Asianet Suvarna News Asianet Suvarna News

ಯಲಹಂಕ‌ : 14 ವೆಂಟಿಲೇಟರ್ ಬೆಡ್‌ - 50 ಆಮ್ಲಜನಕ‌ ಬೆಡ್ ಲೋಕಾರ್ಪಣೆ

  • ಯಲಹಂಕದ ಸಾರ್ವಜನಿಕ ಆಸ್ಪತ್ರೆಯಲ್ಲಿ 14 ವೆಂಟಿಲೇಟರ್‌ ಐಸಿಯು ಬೆಡ್ ವ್ಯವಸ್ಥೆಗೆ ಚಾಲನೆ
  • ಮೆಟ್ರಿಕ್‌ ಪೂರ್ವ ಬಾಲಕಿಯರ ವಸತಿ ಶಾಲೆಯಲ್ಲಿ ಸ್ಥಾಪಿಸಿರುವ ಆಮ್ಲಜನಕ‌ ಸಹಿತ 50 ಬೆಡ್ ಗಳ ಆರೈಕೆ ಕೇಂದ್ರ ಆರಂಭ
  • ವಿಶ್ವವಾಣಿ ಫೌಂಡೇಶನ್ ಹಾಗೂ ಅಜೀಂ ಪ್ರೇಮ್ ಜಿ ಫೌಂಡೇಶನ್ ಸಹಯೋಗ 
14  ventilator  ICU beds system  inaugurated at Yelahanka Public Hospital snr
Author
Bengaluru, First Published May 24, 2021, 1:58 PM IST

ಬೆಂಗಳೂರು (ಮೇ.24): ಯಲಹಂಕದ ಸಾರ್ವಜನಿಕ ಆಸ್ಪತ್ರೆಯಲ್ಲಿ ಹೊಸದಾಗಿ ಸ್ಥಾಪಿಸಿರುವ 14 ವೆಂಟಿಲೇಟರ್‌ ಐಸಿಯು ಬೆಡ್ ವ್ಯವಸ್ಥೆ ಹಾಗೂ ಮೆಟ್ರಿಕ್‌ ಪೂರ್ವ ಬಾಲಕಿಯರ ವಸತಿ ಶಾಲೆಯಲ್ಲಿ ಸ್ಥಾಪಿಸಿರುವ ಆಮ್ಲಜನಕ‌ ಸಹಿತ 50 ಬೆಡ್ ಗಳ ಆರೈಕೆ ಕೇಂದ್ರಕ್ಕೆ ರಾಜ್ಯ ಕೋವಿಡ್‌ ಕಾರ್ಯಪಡೆ ಅಧ್ಯಕ್ಷ  ಡಿಸಿಎಂ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಅವರು ಇಂದು ಚಾಲನೆ ನೀಡಿದರು.‌ 

ವಿಶ್ವವಾಣಿ ಫೌಂಡೇಶನ್ ಹಾಗೂ ಅಜೀಂ ಪ್ರೇಮ್ ಜಿ ಫೌಂಡೇಶನ್ ಸಹಯೋಗದಲ್ಲಿ ಈ ಕೋವಿಡ್ ಐಸಿಯು ವೆಂಟಿಲೇಟರ್ ವಾರ್ಡ್ ಸ್ಥಾಪನೆ ಮಾಡಲಾಗಿದೆ. 

ಈ ಸಂದರ್ಭದಲ್ಲಿ ಮಾತನಾಡಿದ ಡಿಸಿಎಂ ಅಶ್ವತ್ಥನಾರಾಯಣ  ಟೆಕ್ನಾಲಜಿಯನ್ನು ಸಮರ್ಪಕವಾಗಿ ಬಳಕೆ ಮಾಡಿಕೊಂಡು ಖಾಸಗಿಯವರ ಸಹಯೋಗದಲ್ಲಿ ಉತ್ತಮ ಆರೋಗ್ಯ ಮೂಲಸೌಕರ್ಯ ಒದಗಿಸುವ ಕೆಲಸ ರಾಜ್ಯದಲ್ಲಿ ಪರಿಣಾಮಕಾರಿಯಾಗಿ ಆಗುತ್ತಿದೆ. ಈ ನಿಟ್ಟಿನಲ್ಲಿ ಯಲಹಂಕ ಶಾಸಕ ಎಸ್‌.ಆರ್.ವಿಶ್ವನಾಥ್‌ ಅವರ ಪ್ರಯತ್ನ ಶ್ಲಾಘನೀಯ ಎಂದರು. 

 

ರಾಜ್ಯದ ಉದ್ದಗಲಕ್ಕೂ ಆರೋಗ್ಯ ಮೂಲಸೌಕರ್ಯವನ್ನು ಹೆಚ್ಚಿಸಲು ಸರ್ಕಾರ ಸರ್ವ ರೀತಿಯ ಕ್ರಮ ವಹಿಸಿದೆ. ಕಾಲಮಿತಿಯೊಳಗೆ ಈ ಕೆಲಸ ಮಾಡಿ ಮುಗಿಸಲಾಗುವುದು. ಸರಕಾರಿ ಮತ್ತು ಖಾಸಗಿ ಸಹಯೋಗದಲ್ಲಿ ಈ ಮಹತ್ಕಾರ್ಯವನ್ನು ಸಾಧಿಸಲಾಗುವುದು ಎಂದ ಅವರು, ಕೋವಿಡ್‌  ತರದ ಸಾಂಕ್ರಾಮಿಕ ಮಾರಿಯನ್ನು ಎದುರಿಸಬೇಕಾದರೆ ನಮ್ಮಲ್ಲಿ ಅತ್ಯುತ್ತಮ ಗುಣಮಟ್ಟದ ವೈದ್ಯಕೀಯ ವ್ಯವಸ್ಥೆ ಇರಲೇಬೇಕು ಎಂದರು. 

ಯಲಹಂಕ ಕ್ಷೇತ್ರದ ಶಾಸಕ ಹಾಗೂ ಬಿಡಿಎ ಅಧ್ಯಕ್ಷ  ಎಸ್.ಆರ್.ವಿಶ್ವನಾಥ್ ಮಾತನಾಡಿ, ಕ್ಷೇತ್ರದಲ್ಲಿ ಯಾರೊಬ್ಬರೂ ಆರೋಗ್ಯ ಸೇವೆಯಿಂದ ವಂಚಿತರಾಗಬಾರದು ಎಂಬ ದೃಷ್ಟಿಯಿಂದ ಖಾಸಗಿ ಸಹಭಾಗಿತ್ವದಲ್ಲಿ ಉತ್ತಮ ರೀತಿಯ ಆರೋಗ್ಯ ಸೇವೆಯನ್ನು ಒದಗಿಸುತ್ತಿರುವುದಾಗಿ ತಿಳಿಸಿದರು. 

'ಮುಂದಿನ ಮೂರು ತಿಂಗಳಲ್ಲಿ ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಬದಲಾವಣೆ' ...

ಕ್ಷೇತ್ರದಲ್ಲಿ ಜನಸಾಮಾನ್ಯರಿಗೂ ವೆಂಟೆಲೇಟರ್ ಸೌಲಭ್ಯ ದೊರೆಯುವಂತೆ ಮಾಡುವ ಉದ್ದೇಶದಿಂದ ಸರ್ಕಾರಿ ಆಸ್ಪತ್ರೆಯಲ್ಲಿ ವೆಂಟಿಲೇಟರ್ ವ್ಯವಸ್ಥೆಯನ್ನು ಕಲ್ಪಿಸಲಾಗಿದ್ದು, ಇದರ ಉಪಯೋಗ ಪಡೆದುಕೊಳ್ಳಬೇಕು. ಇಲ್ಲಿ ಆಸ್ಪತ್ರೆಯಲ್ಲಿ ಅಜೀಂ ಪ್ರೇಮ್ ಜಿ ಪ್ರತಿಷ್ಠಾನ ಮತ್ತು ಡಾಕ್ಟರ್ಸ್ ಫಾರ್ ಯೂ ಸಂಸ್ಥೆಯ ಸಿಬ್ಬಂದಿ ರೋಗಿಗಳ ಆರೈಕೆಯಲ್ಲಿ ತೊಡಗಿದ್ದಾರೆ ಎಂದರು.

ಕೋವಿಡ್ ಕೇರ್‌ ಕೇಂದ್ರದಲ್ಲಿ ‌ಸೋಂಕಿತರಿಗೆ ರಿಕ್ರಿಯೇಷನ್ ಗೂ ಅವಕಾಶ ಇದ್ದು ಡಿಸಿಎಂ ಡಾ.ಅಶ್ವತ್ಥನಾರಾಯಣ ಅವರು  ಕ್ರಿಕೆಟ್ ಆಡುವುದರ‌ ಮೂಲಕ ಈ ವ್ಯವಸ್ಥೆಗೂ ಚಾಲನೆ ನೀಡಿದ್ದು,  ಕ್ರಿಕೆಟ್, ವಾಲಿಬಾಲ್, ಕೇರಂ ಇತ್ಯಾದಿ ಆಟಗಳಿಗೂ ಇಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದು ವಿಶ್ವನಾಥ್ ತಿಳಿಸಿದರು.

ಈ ಸಂದರ್ಭದಲ್ಲಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಮಂಜುನಾಥ್, ಆಸ್ಪತ್ರೆ ಮುಖ್ಯಸ್ಥೆ ಡಾ.ಅಸ್ಮಾ, ಡಿಎಚ್ಒ ಡಾ.ಶ್ರೀನಿವಾಸ್, ಅಜೀಂ ಪ್ರೇಮ್ ಜಿ ಪ್ರತಿಷ್ಠಾನ ಮತ್ತು ಡಾಕ್ಟರ್ ಫಾರ್ ಯೂ ಸಂಸ್ಥೆಯ ಪ್ರತಿನಿಧಿಗಳು ಇದ್ದರು.

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona

Follow Us:
Download App:
  • android
  • ios