ಕೊಳ್ಳುರು ಎಂ. ಗ್ರಾಮದಲ್ಲಿ 110/11 ಕೆವಿ ವಿದ್ಯುತ್‌ ಉಪಕೇಂದ್ರ ಉದ್ಘಾಟನೆ

ಯಾದಗಿರಿ(ಆ.12): ರಾಜ್ಯದಲ್ಲಿ ವಿದ್ಯುತ್‌ ನಿರ್ವಹಣೆಗೆ ವಿಶೇಷ ಯೋಜನೆ ಹಮ್ಮಿಕೊಂಡಿದ್ದು, ಕಲಬುರಗಿಯಲ್ಲಿ ಹಸಿರು ವಿದ್ಯುತ್‌ ಯೋಜನೆ ಅಡಿಯಲ್ಲಿ 500 ಮೆಗಾ ವ್ಯಾಟ್‌ ವಿದ್ಯುತ್‌ ಉತ್ಪಾದನೆಗೆ ಸೋಲಾರ್‌ ಪಾರ್ಕ್ ಸ್ಥಾಪನೆ ಮಾಡಲು ಈಗಾಗಲೇ ಸ್ಥಳ ಗುರುತಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಹಾಗೂ ಇಂಧನ ಖಾತೆ ಸಚಿವ ವಿ. ಸುನೀಲ್‌ಕುಮಾರ ಅವರು ಹೇಳಿದರು.

Add Asianetnews Kannada as a Preferred SourcegooglePreferred

ಮತಕ್ಷೇತ್ರದ ವ್ಯಾಪ್ತಿಯ ಕೊಳ್ಳುರು ಎಂ. ಗ್ರಾಮದಲ್ಲಿ ನಿರ್ಮಾಣವಾಗಿರುವ 110/11 ಕೆವಿ ವಿದ್ಯುತ್‌ ಉಪಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಾದ್ಯಂತ ಗುಣ ಮಟ್ಟದ ಮತ್ತು ನಿರಂತರ ವಿದ್ಯುತ್‌ ಒದಗಿಸಲು ಉಪವಿಭಾಗ ತೆರೆಯಲಾಗಿದೆ. ಅನೇಕ ಕಡೆ ಸಬ್‌ ಸ್ಟೇಷನ್‌ ನಿರ್ಮಾಣಗೊಂಡಿದ್ದು, ನಿರಂತರ ವಿದ್ಯುತ್‌ ಒದಗಿಸಲಾಗುತ್ತಿದೆ. ಸ್ಥಳೀಯ ಶಾಸಕರು ಮತ್ತು ಸಾರ್ವಜನಿಕರ ಬೇಡಿಕೆಯಂತೆ ಈ ಭಾಗದಲ್ಲಿ ಈ ಉಪಕೇಂದ್ರ ಸ್ಥಾಪನೆ ಮಾಡಲಾಗಿದೆ ಎಂದರು.
ಸಮರ್ಪಕ ಹಾಗೂ ನಿರಂತರ ವಿದ್ಯುತ್‌ ಪೂರೈಕೆ ಮಾಡಬೇಕು ಎಂದು ರಾಜ್ಯದಲ್ಲಿ ಹೊಸದಾಗಿ 237 ಕಡೆಗಳಲ್ಲಿ ನೂತನ ವಿದ್ಯುತ್‌ ಉಪ ಕೇಂದ್ರಗಳನ್ನು ಸ್ಥಾಪಿಸಲಾಗುತ್ತಿದೆ. ಆದ್ಯತೆ ಮೇರೆಗೆ ಉಪ ಕೇಂದ್ರ ಸ್ಥಾಪನೆ ಕಾರ್ಯ ನಡೆಯುತ್ತಿದೆ. ಯಾವುದೇ ಕಾರಣಕ್ಕೂ ಗ್ರಾಹಕರಿಗೆ ಮತ್ತು ರೈತರಿಗೆ ವಿದ್ಯುತ್‌ ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಬ್ಲೂಟೂತ್ ಅಭ್ಯರ್ಥಿಗಳಿಗೆ KPSC ಶಾಶ್ವತ ಡಿಬಾರ್ !

ಬೊಮ್ಮಾಯಿ ನೇತೃತ್ವದ ಸರಕಾರದ ಒಂದು ವರ್ಷದ ಅವ​ಧಿಯಲ್ಲಿ ಹಳ್ಳಿಗಳಲ್ಲಿ ಟಿಸಿ ( ವಿದ್ಯುತ್‌ ವರ್ಧಕ) ಸುಟ್ಟ24 ಗಂಟೆಯೊಳಗೆ ಬದಲಾವಣೆ ಮಾಡುವ ಮೂಲಕ ರೈತರ ನೆರವಿಗೆ ಧಾವಿಸಿದೆ. ಇದರ ಫಲವಾಗಿ ನೌಕರರ ಸಹಕಾರದಿಂದ ಇಲ್ಲಿಯವರೆಗೂ 88 ಸಾವಿರ ಟಿಸಿ ಬದಲಾವಣೆ ಮಾಡಲಾಗಿದೆ. ಬೆಳಕು ಯೋಜನೆಯಡಿಯಲ್ಲಿ ವಿದ್ಯುತ್‌ ರಹಿತ 29 ಸಾವಿರ ಮನೆಗಳಿಗೆ ವಿದ್ಯುತ್‌ ನೀಡಲಾಗಿದೆ. ಇಂಧನ ಇಲಾಖೆಯ ಜನಸ್ನೇಹಿ ಕಾರ್ಯಕ್ರಮಗಳನ್ನು ರೂಪಿಸಿ, ಪ್ರಗತಿಯತ್ತ ಹೆಜ್ಜೆ ಹಾಕುತ್ತಿದೆ ಎಂದವರು ವಿವರಿಸಿದರು. ಶಾಸಕ ವೆಂಕಟರೆಡ್ಡಿಗೌಡ ಮುದ್ನಾಳ ಮಾತನಾಡಿ, ವಡಗೇರಾ ತಾಲೂಕಿಗೆ ವಿದ್ಯುತ್‌ ಉಪ ವಿಭಾಗ ಮಂಜೂರು ಮಾಡುವಂತೆ ಬೇಡಿಕೆಯಿಟ್ಟರು.

ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ ಅಧ್ಯಕ್ಷ ಚಂದು ಪಾಟೀಲ್‌, ಅಲೆಮಾರಿ, ಅರೆ ಅಲೆಮಾರಿ ನಿಗಮದ ಅಧ್ಯಕ್ಷ ದೇವೇಂದ್ರನಾಥ ನಾದ, ನಿಗಮ ಎಂಡಿ ರಾಹುಲ್‌, ಯಾದಗಿರಿ ನಗರಸಭೆ ಅಧ್ಯಕ್ಷ ಸುರೇಶ ಅಂಬಿಗೇರ, ಗ್ರಾಮ ಪಂಚಾಯ್ತಿ ಅಧ್ಯಕ್ಷೆ ಚಂದ್ರಮ್ಮ ಸೇರಿದಂತೆ ಇತರರಿದ್ದರು.