ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರು ಹಾಗೂ ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿ ಅಡಿ ತಪ್ಪು ಮಾಹಿತಿ ನೀಡಿ ನಂತರ ಪರಿಷ್ಕರಣೆ ಮಾಡಿಕೊಂಡಿರುವ ಪ್ರಕರಣಗಳಲ್ಲಿ ತೆರಿಗೆ ವಸೂಲಿ ಪ್ರಮಾಣ ಹೆಚ್ಚಿಸಬೇಕು. ಅದಕ್ಕಾಗಿ ಆಯಾ ವಲಯ ವ್ಯಾಪ್ತಿಯಲ್ಲಿಯೇ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು: ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ 

ಬೆಂಗಳೂರು(ನ.12):  ಹೆಚ್ಚಿನ ಪ್ರಮಾಣದಲ್ಲಿ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ, ಬಾಕಿ ತೆರಿಗೆ ವಸೂಲಿ ಮಾಡುವಂತೆ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಸ್ತಿ ತೆರಿಗೆ ಸಂಗ್ರಹ ಸೇರಿ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ಸೋಮವಾರ ನಡೆಸಿದ ಸಭೆಯಲ್ಲಿ ಮಾತನಾಡಿದ ಅವರು, ಹೆಚ್ಚಿನ ಪ್ರಮಾಣದಲ್ಲಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರು ಹಾಗೂ ಸ್ವಯಂ ಘೋಷಿತ ಆಸ್ತಿ ತೆರಿಗೆ ಪದ್ಧತಿ (ಎಸ್‌ಎಎಸ್) ಅಡಿ ತಪ್ಪು ಮಾಹಿತಿ ನೀಡಿ ನಂತರ ಪರಿಷ್ಕರಣೆ ಮಾಡಿಕೊಂಡಿರುವ ಪ್ರಕರಣಗಳಲ್ಲಿ ತೆರಿಗೆ ವಸೂಲಿ ಪ್ರಮಾಣ ಹೆಚ್ಚಿಸಬೇಕು. ಅದಕ್ಕಾಗಿ ಆಯಾ ವಲಯ ವ್ಯಾಪ್ತಿಯಲ್ಲಿಯೇ ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಹೇಳಿದರು.

17 ವರ್ಷಗಳಿಂದ ವಿಧಾನಸೌಧ, ವಿಕಾಸಸೌಧದ ಆಸ್ತಿ ಶುಲ್ಕ ಬಾಕಿ!

ನ. 30ಕ್ಕೆ ಒಟಿಎಸ್ ಮುಕ್ತಾಯ: 

ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದು ಬಾರಿ ಪರಿಹಾರ (ಒಟಿಎಸ್) ಯೋಜನೆ ಅಡಿ ಆಸ್ತಿ ತೆರಿಗೆ ಬಾಕಿ ಪಾವತಿಸುವವರಿಗೆ ಬಡ್ಡಿ ಮತ್ತು ದಂಡ ಮನ್ನಾ ಮಾಡಲಾಗುತ್ತಿದೆ. ಈ ಯೋಜನೆ ನ.30ಕ್ಕೆ ಮುಕ್ತಾಯವಾಗಲಿದೆ. ಹೀಗಾಗಿ ಇದರ ಬಗ್ಗೆ ಸುಸ್ತಿದಾರರಲ್ಲಿ ಹೆಚ್ಚಿನ ಅರಿವು ಮೂಡಿಸಬೇಕು. ಅಲ್ಲದೆ, ಡಿ.1ರಿಂದ ಅವರು ಪಾವತಿಸಬೇಕಿರುವ ಬಾಕಿ ತೆರಿಗೆ ದುಪ್ಪಟ್ಟಾಗಲಿದೆಎಂಬುದನ್ನೂ ತಿಳಿಸಬೇಕು. ಅದಕ್ಕಾಗಿ ವಲಯವಾರು ಕ್ರಮ ಕೈಗೊಳ್ಳಬೇಕೆಂದು ಮುಖ್ಯ ಆಯುಕ್ತರು ತಿಳಿಸಿದರು. 

ಈ ವೇಳೆ ವಿಶೇಷ ಆಯುಕ್ತರಾದ ಮುನೀಶ್ ಮೌನ್ಸಿಲ್, ಸುರಳ್ಳರ್ ವಿಕಾಸ್ ಕಿಶೋರ್, ಡಾ. ಕೆ.ಹರೀಶ್‌ ಕುಮಾರ್, ಅವಿನಾಶ್ ಮೆನನ್ ರಾಜೇಂದ್ರನ್, ಪ್ರೀತಿ ಗೆಲ್ಲೋಟ್ ಇತರರಿದ್ದರು.