ರಾಜ್ಯದ 847 ವಸತಿ ಶಾಲೆಗಳಲ್ಲಿ ಕಳಪೆ ಗುಣಮಟ್ಟದ ಧಾನ್ಯಗಳನ್ನು ಪೂರೈಕೆ ಮಾಡುವ ಮೂಲಕ ನೂರಾರು ಕೋಟಿ ರೂಪಾಯಿಗಳ ಬೃಹತ್ ಭ್ರಷ್ಟಾಚಾರ ನಡೆದಿದೆ ಎಂದು ಎಂಎಲ್‌ಸಿ ರವಿಕುಮಾರ್ ಆರೋಪಿಸಿದ್ದಾರೆ. ಈ ಹಗರಣದಲ್ಲಿ ಸಚಿವರು ಮತ್ತು ಹಿರಿಯ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಅವರು ಗಂಭೀರ ಆರೋಪ ಮಾಡಿದ್ದಾರೆ.

ರಾಜ್ಯದ ಬಡ ಹಾಗೂ ಶೋಷಿತ ವರ್ಗದ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ನಿರ್ಮಿಸಲಾಗಿರುವ ವಸತಿ ಶಾಲೆಗಳಲ್ಲಿ ಬೃಹತ್ ಮಟ್ಟದ ಆಹಾರ ಮತ್ತು ಟೆಂಡರ್ ಭ್ರಷ್ಟಾಚಾರ ನಡೆದಿದೆ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ರವಿಕುಮಾರ್ ಅವರು ರಾಯಚೂರಿನಲ್ಲಿ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಈ ಕುರಿತು ಕಂಪ್ಲೀಟ್‌ ಸ್ಟೋರಿ ಇಲ್ಲಿದೆ.

847 ವಸತಿ ಶಾಲೆಗಳಲ್ಲಿ ಕಳಪೆ ಧಾನ್ಯ ಪೂರೈಕೆ!

ಮಾಧ್ಯಮಗಳೊಂದಿಗೆ ಮಾತನಾಡಿದ ರವಿಕುಮಾರ್, ಬಡ ವಿದ್ಯಾರ್ಥಿಗಳ ಶಿಕ್ಷಣ ಮತ್ತು ಆರೋಗ್ಯಕ್ಕೆ ಯಾವುದೇ ತೊಂದರೆ ಆಗಬಾರದು ಎನ್ನುವ ಒಳ್ಳೆಯ ಉದ್ದೇಶದಿಂದ ಸರ್ಕಾರಿ ಹಾಸ್ಟೆಲ್‌ಗಳನ್ನು ತೆರೆಯಲಾಗಿದೆ. ಆದರೆ, ರಾಜ್ಯದ ಸುಮಾರು 847 ವಸತಿ ಶಾಲೆಗಳಲ್ಲಿ ಅತ್ಯಂತ ಕಳಪೆ ಮಟ್ಟದ ಆಹಾರ ಪೂರೈಕೆಯಾಗುತ್ತಿರುವುದನ್ನು ನಾನು ಖುದ್ದಾಗಿ ಕಣ್ಣಾರೆ ನೋಡಿದ್ದೇನೆ" ಎಂದು ಆಕ್ರೋಶ ಹೊರಹಾಕಿದರು. ತೀರಾ ಕಡಿಮೆ ದರದ, ಅತ್ಯಂತ ಕಳಪೆ ಗುಣಮಟ್ಟದ ಧಾನ್ಯಗಳನ್ನು ಸರಬರಾಜು ಮಾಡಲಾಗುತ್ತಿದ್ದು, ಇದನ್ನು ಸೇವಿಸುವ ಪಟ್ಟಭದ್ರ ಹಿತಾಸಕ್ತಿಗಳ ದುರಾಸೆಯಿಂದ ವಿದ್ಯಾರ್ಥಿಗಳ ಆರೋಗ್ಯ ಸಂಪೂರ್ಣವಾಗಿ ಹಾಳಾಗುತ್ತಿದೆ. ಇದರಿಂದ ಮಕ್ಕಳ ನಿತ್ಯದ ಶಿಕ್ಷಣಕ್ಕೂ ತೀವ್ರ ಅಡಚಣೆ ಉಂಟಾಗುತ್ತಿದೆ ಎಂದರು.

ನೂರಾರು ಕೋಟಿ ಲೂಟಿ; ಸಚಿವರು, ಅಧಿಕಾರಿಗಳ ಶಾಮೀಲು?!

ಏಷ್ಯಾನೆಟ್ ಸುವರ್ಣನ್ಯೂಸ್ ನಡೆಸಿದ ಬೃಹತ್ ತನಿಖಾ ವರದಿಯನ್ನು ಉಲ್ಲೇಖಿಸಿದ ಅವರು, ವಸತಿ ಶಾಲೆಗಳ ಆಹಾರ ಪೂರೈಕೆ ಪ್ರಕ್ರಿಯೆಯಲ್ಲಿ ನೂರಾರು ಕೋಟಿ ರೂಪಾಯಿ ಬೃಹತ್ ಲೂಟಿ ನಡೆದಿದೆ ಎಂಬುದು ಈಗ ಸಾಬೀತಾಗಿದೆ. ಈ ಕೋಟ್ಯಂತರ ರೂಪಾಯಿ ಭ್ರಷ್ಟಾಚಾರದ ಜಾಲದಲ್ಲಿ ಇಲಾಖೆಯ ಸಚಿವರು, ಹಿರಿಯ ಅಧಿಕಾರಿಗಳು ಹಾಗೂ ಹಾಸ್ಟೆಲ್ ವಾರ್ಡನ್‌ಗಳು ಶಾಮೀಲಾಗಿರುವ ಶಂಕೆ ವ್ಯಕ್ತವಾಗುತ್ತಿದೆ" ಎಂದು ಗಂಭೀರ ಆರೋಪ ಮಾಡಿದರು. ಕ್ರೈಸ್ಟ್ ಮತ್ತು ವಿವಿಧ ವಸತಿ ಶಾಲೆಗಳಲ್ಲಿ ಮಕ್ಕಳಿಗೆ ಗುಣಮಟ್ಟದ ಆಹಾರವೂ ಸಿಗುತ್ತಿಲ್ಲ, ಸೂಕ್ತ ವಸತಿ ವ್ಯವಸ್ಥೆಯೂ ಸಿಗುತ್ತಿಲ್ಲ. ಕಟ್ಟಡಗಳ ಮೂಲಸೌಕರ್ಯದಿಂದ ಹಿಡಿದು ನಿತ್ಯದ ಊಟದವರೆಗೆ ಪ್ರತಿಯೊಂದರಲ್ಲೂ ಅಕ್ರಮವೆಸಗಲಾಗುತ್ತಿದೆ.

ಸರ್ಕಾರದ ವಿರುದ್ಧ ಜನಾಕ್ರೋಶ!

ಇಡೀ ವ್ಯವಸ್ಥೆಯನ್ನು ಹಾಳುಗೆಡವಿರುವುದು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರ" ಎಂದು ನೇರವಾಗಿ ವಾಗ್ದಾಳಿ ನಡೆಸಿದ ಅವರು, ವಿದ್ಯಾರ್ಥಿಗಳಿಗೆ ಸಿಗಬೇಕಾದ ಮೂಲಭೂತ ಅನುಕೂಲಗಳು ಮತ್ತು ಗುಣಮಟ್ಟದ ಶಿಕ್ಷಣ ತಲುಪುತ್ತಿಲ್ಲ. ಬಡ ಮಕ್ಕಳ ಹೊಟ್ಟೆಗೆ ಹೊಡೆಯುತ್ತಿರುವ ಈ ಆಡಳಿತದ ವೈಫಲ್ಯಕ್ಕೆ ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಸರ್ಕಾರದ ವಿರುದ್ಧ ಶಾಪ ಹಾಕುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸರಕಾರ ತಕ್ಷಣವೇ ಈ ಬಗ್ಗೆ ಉನ್ನತ ಮಟ್ಟದ ತನಿಖೆ ನಡೆಸಿ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.