ ಅಂಗೀಕರಿಸಿದ್ದಾರೆ.
ಎರಡು ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸಿ, ಚನ್ನಪಟ್ಟಣ ಹಾಗೂ ರಾಮನಗರ ವಿಧಾನಸಭಾ ಕ್ಷೇತ್ರಗಳೆರಡರಲ್ಲಿಯೂ ಗೆದ್ದಿರುವ ಜೆಡಿಎಸ್ ವರಿಷ್ಠ ಎಚ್.ಡಿ.ಕುಮಾರಸ್ವಾಮಿ ರಾಮನಗರ ವಿಧಾನಸಭಾ ಕ್ಷೇತ್ರಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ.
ಸಿಎಂ ಸ್ಥಾನಕ್ಕೂ ರಾಜೀನಾಮೆ?
ಬಹುಮತ ಸಾಬೀತು ಪಡಿಸಲು ಕ್ಷಣಗಣನೆ ನಡೆಯುತ್ತಿದ್ದು, ಆಪರೇಷನ್ ಕಮಲ ನಡೆಯದ ಹಿನ್ನೆಲೆಯಲ್ಲಿ ಬಿಜೆಪಿ ಪಾಳೇಯದಲ್ಲಿ ಆತಂಕ ಹೆಚ್ಚಾಗಿದೆ. ಈಗಾಗಲೇ ಬಿಜೆಪಿ ಹೈ ಕಮಾಂಡ್ ಯಡಿಯೂರಪ್ಪ ಅವರಿಗೆ ರಾಜೀನಾಮೆ ನೀಡಲು ಸೂಚಿಸಿದೆ ಎನ್ನಲಾಗುತ್ತಿದ್ದು, 13 ಪುಟಗಳ ವಿದಾಯ ಭಾಷಣವನ್ನು ಸಿದ್ಧವಿಟ್ಟುಕೊಂಡಿದ್ದಾರೆನ್ನಲಾಗಿದೆ. ಆದರೆ, ಯಾವುದೇ ಸ್ಪಷ್ಟ ಮಾಹಿತಿಯಿನ್ನೂ ಲಭ್ಯವಾಗಿಲ್ಲ.