ಉಡುಪಿ ಜಿಲ್ಲೆಯಲ್ಲಿ ಬೀದಿನಾಯಿ ಹಾವಳಿ ತಡೆಗಟ್ಟಲು ಸುಪ್ರೀಂ ಕೋರ್ಟ್ ಮಾರ್ಗಸೂಚಿಯಂತೆ 18.50 ಎಕರೆ ಜಾಗದಲ್ಲಿ ಆಶ್ರಯ ತಾಣಗಳನ್ನು ನಿರ್ಮಿಸಲು ಜಿಲ್ಲಾಡಳಿತ ಮುಂದಾಗಿದೆ. ಬೀದಿನಾಯಿಗಳ ಹಾವಳಿ ತಡೆಗಟ್ಟುವ ಕುರಿತು ಜಿಲ್ಲಾ ಮಟ್ಟದ ಸಮಿತಿ ಸಭೆ
ಉಡುಪಿ: ಬೀದಿನಾಯಿ ಹಾವಳಿ ತಡೆಗಟ್ಟುವುದಕ್ಕಾಗಿ ಸರ್ವೋಚ್ಛ ನ್ಯಾಯಾಲಯ ಹೊರಡಿಸಿರುವ ಆದೇಶ, ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕಾಗಿದ್ದು, ಅದರಂತೆ ಬೀದಿನಾಯಿಗಳ ಆಶ್ರಯ ತಾಣ ನಿರ್ಮಾಣಕ್ಕೆ ಉಡುಪಿ ಜಿಲ್ಲೆಯಲ್ಲಿ ಒಟ್ಟು 18.50 ಎಕರೆ ಜಾಗ ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ. ಹೇಳಿದ್ದಾರೆ.
ಶನಿವಾರ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಬೀದಿನಾಯಿಗಳ ಹಾವಳಿ ತಡೆಗಟ್ಟುವ ಕುರಿತು ಜಿಲ್ಲಾ ಮಟ್ಟದ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಎಲ್ಲೆಲ್ಲಿ ಜಾಗ ಮೀಸಲು?
ರೇಬಿಸ್ ಕಾಯಿಲೆ, ಸಂಶಯಾಸ್ಪದ ರೋಗ ಪೀಡಿತ ಅಥವಾ ಆಕ್ರಮಣಕಾರಿ ನಡತೆ ಇರುವ ನಾಯಿಗಳನ್ನು ಹಿಡಿದು ಆಶ್ರಯ ತಾಣಗಳಿಗೆ ಬಿಡಬೇಕಾಗುತ್ತದೆ. ಅದಕ್ಕಾಗಿ ಪ್ರತಿ ತಾಲೂಕಿನಲ್ಲೂ ಆಶ್ರಯ ತಾಣಗಳ ನಿರ್ಮಾಣ ಮಾಡವಾಗುತ್ತದೆ. ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ 9 ಎಕರೆ, ಸಾಲಿಗ್ರಾಮ ಪಪಂನ ಗಿಳಿಯಾರುನಲ್ಲಿ 3 ಎಕರೆ, ಕುಂದಾಪುರ ತಾಲೂಕಿನ ಕಂದಾವರದಲ್ಲಿ 1.5 ಎಕರೆ, ಕಾಪು ತಾಲೂಕಿನ ಶಿರ್ವದಲ್ಲಿ 3 ಎಕರೆ, ಕಾರ್ಕಳದಲ್ಲಿ 1 ಎಕರೆ, ಬೈಂದೂರಿನಲ್ಲಿ 1 ಎಕರೆ ಜಾಗ ಗುರುತಿಸಲಾಗಿದೆ ಎಂದು ಹೇಳಿದರು.
ಈ ಜಾಗದಲ್ಲಿ ಮಾರ್ಗಸೂಚಿಯಂತೆ ಈ ನಾಯಿಗಳಿಗೆ ಅಗತ್ಯವಿರುವ ಆಹಾರ, ನೀರು, ನೆರಳು, ಪಶು ವೈದ್ಯಕೀಯ ಚಿಕಿತ್ಸೆಗಳ ವ್ಯವಸ್ಥೆ ಇರುವ ಆಶ್ರಯ ತಾಣಗಳನ್ನು ಕೂಡಲೇ ನಿರ್ಮಾಣ ಮಾಡಿ, ಅಲ್ಲಿ ಡಾಗ್ ಶೆಲ್ಟರ್ ಎಂಬ ಬೋರ್ಡನ್ನು ಅಳವಡಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.
ಒಟ್ಟು 440 ಬೀದಿನಾಯಿಗಳ ಗುರುತು
ಅಲ್ಲದೆ ಜಿಲ್ಲೆಯ ನಗರ ಪ್ರದೇಶದ ಸರ್ಕಾರಿ ಮತ್ತು ಖಾಸಗಿ ವಿದ್ಯಾಸಂಸ್ಥೆಗಳು, ಸರ್ಕಾರಿ ಕಚೇರಿಗಳು, ಬಸ್ ಹಾಗೂ ರೈಲ್ವೆ ನಿಲ್ದಾಣ, ಆಸ್ಪತ್ರೆಗಳು ಹಾಗೂ ಕ್ರೀಡಾಂಗಣ ಸೇರಿದಂತೆ ಒಟ್ಟು 253 ಸಂಸ್ಥೆಗಳ ವ್ಯಾಪ್ತಿಯಲ್ಲಿ ಒಟ್ಟು 440 ಬೀದಿನಾಯಿಗಳನ್ನು ಗುರುತಿಸಲಾಗಿರುತ್ತದೆ. ಈ ಸಂಸ್ಥೆಗಳ ಗೇಟ್ಗಳ ಮೇಲೆ ಸಂಬಂಧಪಟ್ಟ ನೋಡೆಲ್ ಅಧಿಕಾರಿಗಳ ಹೆಸರು, ಮೊಬೈಲ್ ನಂಬರ್ ಹಾಗೂ “ಇಲ್ಲಿ ನಾಯಿಗಳು ಕಂಡಲ್ಲಿ ನೋಡೆಲ್ ಅಧಿಕಾರಿಗಳನ್ನು ಸಂಪರ್ಕಿಸಿ” ಎಂಬ ಫಲಕಗಳನ್ನು 2 ದಿನಗಳಲ್ಲಿ ಅಳವಡಿಸಬೇಕು ಎಂದು ಆದೇಶಿಸಿದರು.
ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಪಂಗಳ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಸಂಖ್ಯೆಗೆ ಅನುಗುಣವಾಗಿ ಆಹಾರ
ವಿತರಣೆಗೆ ಸ್ಥಳಗಳನ್ನು ಗುರುತಿಸಬೇಕು. ನಿಗದಿತ ಜಾಗದಲ್ಲಿ ಮಾತ್ರ ಆಹಾರ ನೀಡಬೇಕು. ಆಹಾರ ವಿತರಣಾ ತಾಣಗಳನ್ನು ಹೊರತುಪಡಿಸಿ ಇತರೆ ಯಾವುದೇ ಸಾರ್ವಜನಿಕ ಸ್ಥಳಗಳಲ್ಲಿ ಆಹಾರ ಪೂರೈಕೆ ಮಾಡದಂತೆ ಸುಪ್ರೀಂ ಕೋರ್ಟ್ ಆದೇಶದಲ್ಲಿ ಸೂಚಿಸಿದ್ದು, ಇದು ಉಲ್ಲಂಘನೆಯಾಗದಂತೆ ನೋಡಿಕೊಳ್ಳುವುದು ನೋಡಲ್ ಅಧಿಕಾರಿಗಳ ಜವಾಬ್ದಾರಿಯಾಗಿದೆ ಎಂದರು.
ಸಭೆಯಲ್ಲಿ ಜಿಪಂ ಉಪ ಕಾರ್ಯದರ್ಶಿ ಎಸ್.ಎಸ್. ಕಾದ್ರೋಳ್ಳಿ, ಪಶುಪಾಲನಾ ಇಲಾಖೆ ಉಪನಿರ್ದೇಶಕ ಡಾ.ಎಂ.ಸಿ. ರೆಡ್ಡಪ್ಪ, ನಗರಸಭೆ ಪೌರಾಯುಕ್ತ ಮಹಾಂತೇಶ ಹಂಗರಗಿ, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಇದನ್ನೂ ಓದಿ: ಬೆಂಗಳೂರು ಜಿಬಿಎ ಚುನಾವಣೆಯಲ್ಲಿ ಮತ ಕಳವು ಬಗ್ಗೆ ಭಯ ಬಿಡಿ : ಬೈರತಿ ಸುರೇಶ್
ಬೀದಿ ನಾಯಿಗಳ ಪ್ರದರ್ಶನ ಮಾಡಿ
ಜಿಲ್ಲೆಯಲ್ಲಿ ಡಾಗ್ ಅಡಾಪ್ಷನ್ (ನಾಯಿಗಳ ದತ್ತು ಸ್ವೀಕಾರ) ಕುರಿತು ಜಾಗೃತಿ ಮೂಡಿಸಬೇಕು. ಕೆಲವು ಜಿಲ್ಲೆಗಳಲ್ಲಿ ಬೀದಿ ನಾಯಿಗಳ ಡಾಗ್ ಶೋ ಮಾಡಲು ನೋಂದಣಿ ಮಾಡಿಕೊಂಡಿದ್ದಾರೆ, ಉಡುಪಿಯಲ್ಲಿಯೂ ಡಾಗ್ ಶೋ ಮಾಡಿದರೆ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿ ನಾಯಿಗಳನ್ನು ದತ್ತು ಸ್ವೀಕಾರ ಮಾಡಲು ಸಾಧ್ಯವಾಗುತ್ತದೆ ಎಂದು ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ಸೂಚಿಸಿದರು.
ಇದನ್ನೂ ಓದಿ: ಬೆಂಗಳೂರು- ಕನಕಪುರ ಹೆದ್ದಾರಿಯಲ್ಲಿ ಭೀಕರ ಅಪಘಾತ ; ಕಾರ್ನಲ್ಲಿದ್ದ ಮೂವರ ದುರ್ಮರಣ


