Asianet Suvarna News Asianet Suvarna News

ಶಿವಮೊಗ್ಗದಲ್ಲಿ ನಗರದಲ್ಲಿ 22 ಸಾವಿರ ಎಲ್‌ಇಡಿ ದೀಪ ಅಳವಡಿಕೆ: ಸಚಿವ ಭೈರತಿ ಬಸವರಾಜ್

ಸ್ಮಾರ್ಟ್‌ ಸಿಟಿಗೆ ಅಗತ್ಯವಾಗಿ ಬೇಕಾದ ಎಲ್ಲಾ ಸಹಕಾರವನ್ನು ರಾಜ್ಯಸರ್ಕಾರ ನೀಡಲಿದ್ದು ಶೀಘ್ರದಲ್ಲೇ ಶಿವಮೊಗ್ಗ ನಗರದಲ್ಲಿ 22 ಸಾವಿರ ಎಲ್‌ಇಡಿ ವಿದ್ಯುತ್ ದೀಪಗಳನ್ನು ಅಳವಡಿಸಲಾಗುವುದು ಎಂದು ನಗರಾಭಿವೃದ್ದಿ ಸಚಿವ ಭೈರತಿ ಬಸವರಾಜ್ ಹೇಳಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

22 thousands of LED Bulbs will be  installed soon in shivamogga City says minister Byrathi Basavaraj
Author
Shivamogga, First Published Jun 3, 2020, 8:49 AM IST

ಶಿವಮೊಗ್ಗ(ಜೂ.03): ನಗರದಲ್ಲಿ ಸ್ಮಾರ್ಟ್‌ ಸಿಟಿ ಕಾಮಗಾರಿಗಳನ್ನು ಚುರುಕುಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ನಿಗದಿತ ಅವಧಿ ಒಳಗಾಗಿ ಗುಣಮಟ್ಟದ ಕಾಮಗಾರಿ ನಡೆಸಲು ಸ್ಪಷ್ಟ ಸೂಚನೆ ನೀಡಲಾಗಿದೆ ಎಂದು ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜು ತಿಳಿಸಿದರು.ಅವರು ಮಂಗಳವಾರ ಸ್ಮಾರ್ಟ್‌ ಸಿಟಿ ಕಾಮಗಾರಿ ನಡೆಯುತ್ತಿರುವ ಸ್ಥಳ ಪರಿಶೀಲನೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಶಿವಮೊಗ್ಗ ಮಾದರಿ ನಗರವಾಗಿ ಅಭಿವೃದ್ಧಿಗೊಳ್ಳುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ನಗರದಲ್ಲಿರುವ ಎಲ್ಲಾ ಬೀದಿ ದೀಪಗಳನ್ನು ಬದಲಾಯಿಸಿ ಎಲ್‌ಇಡಿ ದೀಪಗಳನ್ನು ಅಳವಡಿಸಲಾಗುವುದು. ಇದಕ್ಕಾಗಿ ಪ್ರಥಮ ಹಂತದಲ್ಲಿ 22 ಸಾವಿರ ಎಲ್‌ಇಡಿ ದೀಪಗಳನ್ನು ಅಳವಡಿಸಲಾಗುತ್ತಿದ್ದು, ಟೆಂಡರ್‌ ಪ್ರಕ್ರಿಯೆ ಪೂರ್ಣಗೊಂಡಿದೆ. ಪಿಪಿಪಿ ಮಾದರಿ ಯೋಜನೆಯಿಂದಾಗಿ ವಿದ್ಯುತ್‌ ಗಣನೀಯ ಪ್ರಮಾಣದಲ್ಲಿ ಉಳಿತಾಯವಾಗಲಿದ್ದು, 7 ವರ್ಷಗಳ ಉಚಿತ ನಿರ್ವಹಣೆ ಇರಲಿದೆ ಎಂದು ವಿವರಿಸಿದರು.

ಅಕ್ರಮ ಸಕ್ರಮ:

ರಾಜ್ಯದ ಎಲ್ಲಾ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಅಕ್ರಮ ಕಟ್ಟಡಗಳ ಸಕ್ರಮಗೊಳಿಸುವ ಪ್ರಸ್ತಾವನೆಯನ್ನು ಮುಂದಿನ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗುವುದು. ಸಕ್ರಮಗೊಳಿಸುವ ಕುರಿತು ಸ್ಪಷ್ಟವಾದ ಮಾರ್ಗಸೂಚಿ ಸಿದ್ಧಪಡಿಸಲಾಗಿದ್ದು, ಸಂಪುಟದ ಅನುಮೋದನೆಯೊಂದಿಗೆ ಇದನ್ನು ಅನುಷ್ಟಾನಗೊಳಿಸಲಾಗುವುದು. ಅಕ್ರಮ ನಿರ್ಮಾಣಗಳ ಪಟ್ಟಿಯನ್ನು ಸಿದ್ಧಪಡಿಸಲು ಸಮೀಕ್ಷೆ ನಡೆಸಲು ಸೂಚಿಸಲಾಗಿದೆ. ನಿಗದಿತ ಸಮಯದ ಒಳಗಾಗಿ ಸಕ್ರಮೀಕರಣ ಪ್ರಕ್ರಿಯೆ ಪೂರ್ಣಗೊಳ್ಳಲಿದೆ ಎಂದು ಸಚಿವರು ಹೇಳಿದರು.

3 ದಿನ ರಿಹರ್ಸಲ್‌ ಬಳಿಕ ಭಕ್ತರಿಗೆ ತಿಮ್ಮಪ್ಪನ ದರ್ಶನ!

ಹಲವು ವರ್ಷಗಳಿಂದ ನೆನೆಗುದಿಗೆ ಬಿದ್ದಿರುವ ವಾಜಪೇಯಿ ಬಡಾವಣೆ ಸಮಸ್ಯೆಗೆ ಮುಕ್ತಿ ದೊರಕಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗಿದೆ. ಈ ಕುರಿತು ಈಗಾಗಲೇ ಅಡ್ವೋಕೇಟ್‌ ಜನರಲ್‌ ಅವರೊಂದಿಗೆ ಸಮಾಲೋಚನೆ ನಡೆಸಲಾಗಿದ್ದು, ಪ್ರಕರಣ ಹಿಂತೆಗೆದುಕೊಳ್ಳಲು ಮನವಿ ಮಾಡಲಾಗಿದೆ ಎಂದರು.

ಕಾಮಗಾರಿ ವೀಕ್ಷಣೆ:

ನಗರದ ಬಸ್‌ನಿಲ್ದಾಣದಿಂದ ಆಲ್ಕೋಳ ವೃತ್ತದವರೆಗೆ ನಡೆಯುತ್ತಿರುವ ಮಾದರಿ ರಸ್ತೆ, ವಿನೋಬಾ ನಗರದ ಪಾದಚಾರಿ ಕಾಮಗಾರಿ, ಪುರಲೆ ಒಳಚರಂಡಿ, ಲಕ್ಷ್ಮೀ ಥಿಯೇಟರ್‌ ವೃತ್ತ ಅಭಿವೃದ್ಧಿ ಕಾಮಗಾರಿ, ರಾಜೇಂದ್ರ ನಗರದಲ್ಲಿ ನಡೆಯುತ್ತಿರುವ ಉದ್ಯಾನವನ, ಒಳಾಂಗಣ ಕ್ರೀಡಾಂಗಣ ಸಮುಚ್ಛಯ, ಜಿಲ್ಲಾ ಪಂಚಾಯತ್‌ ಮುಂಭಾಗ ನೀರಿನ ಟ್ಯಾಂಕ್‌ ನಿರ್ಮಾಣ, ಬೊಮ್ಮನಕಟ್ಟೆಕೆರೆ ಅಭಿವೃದ್ಧಿ, ಆದಿಚುಂಚನಗಿರಿ ಬಳಿ ಸಮುಚ್ಛಯ ನಿರ್ಮಾಣ ಇತ್ಯಾದಿ ಅನೇಕ ಕಾಮಗಾರಿಗಳನ್ನು ಸಚಿವರು ವೀಕ್ಷಿಸಿದರು.

ಜನರ ಸಹಭಾಗಿತ್ವದಿಂದ ಯಶಸ್ವಿ:

ಜನರ ಸಹಭಾಗಿತ್ವ ಇದ್ದರೆ ಮಾತ್ರ ಯಾವುದೇ ಕಾಮಗಾರಿ ಯಶಸ್ವಿಯಾಗಲು ಸಾಧ್ಯವಿದೆ. ಬಹುತೇಕ ಎಲ್ಲಾ ಬಡಾವಣೆಗಳಲ್ಲಿ ಸುಂದರ ಉದ್ಯಾನವನಗಳನ್ನು ನಿರ್ಮಿಸಲಾಗುತ್ತಿದೆ. ಸ್ಥಳೀಯ ನಿವಾಸಿಗಳು ಸಂಘ ರಚಿಸಿ ಅವುಗಳ ಮೇಲುಸ್ತುವಾರಿ ನೋಡಿಕೊಳ್ಳಬೇಕು. ರಾಜೇಂದ್ರ ನಗರದಲ್ಲಿ ನೀರಿನ ಕಾಲುವೆಗೆ ತ್ಯಾಜ್ಯ ವಸ್ತುಗಳನ್ನು ಹಾಕದಂತೆ ಸ್ಥಳೀಯರೇ ಕ್ರಮ ಕೈಗೊಳ್ಳಬೇಕು. ಇಲ್ಲಿರುವ ಮನೆಗಳ ತ್ಯಾಜ್ಯ ನೀರು ನೇರವಾಗಿ ಕಾಲುವೆ ಸೇರುವಂತೆ ಸಂಪರ್ಕ ಕಲ್ಪಿಸಿದ್ದರೆ ಅದನ್ನು ತೆರವುಗೊಳಿಸಿ ನಿವಾಸಿಗಳಿಗೆ ಎಚ್ಚರಿಕೆ ನೀಡಬೇಕು ಎಂದು ಸಚಿವರು ಹೇಳಿದರು. ಮಳೆಗಾಲದಲ್ಲಿ ಎಲ್ಲಿಯೂ ನೀರು ಕಟ್ಟಿನಿಂತು ಕೃತಕ ನೆರೆ ಸೃಷ್ಟಿಯಾಗದಂತೆ ಮುನ್ನೆಚ್ಚರಿಕೆ ವಹಿಸಬೇಕು. ರಾಜಕಾಲುವೆ ಒತ್ತುವರಿಯಾಗಿದ್ದರೆ ಅದನ್ನು ನಿರ್ದಾಕ್ಷಿಣ್ಯವಾಗಿ ತೆರವುಗೊಳಿಸಲು ಅವರು ಜಿಲ್ಲಾಧಿಕಾರಿಗೆ ಸೂಚನೆ ನೀಡಿದರು.

ಉಸ್ತುವಾರಿ ಸಚಿವ ಕೆ.ಎಸ್‌.ಈಶ್ವರಪ್ಪ, ಸಂಸದ ಬಿ.ವೈ.ರಾಘವೇಂದ್ರ, ಮೇಯರ್‌ ಸುವರ್ಣಾ ಶಂಕರ್‌, ಪಾಲಿಕೆ ಆಯುಕ್ತ ಚಿದಾನಂದ ವಟಾರೆ ಇತರರು ಇದ್ದರು.
 

Follow Us:
Download App:
  • android
  • ios