ಹಲವು ವರ್ಷಗಳಿಂದ ಬಾಕಿ ಇದ್ದ ನೌಕರರ 5,966 ಪ್ರಕರಣಗಳನ್ನು ಇತ್ಯರ್ಥಗೊಳಿಸಲಾಗಿದೆ. ಇದರಿಂದ ವಾಯುವ್ಯ ಸಾರಿಗೆ ನೌಕರರು ನಿರಾಳರಾಗಿದ್ದಾರೆ.


ಹುಬ್ಬಳ್ಳಿ, (ಜುಲೈ.18): ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯು ತನ್ನ ನೌಕರರ ವಿರುದ್ಧ ಹಲವು ವರ್ಷಗಳಿಂದ ಬಾಕಿ ಉಳಿದಿದ್ದ 5,966 ಪ್ರಕರಣಗಳನ್ನು ಇತ್ಯರ್ಥಪಡಿಸಿದೆ. ಆ ಮೂಲಕ. ಸಂಸ್ಥೆಯ ನೌಕರರು ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ತಮ್ಮ‌ ಮೇಲಿನ ಪ್ರಕರಣಗಳಿಂದ ಯಾವಾಗ ಮುಕ್ತಿ ಸಿಗುತ್ತೋ ಎಂಬ ಚಿಂತೆಯಲ್ಲೇ ಕೆಲಸ‌ ದೂಡುತ್ತಿದ್ದ ನೌಕರರನ್ನು ನಿರಾಳಗೊಳಿಸಿದೆ.

Add Asianetnews Kannada as a Preferred SourcegooglePreferred

ಹೌದು.. ಸಂಸ್ಥೆಯ 9 ವಿಭಾಗಗಳು, 51 ಘಟಕಗಳು, ಪ್ರಾದೇಶಿಕ ತರಬೇತಿ ಕೇಂದ್ರ ಹಾಗೂ ಪ್ರಾದೇಶಿಕ ಕಾರ್ಯಾಗಾರದಲ್ಲಿ ತರಬೇತಿ/ಪರೀಕ್ಷಾರ್ಥಿ ಹಾಗೂ ಕಾಯಂ ಆಗಿ ಕೆಲಸ ಮಾಡುತ್ತಿರುವ ಚಾಲಕರು, ಚಾಲಕರು/ನಿರ್ವಾಹಕರು ಹಾಗೂ ತಾಂತ್ರಿಕ ಸಿಬ್ಬಂದಿ ವಿರುದ್ಧ ಒಟ್ಟು 6,858 ಪ್ರಕರಣಗಳು ಇತ್ಯರ್ಥವಾಗದೆ ಬಾಕಿ ಉಳಿದಿದ್ದವು. ಈ ಪೈಕಿ ಕೆಲವು, ಇಲಾಖೆ ಮತ್ತು ಕೋರ್ಟ್ ವಿಚಾರಣೆ ಹಂತದಲ್ಲಿಯೂ ಇದ್ದವು.

ವಾರದಲ್ಲಿ ಹುಬ್ಬಳ್ಳಿ-ಅಂಕೋಲಾ ರೈಲ್ವೆ ಸಮಸ್ಯೆ ಪರಿಹಾರ: ಸಿಎಂ ಬೊಮ್ಮಾಯಿ

ಅತ್ಯಂತ ಗಂಭೀರವಾದವುಗಳೇನೂ ಅಲ್ಲದ ಬಹುತೇಕ ಈ ಸಣ್ಣ ಪ್ರಕರಣಗಳನ್ನು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಎಸ್. ಭರತ್ ಅವರು, ತಾವು ಅಧಿಕಾರ ವಹಿಸಿಕೊಂಡ ಕೆಲ ದಿನಗಳಲ್ಲಿ ಇವುಗಳಿಗೆ ಮುಕ್ತಿ ನೀಡಿದ್ದಾರೆ. ಅದರಂತೆ, ನಿಗದಿತ ಕಾಲಮಿತಿಯಲ್ಲಿ ಪ್ರಕರಣಗಳನ್ನು ಇತ್ಯರ್ಥಪಡಿಸುವಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಹಾಗೂ ಕಾರ್ಯ ವ್ಯವಸ್ಥಾಪಕರಿಗೆ ಸೂಚನೆ ನೀಡಿ, ಪ್ರಕರಣಗಳಿಗೆ ಅಂತ್ಯ ಹಾಡಿದ್ದಾರೆ.

ನೌಕರರು ಯಾವುದೇ ಕಿರಿಕಿರಿ ಇಲ್ಲದೆ ಕೆಲಸ ಮಾಡುವಂತಾಗಬೇಕು. ಎಲ್ಲಾ ತಪ್ಪುಗಳು ಉದ್ದೇಶಪೂರ್ವಕವಾಗಿ ಆಗಿರುವುದಿಲ್ಲ. ಆ ನಿಟ್ಟಿನಲ್ಲಿ ಹಲವು ವರ್ಷಗಳಿಂದ ಬಾಕಿ ಉಳಿದಿದ್ದ ಪ್ರಕರಣಗಳನ್ನು ಇತ್ಯರ್ಥಪಡಿಸಲು ಕ್ರಮ ಕೈಗೊಳ್ಳಲಾಯಿತು. ಒಟ್ಟು ಪ್ರಕರಣಗಳ ಪೈಕಿ, 2,778 ಶಿಸ್ತು ಮತ್ತು 4,080 ಗೈರು ಹಾಜರಾತಿ ಪ್ರಕರಣಗಳನ್ನು ಬಗೆಹರಿಸಲಾಗಿದೆ ಎಂದು ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಭರತ್ ತಿಳಿಸಿದ್ದಾರೆ.