ಕರ್ನಾಟಕ ಮತದಾನ: ರಾಜ್ಯದ ಹಲವೆಡೆ ಗಲಾಟೆ, ಕಲ್ಲುತೂರಾಟ
ಮತದಾನದ ವೇಳೆ ರಾಜ್ಯದ ವಿವಿದೆಡೆ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಗಲಾಟೆ, ಮಾರಾಮಾರಿ ನಡೆದಿರುವ ಘಟನೆಗಳು ವರದಿಯಾಗಿವೆ.
ಬೆಂಗಳೂರು [ಮೇ.12]: ಮತದಾನದ ವೇಳೆ ರಾಜ್ಯದ ವಿವಿದೆಡೆ ರಾಜಕೀಯ ಪಕ್ಷಗಳ ಕಾರ್ಯಕರ್ತರ ನಡುವೆ ಗಲಾಟೆ, ಮಾರಾಮಾರಿ ನಡೆದಿರುವ ಘಟನೆಗಳು ವರದಿಯಾಗಿವೆ.
ಮತದಾನ ಮಾಡುವ ವಿಚಾರವಾಗಿ ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಚಿಗರಾಳ ಗ್ರಾಮದಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ ನಡೆದಿದೆ. ಉಭಯ ಪಕ್ಷದ ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದು ನಾಲ್ಕು ಮಂದಿ ಗಮಭೀರವಾಗಿ ಗಾಯಗೊಂಡಿದ್ದಾರೆ. ಗ್ರಾಮದಲ್ಲಿ ಬಿಗುವಿನ ವಾತವರಣವಿದ್ದು, ಹೆಚ್ಚಿನ ಪೊಲೀಸ್ ಭದ್ರತೆ ಏರ್ಪಡಿಸಲಾಗಿದೆ.
ಕಲಬುರಗಿ ಜಿಲ್ಲೆಯ ಚಿತ್ತಾಪುರ ತಾಲೂಕಿನ ಭಾಗೋಡಿಯಲ್ಲಿ ಕಾಂಗ್ರೆಸ್-ಬಿಜೆಪಿ ಬೆಂಬಲಿಗರ ನಡುವೆ ಮಾರಾಮಾರಿ ನಡೆದಿದೆ. ಬಿಜೆಪಿ ಅಭ್ಯರ್ಥಿ ವಾಲ್ಮಿಕಿ ನಾಯಕ್ ಬೆಂಬಲಿಗರ ಜೊತೆ ಮತಗಟ್ಟೆ ಪ್ರವೇಶಿಸುವುದನ್ನು ಕಾಂಗ್ರೆಸ್ ಬೆಂಬಲಿಗರು ತಡೆದಿದ್ದು, ಪರಿಸ್ಥಿತಿ ವಿಕೋಪಕ್ಕೆ ಹೋಗಿ ಮಾರಾಮಾರಿ ನಡೆದಿದೆ.
ಚಿಕ್ಕಬಳ್ಳಾಪುರದ ಚಿಂತಾಮಣಿ ನಗರದ 3ನೇ ವಾರ್ಡ್ನಲ್ಲಿ ಜೆಡಿಎಸ್ ಹಾಗೂ ಪಕ್ಷೇತರ ಅಭ್ಯರ್ಥಿ ಬೆಂಬಲಿಗರ ನಡುವೆ ಘರ್ಷಣೆಯುಂಟಾಗಿದೆ. ಶಾಸಕ ಜೆ.ಕೆ.ರೆಡ್ಡಿ ಮತ್ತು ಮಾಜಿ ಶಾಸಕ ಎಂ.ಸಿ. ಸುಧಾಕರ್ ಬೆಂಬಲಿಗರ ನಡುವೆ ಕ್ಷುಲ್ಲಕ ಕಾರಣಕ್ಕೆ ಜಗಳವೇರ್ಪಟ್ಟಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಹಾಸನದಲ್ಲೂ ಮತದಾನದ ವೇಳೆ ಕೈ-ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ ನಡೆದಿದೆ. ಅರಕಲಗೂಡು ತಾಲೂಕಿನ ಎಲಾಗತವಳ್ಳಿ ಗ್ರಾಮದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಜೆಡಿಎಸ್ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಘಟನೆಯಲ್ಲಿ ಚೇತನ್, ಅನಿಲ್ ಎಂಬವರಿಗೆ ಗಾಯಗಳಾಗಿದ್ದು, ತಾಲೂಕು ಅಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.