ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಮತ್ತು ತೆಂಗು ಬೆಳೆಗಾರರ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆದ ರಾಜ್ ಭವನ್ ಚಲೋ ಕಾರ್ಯಕ್ರಮದಲ್ಲಿ ತಿಪಟೂರಿನ ರೈತ ಮುಖಂಡರುಗಳು ಭಾಗವಹಿಸಿ ಕೇಂದ್ರ ಸರ್ಕಾರ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 20 ಸಾವಿರ ರು. ಘೋಷಣೆ ಮಾಡಬೇಕು ಹಾಗೂ ರಾಜ್ಯ ಸರ್ಕಾರ 5 ಸಾವಿರ ರು. ಪ್ರೋತ್ಸಾಹ ಧನ ನೀಡಬೇಕೆಂದು ಒತ್ತಾಯಿಸಿ ರೈತರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಯಿತು.

ತಿಪಟೂರು : ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಸಂಯುಕ್ತ ಹೋರಾಟ ಕರ್ನಾಟಕ ಮತ್ತು ತೆಂಗು ಬೆಳೆಗಾರರ ಹೋರಾಟ ಸಮಿತಿಯ ನೇತೃತ್ವದಲ್ಲಿ ನಡೆದ ರಾಜ್ ಭವನ್ ಚಲೋ ಕಾರ್ಯಕ್ರಮದಲ್ಲಿ ತಿಪಟೂರಿನ ರೈತ ಮುಖಂಡರುಗಳು ಭಾಗವಹಿಸಿ ಕೇಂದ್ರ ಸರ್ಕಾರ ಕೊಬ್ಬರಿಗೆ ಕನಿಷ್ಠ ಬೆಂಬಲ ಬೆಲೆ 20 ಸಾವಿರ ರು. ಘೋಷಣೆ ಮಾಡಬೇಕು ಹಾಗೂ ರಾಜ್ಯ ಸರ್ಕಾರ 5 ಸಾವಿರ ರು. ಪ್ರೋತ್ಸಾಹ ಧನ ನೀಡಬೇಕೆಂದು ಒತ್ತಾಯಿಸಿ ರೈತರ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಲಾಯಿತು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆಯ ಜಿಲ್ಲಾ ಸಂಚಾಲಕ ಎಸ್.ಎನ್. ಸ್ವಾಮಿ ಮಾತನಾಡಿ, ದಿನದಿಂದ ದಿನಕ್ಕೆ ಕೊಬ್ಬರಿ ಬೆಲೆ ತೀವ್ರವಾಗಿ ಕುಸಿಯುತ್ತಿದೆ. ತೆಂಗು ಬೆಳೆಗಾರರು ಸಂಕಷ್ಟದಲ್ಲಿರುವ ಇಂದಿನ ಸಂದರ್ಭದಲ್ಲಿ ಅವರ ಸಮಸ್ಯೆಯನ್ನು ಮತ್ತು ಹಕ್ಕೊತ್ತಾಯಗಳನ್ನು ತಮ್ಮ ಗಮನಕ್ಕೆ ತರಲು ಸಂಯುಕ್ತ ಹೋರಾಟ ಕರ್ನಾಟಕ ಬಯಸುತ್ತದೆ ಎಂದರು.

ವಿಶ್ವದಾದ್ಯಂತ ಪ್ರಸಿದ್ಧವಾಗಿರುವ ಉಂಡೆ ಕೊಬ್ಬರಿಯ ಬೆಲೆ ಕ್ವಿಂಟಲ್‌ಗೆ ರು.8 ಸಾವಿರಕ್ಕೆ ಕುಸಿದಿದೆ. ರಾಜ್ಯದಲ್ಲಿ 2.18 ಲಕ್ಷ ಮೆಟ್ರಿಕ್ ಟನ್ ಉತ್ಪಾದನೆಯಾಗುವ ಕೊಬ್ಬರಿಯನ್ನು ನಂಬಿಕೊಂಡು ಸಾವಿರಾರು ಕುಟುಂಬಗಳು ಜೀವನ ನಡೆಸುತ್ತಿವೆ. ರಾಜ್ಯ ಸರ್ಕಾರ ಚಳುವಳಿಯ ಒತ್ತಡದಿಂದ ರು.1250 ಪ್ರೋತ್ಸಾಹ ಧನ ನೀಡಿತಾದರೂ ಅದೂ ಅನ್ವಯವಾಗಿಲ್ಲ. ಹಾಗಾಗಿ ಕೊಬ್ಬರಿ ಖರೀದಿಯನ್ನು ಮುಂದುವರೆಸದಿದ್ದರೆ ರೈತರಿಗೆ ಯಾವ ಅನುಕೂಲವೂ ಆಗುವುದಿಲ್ಲ. ಕಳೆದ ಐದಾರು ವರ್ಷಗಳಿಂದ ಒಣ ಬರ ಮತ್ತು ಹಸಿ ಬರಗಳಿಂದ ತೆಂಗು ಬೆಳೆಗಾರರು ನಷ್ಟ ಅನುಭವಿಸಿದರು. ಜೊತೆಗೆ ಕಪ್ಪು ಮತ್ತು ಕೆಂಪು ಮೂತಿ ಕೀಟಗಳ ಬಾಧೆ, ಬೊಡ್ಡೆ ರಸ ಸೋರುವ ರೋಗ, ಕಪ್ಪು ಚುಕ್ಕೆ ರೋಗ, ಗರಿ ಉದುರುವ ರೋಗಗಳಿಗೆ ತೆಂಗಿನಮರಗಳು ಬಲಿಯಾಗುತ್ತಿವೆ. ಇದರಿಂದ ತೆಂಗು ಬೆಳೆಗಾರರು ತೀವ್ರ ತೊಂದರೆಗಳನ್ನು ಅನುಭವಿಸುತ್ತಿದ್ದಾರೆ. ಕೊಬ್ಬರಿ ಖರೀದಿ ಕೇಂದ್ರ ನಫೆಡ್‌ನ್ನು ಏಕಾಏಕಿ ಮುಚ್ಚಿರುವ ಕಾರಣ ರೈತರಿಗೆ ದಿಕ್ಕೇ ತೋಚದಂತಾಗಿದೆ. ಸರ್ಕಾರ ರೈತರ ಕಷ್ಟವನ್ನು ಅರ್ಥಮಾಡಿಕೊಂಡು ಕ್ವಿಂಟಲ್ ಕೊಬ್ಬರಿಗೆ 20ಸಾವಿರ ರು. ಘೋಷಣೆ ಮಾಡುವ ಮೂಲಕ ನಫೆಡ್ ಕೇಂದ್ರವನ್ನು ಶೀಘ್ರವಾಗಿ ತೆರೆಯಬೇಕೆಂದು ಒತ್ತಾಯಿಸಿದರು.

ರೈತ ಮುಖಂಡರುಗಳಾದ ನವೀನ್‌ಕುಮಾರ್, ರಾಜಮ್ಮ ಮತ್ತಿತರರಿದ್ದರು.